Just in: ಎನ್ಇಪಿಗೆ ತಕ್ಕಂತೆ ಶಾಲೆಗಳಿಗೆ ಸೌಲಭ್ಯ: ಕೆ. ಗೋಪಾಲಯ್ಯ
ಬೆಂಗಳೂರು, ಜುಲೈ.31: "ಮುಂಬರುವ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಿಂದಲೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದ್ದು, ಅದಕ್ಕೆ ತಕ್ಕಂತೆ ಸರ್ಕಾರಿ ಶಾಲೆಗಳಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ" ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮೀ ನಗರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, "ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಹಲವು ಕಡೆಗಳಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ದೆಹಲಿ ಮಾದರಿಯ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡಲಾಗಿದೆ" ಎಂದರು.
"ದೆಹಲಿ ಮಾದರಿಯ ಪಬ್ಲಿಕ್ ಶಾಲೆಗಳಲ್ಲಿ ಆಧುನಿಕತೆಗೆ ತಕ್ಕಂತೆ ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಗಳನ್ನು ನಿರ್ಮಾಣ ಮಾಡಲಾಗಿದ್ದು, ಯಾವುದೇ ಖಾಸಗಿ ಶಾಲೆಗಳಗೂ ಕಡಿಮೆ ಇಲ್ಲದ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ತರಗತಿಗಳ ಪ್ರವೇಶಕ್ಕೆ ಸಾಕಷ್ಟು ಬೇಡಿಕೆ ಇದ್ದು, ಅದನ್ನು ನಿಭಾಯಿಸುವುದೇ ದೊಡ್ಡ ಸವಾಲಿನ ಕೆಲಸವಾಗಿದೆ" ಎಂದು ತಿಳಿಸಿದರು.

"ಬರುವ ವರ್ಷದಿಂದ ಕುರುಬರಹಳ್ಳಿ ಸೇರಿದಂತೆ ಎಲ್ಲ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ, ಸಿಬ್ಬಂದಿ ಹೀಗೆ ಎಲ್ಲ ರೀತಿಯ ಅಗತ್ಯ ಸೌಲಭ್ಯಗಳನ್ನು ಮತ್ತಷ್ಟು ಹೆಚ್ಚಿಸಿ ದಾಖಲಾತಿಯನ್ನು ಕೂಡ ಹೆಚ್ಚಿಸಲಾಗುವುದು" ಎಂದು ಮಾಹಿತಿ ನೀಡಿದರು.
"ಕ್ಷೇತ್ರದ ಪ್ರತಿ ಬಡಾವಣೆಗಳಿಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ಒಂದು ವೇಳೆ ಯಾವುದಾದರೂ ಸೌಲಭ್ಯ ಇಲ್ಲದೆ ಇದ್ದರೆ ಜನರು ನನ್ನ ಗಮನಕ್ಕೆ ತಂದರೆ ತಕ್ಷಣವೇ ಅದಕ್ಕೆ ಸ್ಪಂದಿಸುವುದಾಗಿ" ಸಚಿವರು ಭರವಸೆಕೊಟ್ಟರು.

ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯರಾಮಯ್ಯ, ಜಯಸಿಂಹ, ಶ್ರೀನಿವಾಸ್, ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ಮಂಜು, ಮುನಿರಾಜು, ಕುಮಾರ್ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications