ರಾಜ್ಯ ಸರ್ಕಾರದ ವಿರುದ್ಧ ಮೂರನೇ ಕಣ್ಣು ತೆರೆದ 'ಪರಮೇಶ್ವರ'
ಬೆಂಗಳೂರು, ಡಿಸೆಂಬರ್.19: ರಾಜ್ಯದಲ್ಲೂ ಕೂಡಾ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುವ ಸೂಚನೆ ಸಿಕ್ಕಿದ್ದೇ ತಡ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ. ರಾಜ್ಯ ಸರ್ಕಾರದ ಕ್ರಮ ಇದೀಗ ವಿಪಕ್ಷಗಳ ಕಣ್ಣು ಕೆಂಪಾಗಿಸಿದೆ.
ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಸರ್ಕಾರದ ನೀತಿಯನ್ನು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವ್ಯಾಪಕವಾಗಿ ಟೀಕಿಸಿದ್ದಾರೆ. ಯಾವುದೇ ಹಿಂಸಾಚಾರ ಹಾಗೂ ಬೆದರಿಕೆಯ ಸುಳಿವು ಸಿಗದಿದ್ದರೂ ರಾಜ್ಯಾದ್ಯಂತ ನಿಷೇಧಾಜ್ಞೆ ಹೇರಲಾಗಿದೆ.
ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವುದೇ ತಪ್ಪೆ ಎಂದು ಡಾ.ಜಿ.ಪರಮೇಶ್ವರ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿ ಸಂಘಟನೆಗಳು ನಡೆಸಲು ಮುಂದಾಗಿದ್ದ ಪ್ರತಿಭಟನೆಯನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.

ಯುವ ಸಮುದಾಯದ ಧ್ವನಿಯನ್ನು ಹತ್ತಿಕ್ಕುವ ಕಾರ್ಯ:
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರೋಧಿಸಿ ಯುವ ಸಂಘಟನೆಗಳು ಶಾಂತಿಯುತ ಪ್ರತಿಭಟನೆ ನಡೆಸಲು ಮುಂದಾಗಿವೆ. ಆದರೆ, ರಾಜ್ಯ ಸರ್ಕಾರ ಅದಕ್ಕೆ ಅವಕಾಶ ನೀಡುತ್ತಿಲ್ಲ. ರಾಜ್ಯಾದ್ಯಂತ ನಿಷೇಧಾಜ್ಞೆ ಹೇರುವ ಮೂಲಕ ಯುವ ಸಮುದಾಯದ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟ್ವೀಟ್ ಪ್ರಹಾರ ನಡೆಸಿದ್ದಾರೆ.
ರಾಜ್ಯದಲ್ಲಿ ಪ್ರತಿಭಟನೆಗೂ ಮುನ್ನವೇ ನಿಷೇಧಾಜ್ಞೆ ಹೇರಲಾಗಿದೆ. ಇದಕ್ಕೂ ಮೊದಲು ಸರ್ಕಾರಕ್ಕೆ ಯಾವುದೇ ಹಿಂಸಾಚಾರ ಹಾಗೂ ಬೆದರಿಕೆ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಹೀಗಿದ್ದರೂ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿಲ್ಲ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.












Click it and Unblock the Notifications