ಗುಪ್ತಚರ ಇಲಾಖೆ ಎಚ್ಚರಿಕೆ: ಬೆಂಗಳೂರಿನಲ್ಲಿ 1ದಿನ ಮದ್ಯ ಮಾರಾಟ ಬಂದ್
ಬೆಂಗಳೂರು, ನ 5: ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಅನ್ವಯವಾಗುವಂತೆ, ಭಾನುವಾರ (ನ 10) ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಆದೇಶ ಹೊರಡಿಸಿದ್ದಾರೆ.
ಅಂದು ಬೆಳಗ್ಗೆ ಆರು ಗಂಟೆಯಿಂದ, ಮಧ್ಯರಾತ್ರಿ ಹನ್ನೆರಡು ಗಂಟೆಯವರೆಗೆ, ಎಲ್ಲಾ ರೀತಿಯ ಬಾರ್ ಗಳು, ವೈನ್ ಶಾಪ್ ಗಳು, ಪಬ್ ಗಳು ಸೇರಿದಂತೆ, ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ.
ಪೊಲೀಸರ ಸೋಗಿನಲ್ಲಿ ಪ್ರೇಮಿಗಳಿಂದ ದೋಚುತ್ತಿದ್ದ ರಘು ಅಂದರ್
ನ.10ರಂದು ಬೆಂಗಳೂರು ನಗರದಾದ್ಯಂತ, ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ, ನಂತರ ಮೆರವಣಿಗೆ ಸಾಗಲಿದೆ. ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಯುಕ್ತರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.
ಮೆರವಣಿಗೆಯಲ್ಲಿ ಆಯುಧಗಳು, ಇನ್ನಿತರ ವಸ್ತುಗಳನ್ನು ಪ್ರದರ್ಶಿಸುತ್ತಾ ಮೆರವಣಿಗೆ ವೈ.ಎಂ.ಸಿ.ಎ ಮೈದಾನ ಮತ್ತು ಇತರ ಗ್ರೌಂಡ್ ಗಳಲ್ಲಿ ಜಮಾಯಿಸಲಿದೆ.
ಈ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಹೀಗಾಗಿ, ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು, ನವೆಂಬರ್ ಹತ್ತರಂದು, ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ ಎಂದು ಭಾಸ್ಕರ್ ರಾವ್ ಅವರು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.