"ಬೆಂಗಳೂರಿನಲ್ಲಿ ಓಮಿಕ್ರಾನ್ ಹೊರತಾಗಿ ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ"
ಬೆಂಗಳೂರು, ಏಪ್ರಿಲ್ 26: ಸಿಲಿಕಾನ್ ಸಿಟಿ ಜನರು ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾಗೂ ಹೊಸ ರೂಪಾಂತರದ ಬಗ್ಗೆ ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಓಮಿಕ್ರಾನ್ ರೂಪಾಂತರದ ಹೊರತಾಗಿ ಬೇರೆ ಯಾವುದೇ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದರು.
ಬೆಂಗಳೂರಿನಲ್ಲಿ ಕೋವಿಡ್-19 ನಿಯಮಗಳ ಬಗ್ಗೆ ಸಾರ್ವಜನಿಕರು ನಿಷ್ಕಾಳಜಿ ವಹಿಸುತ್ತಿದ್ದಾರೆ. ಇದು ಭವಿಷ್ಯದಲ್ಲಿ ಪ್ರಕರಣಗಳು ಹೆಚ್ಚಾಗುವುದಕ್ಕೆ ಕಾರಣವಾಗುತ್ತದೆ ಎಂದು ತ್ರಿಲೋಕ್ ಚಂದ್ರ ತಿಳಿಸಿದ್ದಾರೆ. ಸಿಲಿಕಾನ್ ಸಿಟಿಯ ಜನರಿಗೆ ಅವರು ನೀಡಿರುವ ಸಲಹೆ ಸೂಚನೆಗಳ ಕುರಿತು ಮಾಹಿತಿಯನ್ನು ತಿಳಿಯಿರಿ.

ಸಿಲಿಕಾನ್ ಸಿಟಿಯಲ್ಲಿ ಹೊಸ ತಳಿ ಪತ್ತೆಯಾಗಿಲ್ಲ
ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿಗೆ ಸಂಬಂಧಿಸಿದಂತೆ ಓಮಿಕ್ರಾನ್ ಹೊರತುಪಡಿಸಿ ಬೇರೆ ಯಾವುದೇ ತಳಿ ಪತ್ತೆಯಾಗಿಲ್ಲ. ಹೊಸ ತಳಿಯ ಲಕ್ಷಣಗಳು ಸಾಮಾನ್ಯವಾಗಿವೆ. ಮೈ-ಕೈ ನೋವು, ಜ್ವರ, ಶೀತ, ಕೆಮ್ಮು ಎಲ್ಲವೂ ಇರುತ್ತದೆ. ಈ ರೋಗವು ಮೂರರಿಂದ ಐದು ದಿನಗಳಲ್ಲಿ ವಾಸಿಯಾಗುತ್ತದೆ. ಇದರ ಮಧ್ಯೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಇದುವರೆಗೂ ಕೇವಲ 3 ಜನರು ಮಾತ್ರ ಆಸ್ಪತ್ರೆಯಲ್ಲಿ ಇದ್ದಾರೆ ಎಂದು ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.

ಕೊರೊನಾವೈರಸ್ ನಿಯಮ ಪಾಲನೆಯಲ್ಲಿ ಕೊರತೆ
ಬೆಂಗಳೂರಿನಲ್ಲಿ ಕೊರೊನಾವೈರಸ್ ನಿಯಮಗಳ ಪಾಲನೆಯಲ್ಲಿ ಬಹಳ ಕೊರತೆ ಕಂಡು ಬರುತ್ತಿದೆ. ಜನರು ಸಾರ್ವಜನಿಕ ಪ್ರದೇಶಗಳಲ್ಲೇ ಮಾಸ್ಕ್ ಅನ್ನು ಧರಿಸುತ್ತಿಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಇದರಿಂದ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಅಪಾಯವಿರುತ್ತದೆ. ದೆಹಲಿ, ಹರಿಯಾಣ ಮತ್ತು ನೋಯ್ಡಾ ಭಾಗಗಳಲ್ಲಿ ಅದೇ ರೀತಿ ನಿಯಮಗಳನ್ನು ಸಡಿಲಗೊಳಿಸಿದ ಹಿನ್ನೆಲೆಯಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ಬೆಂಗಳೂರಿನ ಜನರು ಕಡ್ಡಾಯವಾಗಿ ಕೋವಿಡ್-19 ನಿಯಮಗಳನ್ನು ಪಾಲನೆ ಮಾಡಬೇಕು ಎಂದು ತ್ರಿಲೋಕ್ ಚಂದ್ರ ಹೇಳಿದ್ದಾರೆ.

ಬೆಂಗಳೂರಿಗರು ಲಸಿಕೆ ಪಡೆದುಕೊಳ್ಳಲು ಸಲಹೆ
ಕೋವಿಡ್-19 ಪರೀಕ್ಷೆ ಹೆಚ್ಚಳಕ್ಕೆ ಮಾಡುವ ಅಗತ್ಯವಿದೆ. ಪ್ರಸ್ತುತ ದಿನಕ್ಕೆ ಮೂರರಿಂದ ನಾಲ್ಕು ಸಾವಿರ ಮಂದಿಗೆ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಒಂದು ದಿನದಲ್ಲಿ 10 ಸಾವಿರ ಮಂದಿಗೆ ಕೊರೊನಾವೈರಸ್ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಇದರ ನಡುವೆ ಕೋವಿಡ್-19 ಸೋಂಕಿನ ಬಗ್ಗೆ ಜನರು ನಿರ್ಲಕ್ಷ್ಯ ವಹಿಸುವುದು ಸೂಕ್ತವಲ್ಲ. ಒಂದು ಡೋಸ್ ಲಸಿಕೆ ಪಡೆದುಕೊಂಡವರು ಎರಡನೇ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಅದೇ ರೀತಿ ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳಲು ಅರ್ಹರಾಗಿರುವವರು ಮುನ್ನೆಚ್ಚರಿಕೆ ಡೋಸ್ ಅನ್ನೂ ಹಾಕಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಸಿಲಿಕಾನ್ ಸಿಟಿಯ ಜನರಿಗೆ ಕೋವಿಡ್ ಬಗ್ಗೆ ಆತಂಕ ಬೇಕಾಗಿಲ್ಲ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಬಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಜನರು ಯಾವುದೇ ರೀತಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಬೆಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹೊರತಾಗಿ ಬೇರೆ ಯಾವುದೇ ಜಿಲ್ಲೆಗಳಲ್ಲಿ ಒಂದೇ ಒಂದು ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿಲ್ಲ. ರಾಜ್ಯದಲ್ಲಿ ಕಳೆದ ಏಪ್ರಿಲ್ 25ರಂದು ಒಟ್ಟು 64 ಹೊಸ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದರೆ, ಅದರಲ್ಲಿ 63 ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿವೆ. ಉಳಿದ ಒಂದು ಪ್ರಕರಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.











Click it and Unblock the Notifications