ಇನ್ನೂ ಒಂದು ವಾರ ದಕ್ಷಿಣ ಒಳನಾಡಿನಲ್ಲಿ ಮಳೆಯಬ್ಬರ ಸಾಧ್ಯತೆ!
ಬೆಂಗಳೂರು, ಮೇ.3: ಕಳೆದ ಒಂದು ತಿಂಗಳಿನಿಂದ ಬೆಂಗಳೂರು ಹಾಗೂ ನಗರದ ಹೊರ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಒಂದು ದಿನ ಸಾಧಾರಣ ಮಳೆಯಾದರೆ ಇನ್ನೊಂದು ದಿನ ಆಲಿಕಲ್ಲು, ಗುಡುಗು ಸಹಿತ ಮಳೆ ಬೀಳುತ್ತಿದೆ.
ಮಳೆ ಇಷ್ಟಕ್ಕೆ ಮುಗಿಯದೆ ಇನ್ನೊಂದು ವಾರವೂ ಮುಂದುವರೆಯಲಿದೆ. ಬೆಂಗಳೂರುನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 1 ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 6 ಹಾಗೂ 7 ರಂದು ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡನ್ನು ಹಾದುಹೋಗುವಂತೆ ಉತ್ತರದಿಂದ ದಕ್ಷಿಣದವರೆಗೆ ಟ್ರಫ್ ನಿರ್ಮಾಣವಾಗಲಿದೆ. ತೇವಾಂಶ ಪ್ರಮಾಣ ಹೆಚ್ಚಳದಿಂದ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನ ಇಳಿಕೆ ಸಾಧ್ಯತೆ: ಬೆಂಗಳೂರು ನಗರ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಎಗಳಲ್ಲಿ ಮಳೆಯಿಂದಾಗಿ ಗರಿಷ್ಠ ತಾಪಮಾನ ಮತ್ತಷ್ಟು ಇಳಿಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಯ ದಕ್ಷಿಣ ಕನ್ನಡ ಮತ್ತು ಉಡುಪಿ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯ ಕೆಲ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಮುನ್ಸೂಚನೆ ಇದೆ.
ಕಲಬುರಗಿಯಲ್ಲಿ 43.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕೆಐಎಲ್ನಲ್ಲಿ ಗರಿಷ್ಠ 33.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21ಡಿಗ್ರಿ ಸೆಲ್ಸಿಯಸ್ ಎಚ್ಎಎಲ್ನಲ್ಲಿ ಗರಿಷ್ಠ 33.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.











Click it and Unblock the Notifications