ಲಿಂಗಾಯತರಿಗೆ ಕಾಂಗ್ರೆಸ್ ಮಹಾ ದ್ರೋಹ ಮಾಡಿದೆ: ಈಶ್ವರಪ್ಪ
ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಲಿಂಗಾಯತ ಅಸ್ತ್ರವನ್ನು ಮರು ಪ್ರಯೋಗ ಮಾಡಿದ್ದಾರೆ. ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಈಗ ಅವರಿಗೇ ಉಲ್ಟಾ ಹೊಡೆಯುತ್ತಿದ್ದು, ಕಮಲ ಪಡೆಗೆ ಭರ್ಜರಿ ಅಸ್ತ್ರ ಸಿಕ್ಕಂತಾಗಿದೆ. ಇನ್ನು ಇದೇ ವೇಳೆ ಮಾಜಿ ಡಿಸಿಎಂ ಕೆ.ಎಸ್. ಈಶ್ವಪ್ಪ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಮಾತನಾಡಿರುವ ಕೆ.ಎಸ್.ಈಶ್ವರಪ್ಪ, ಲಿಂಗಾಯತರಿಗೆ ಕಾಂಗ್ರೆಸ್ ಮಾಡಿದಷ್ಟು ದ್ರೋಹ ಯಾರೂ ಮಾಡಿಲ್ಲ ಎಂದಿದ್ದಾರೆ. ಈ ಮೂಲಕ ಲಿಂಗಾಯತ ಅಸ್ತ್ರ ಪ್ರಯೋಗಕ್ಕೆ ಈಶ್ವರಪ್ಪ ಕೂಡ ಎಂಟ್ರಿಯಾಗಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಮತ್ತೊಂದು ಕಡೆ ಲಿಂಗಾಯತ ಸಮುದಾಯವನ್ನು ಒಡೆಯಲು ಮುಂದಾಗಿ ಅವರ ಶಾಪಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನವನ್ನು ಕಳೆದುಕೊಂಡರು ಎಂದು ಟೀಕಿಸಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಈಗ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ವೇದಿಕೆ ಒದಗಿಸಿದಂತಾಗಿದೆ.

'ವರುಣಾದಲ್ಲಿ ಸಿದ್ದರಾಮಯ್ಯ ಅನುಭವಿಸ್ತಾರೆ'
ಅಂದಹಾಗೆ ಲಿಂಗಾಯತ ಸಮುದಾಯವನ್ನು ಒಡೆದು ಛಿದ್ರ ಮಾಡಿದರು. ಆ ಶಾಪಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನ ಕೂಡ ಕಳೆದುಕೊಳ್ಳುವ ಪರಿಸ್ಥಿತಿ ಬಂತು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರವನ್ನೂ ಕಳೆದುಕೊಂಡಿತ್ತು. ಈಗಲೂ ಲಿಂಗಾಯತ ಸಮಾಜ ಟೀಕಿಸಲು ಸಿದ್ದರಾಮಯ್ಯ ಮುಂದಾಗಿದ್ದು ಸಿದ್ದರಾಮಯ್ಯ ಮಾಡಿದ ತಪ್ಪನ್ನು ವರುಣಾದಲ್ಲಿ ಅನುಭವಿಸುತ್ತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ವಿಪಕ್ಷ ಸ್ಥಾನವನ್ನೂ ಕಳೆದುಕೊಳ್ಳುತ್ತದೆ. ರಾಜ್ಯದ ಜನ ಜಾತಿ ರಾಜಕಾರಣಕ್ಕೆ ಎಂದೆಂದಿಗೂ ಬೆಲೆ ಕೊಡುವುದಿಲ್ಲ ಎಂದಿದ್ದಾರೆ.
ವರುಣಾದಲ್ಲಿ ಬಿಜೆಪಿ ರಣತಂತ್ರ?
ಚುನಾವಣೆ ಕಾವು ಕ್ಷಣಕ್ಷಣಕ್ಕೂ ಏರುತ್ತಿದೆ. ಹೈವೋಲ್ಟೇಜ್ ಕ್ಷೇತ್ರಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ವರುಣಾ ಮೇಲೆ ದೇಶದ ಗಮನ ನೆಟ್ಟಿದೆ. ಈ ಹೊತ್ತಲ್ಲೇ ಮೈಸೂರು ಪ್ರಚಾರ ಅಖಾಡಕ್ಕೆ ಎಂಟ್ರಿಕೊಟ್ಟಿರುವ ಬಿ.ವೈ. ವಿಜಯೇಂದ್ರ ಪ್ರಚಾರ ಶುರು ಮಾಡಿದ್ದರು. ಈ ಮಧ್ಯೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಸೋಲಿಗೆ ರಣತಂತ್ರ ರೂಪಿಸುತ್ತಿದ್ದಾರೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲ್ಲಲೇಬಾರದು ಎಂದು ಪಣತೊಟ್ಟಿದ್ದಾರೆ. ಇದೇ ಸಮಯಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಅವರಿಗೆ ಉಲ್ಟಾ ಹೊಡೆಯುತ್ತಿದೆ.
ಲಿಂಗಾಯತ ಅಸ್ತ್ರಕ್ಕೆ ಪ್ರತ್ಯಸ್ತ್ರ!
ಸಿದ್ದರಾಮಯ್ಯ ವಿರುದ್ಧ ಅಭ್ಯರ್ಥಿ ಆಯ್ಕೆಯ ಸಂದರ್ಭದಲ್ಲೂ ಮಾಸ್ಟರ್ ಪ್ಲ್ಯಾನ್ ಮಾಡಿತ್ತು ಬಿಜೆಪಿ. ಇದೇ ಕಾರಣಕ್ಕೆ ವರುಣಾದಲ್ಲಿ ಲಿಂಗಾಯತ ಅಸ್ತ್ರ ಬಳಸುವುದಕ್ಕೂ ಮುಂದಾಗಿತ್ತು. ಸಚಿವ ವಿ. ಸೋಮಣ್ಣ ಮಾಜಿ ಸಿಎಂ ಸಿದ್ದರಾಮಯ್ಯ ಎದುರಾಳಿ ಆಗಿದ್ದಾರೆ. ಇದರ ಜೊತೆಗೆ ಲಿಂಗಾಯತ ಸಮುದಾಯದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಆ ಹೇಳಿಕೆಯನ್ನೇ ಹೈಲೈಟ್ ಮಾಡಿ ಹೊಸ ಅಸ್ತ್ರ ರೂಪಿಸಲಾಗುತ್ತಿದೆ. ರಾಜ್ಯಾದ್ಯಂತ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ಹೊರಹಾಕುತ್ತಿದ್ದಾರೆ ಬಿಜೆಪಿ ನಾಯಕರು.
ಒಂದು ಕಡೆ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಬಿಜೆಪಿ ಕೂಡ ಮಾಸ್ಟರ್ ಪ್ಲ್ಯಾನ್ ಮಾಡಿ, ಲಿಂಗಾಯತ ನಾಯಕರನ್ನೇ ಚುನಾವಣಾ ಅಖಾಡಕ್ಕೆ ಇಳಿಸಿ ಕಾಂಗ್ರೆಸ್ ಮಾಡುತ್ತಿರುವ ಲಿಂಗಾಯತ ವಿರೋಧಿ ಆರೋಪದಿಂದ ಮುಕ್ತವಾಗಲು ತಂತ್ರ ರೂಪಿಸಿದೆ. ಜೊತೆಗೆ ಕಾಂಗ್ರೆಸ್ ನಾಯಕರು ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳು ಕೂಡ ಅವರಿಗೆ ಹಿನ್ನಡೆ ಉಂಟುಮಾಡುತ್ತಿದೆ.
ಒಟ್ನಲ್ಲಿ ಮತದಾನಕ್ಕೆ ಕೌಂಟ್ಡೌನ್ ಶುರುವಾಗಿರುವ ಬೆನ್ನಲ್ಲೇ ಅಸ್ತ್ರ ಮತ್ತು ಪ್ರತ್ಯಸ್ತ್ರ ಜೋರಾಗಿದೆ. ರಾಜಕೀಯ ಪಕ್ಷಗಳ ಈ ಆರೋಪ, ಪ್ರತ್ಯಾರೋಪಕ್ಕೆ ಕರ್ನಾಟಕದ ಮತದಾರ ಪ್ರಭು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾನೆ ಎಂಬುದನ್ನ ಕಾದು ನೋಡಬೇಕು. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಂದೇ ಎಲ್ಲರ ರಾಜಕೀಯ ಭವಿಷ್ಯವೂ ನಿರ್ಧಾರವಾಗಲಿದೆ.












Click it and Unblock the Notifications