ಗೋವಿನ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ವಿರುದ್ಧ ಎಫ್ಐಆರ್
ಬೆಂಗಳೂರು, ಆಗಸ್ಟ್ 29: ಬಹುಭಾಷಾ ನಟ ಪ್ರಕಾಶ್ ರಾಜ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಇಂದು ಎಫ್ಐಆರ್ ಹಾಕಲಾಗಿದೆ.
ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ದೂರು ದಾಖಲಿಸಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುವಂಥ ಭಾಷಣವನ್ನು ಪ್ರಕಾಶ್ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಕಿರಣ್ ಎನ್ ಎಂಬ ವಕೀಲರು ಪ್ರಕಾಶ್ ರಾಜ್ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋವುಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂದು ಸಲ್ಲಿಸಲಾದ ದೂರನ್ನು ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಂಡಿದೆ.
ಪ್ರಕಾಶ್ ರಾಜ್ ಅವರು ವಿಜಯಪುರದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಗೋವುಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಅಷ್ಟೇ ಅಲ್ಲದೆ ತುಂಬ ಕಡೆಗಳಲ್ಲಿ ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಮುಂದೆಂದೂ ಅದು ಮರುಕಳಿಸಬಾರದು. ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.












Click it and Unblock the Notifications