M.P Renukacharya: ರೇಣುಕಾಚಾರ್ಯ ಸಹೋದರನಿಗೆ ಸಂಕಷ್ಟ ತಂದಿಟ್ಟ ಜಾತಿ ಪ್ರಮಾಣ ಪತ್ರ
ಬೆಂಗಳೂರು ಏಪ್ರಿಲ್ 10: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಖಾಸಾ ಅಣ್ಣ ಎಂ.ಪಿ.ದಾರಕೇಶ್ವರಯ್ಯ ಬೇಡ ಜಂಗಮ ಎಂದು ಪ್ರಮಾಣಪತ್ರ ಪಡೆದು ಇದೀಗ ಸಂಕಷ್ಟಕ್ಕೆ ತುತ್ತಾಗಿದ್ದಾರೆ.
ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿರುವ ಅವರು ಇದೀಗ ಬೇಡ ಜಂಗಮ ಎಂದು ಪಡೆದಿರುವ ಜಾತಿ ಪ್ರಮಾಣಪತ್ರ ಬಳಸದಂತೆ ವಿಧಿಸಿರುವ ನಿರ್ಬಂಧವನ್ನು ಹೈಕೋರ್ಟ್ ಮುಂದುವರಿಸಿದೆ.

ಈ ಮಧ್ಯೆ, ದಾರಕೇಶ್ವರಯ್ಯ ಊಸರವಳ್ಳಿ ತರ ಬಣ್ಣ ಬದಲಾಯಿಸುವ ಸ್ವಭಾವದವು, ಆ ಮೂಲಕ ಬೇಡ ಜಂಗಮ ಜಾತಿಯ ಪ್ರಮಾಣ ಪತ್ರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸರ್ಕಾರದ ಪರ ವಿಶೇಷ ವಕೀಲರು ಹೈಕೋರ್ಟ್ನಲ್ಲಿ ಆರೋಪಿಸಿದ್ದಾರೆ.
'ಪರಿಶಿಷ್ಟ ಜಾತಿಗೆ ಮೀಸಲಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬೇಡ ಜಂಗಮ ಜಾತಿಯ ಪ್ರಮಾಣ ಪತ್ರ ಪಡೆದಿರುವ ಎಂ.ಪಿ.ದಾರುಕೇಶ್ವರಯ್ಯ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ' ಎಂದು ಆಕ್ಷೇಪಿಸಿ ದಾಸರಹಳ್ಳಿಯ ಎಂ.ಚಂದ್ರ ಬಿನ್ ಮುನಿಯಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು.
ಸರ್ಕಾರದ ಪರ ಹಾಜರಾಗಿದ್ದ ವಿಶೇಷ ವಕೀಲ ಸಿ.ಜಗದೀಶ್, 'ದಾರಕೇಶ್ವರಯ್ಯ ಈ ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್ ಅವರಿಂದ ಪಡೆದಿದ್ದ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ರದ್ದಾಗಿತ್ತು. ಈಗ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಅವರಿಂದ ಇದೇ ರೀತಿಯ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ. ಎರಡೆರಡು ಬಾರಿ ಇಂತಹ ಪ್ರಮಾಣಪತ್ರ ಪಡೆದು ಬಣ್ಣ ಬದಲಾಯಿಸುವ ಮೂಲಕ ಕಾನೂನಿನ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ' ಎಂದು ದೂರಿದರು.
ಆದರೆ ಅದನ್ನು ದಾರಕೇಶ್ವರಯ್ಯ ಪರ ವಕೀಲರು ಸಾರಾಸಗಟಾಗಿ ತಳ್ಳಿಹಾಕಿದರು. ಅಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸಮಯ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿತು. ಅಲ್ಲಿಯವರೆವಿಗೂ ಈ ಮೊದಲು ನೀಡಿದ್ದ ಆದೇಶದ ಅನುಸಾರ ದಾರುಕೇಶ್ವರಯ್ಯ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಬಳಕೆ ಮಾಡದಂತೆ ವಿಧಿಸಿದ್ದ ನಿರ್ಬಂಧವನ್ನು ವಿಸ್ತರಿಸಿತು.












Click it and Unblock the Notifications