‘ಶತಮಾನದ ಮಹಾ ಸುಳ್ಳುಗಾರ’ ನೆಂದು ಸ್ವಯಂ ಘೋಷಿಸಿಕೊಂಡ ಸಿದ್ದರಾಮಯ್ಯ: ಎಚ್ಡಿಕೆ ಆರೋಪ
ಬೆಂಗಳೂರು, ಅಕ್ಟೋಬರ್ 11: ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳ ಉಪ ಚುನಾವಣೆ ಶುರುವಾಗುತ್ತಿದ್ದಂತೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿ ನಡೆದಿವೆ. ಇಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಸರಣಿ ಟ್ವೀಟ್ ಮಾಡುವ ಮೂಲಕ ಹರಿಹಾಯ್ದಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ, ಈ 'ಶತಮಾನದ ಮಹಾ ಸುಳ್ಳುಗಾರ' ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಕಾಲೆಳೆದರು.

ಸಿದ್ದರಾಮಯ್ಯ ಹಸಿ ಸುಳ್ಳುಗಾರ
ಮಂಡ್ಯದ ಮೂಲಕ ಇಂಡಿಯಾ ಹಿಡಿಯುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸಿಗರು ಅನ್ನದಾತನ ಅಸ್ತ್ರ ಬಳಸಿದರೆ ಮಂಡ್ಯದ ಮಣ್ಣಿನ ಮಕ್ಕಳು ತಕ್ಕ ಪಾಠ ಕಲಿಸಲಿದ್ದಾರೆ. ಅನ್ನದಾತರ ಬಗೆಗಿನ ಬದ್ಧತೆ ಬಗ್ಗೆ ನಿಮ್ಮೆಲ್ಲರಿಗಿಂತ ಹೆಚ್ಚಿನ ಕರುಳಬಳ್ಳಿಯ ಸಂಬಂಧ ಜೆಡಿಎಸ್ ಪಕ್ಷಕ್ಕಿದೆ. ಜೆಡಿಎಸ್ ನೊಂದಿಗೆ ಯಾವುದೇ ಮಾತುಕತೆ ನಡೆಸದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಸಿ ಸುಳ್ಳು ಹೇಳುವ ಮೂಲಕ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ, ಎಲುಬಿಲ್ಲದ ನಾಲಿಗೆಯನ್ನು ಹರಿಯಬಿಟ್ಟು ನಗೆಪಾಟಲಿಗೆ ಈಡಾಗಿದ್ದಾರೆ.

ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಕಲಿಯಬೇಕಾದದ್ದು ಏನೂ ಇಲ್ಲ
ಕಳೆದ ಶತಮಾನದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಅಂಟಿದ್ದ 'ಮಹಾನ್ ಸುಳ್ಳುಗಾರ' ಎಂಬ ಕಳಂಕವನ್ನು ಸಿದ್ದರಾಮಯ್ಯ ತಾನಾಗಿಯೇ ಕಸಿದುಕೊಂಡು ಈ ಶತಮಾನದ ಮಹಾನ್ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ ಎಂದು ಎಚ್ಡಿಕೆ ಆರೋಪಿಸಿದರು. ಬಾಯಿ ಚಪಲಕ್ಕೆ ಸುಳ್ಳುಗಳನ್ನು ಹೇಳುವ ಚಾಳಿಯನ್ನು ಸಿದ್ದರಾಮಯ್ಯ ಇನ್ನಾದರೂ ಬಿಡಬೇಕು. ರೈತರ ಪರ ಕಾಳಜಿ, ಬದ್ಧತೆಯನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಕಲಿಯಬೇಕಾದದ್ದು ಏನೂ ಇಲ್ಲ. ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಕಾಲದಲ್ಲಿ ಮಾಡಿದ ಸಾಲಮನ್ನಾದಲ್ಲಿ ಲೋಪದೋಷ
ಸಂತೆ ಭಾಷಣ ಮಾಡುವ ಸಿದ್ದರಾಮಯ್ಯ ವಿದೂಷಕನಂತೆ ಜೆಡಿಎಸ್ ವಿರುದ್ಧ ಹರಿಹಾಯುತ್ತಿರುವುದು ಪ್ರತಿಪಕ್ಷದ ನಾಯಕನಿಗೆ ಭೂಷಣವಲ್ಲ. ಸಿದ್ದರಾಮಯ್ಯ ಅವರ ಕಾಲದಲ್ಲಿ ಮಾಡಿದ ಸಾಲ ಮನ್ನಾದಲ್ಲಿ ಲೋಪದೋಷಗಳು ಇದ್ದವು. ಪತ್ರಕರ್ತರ ಪ್ರಶ್ನೆಗೆ ನಾನು ಪ್ರತಿಕ್ರಿಯಿಸಿದ್ದೆ. ನಾನು ಮಾಡಿದ 25 ಸಾವಿರ ಕೋಟಿ ರುಪಾಯಿಗಳ ಸಾಲಮನ್ನಾದಲ್ಲಿ ಇಂತಹ ಅನ್ಯಾಯಗಳನ್ನು ಸರಿಪಡಿಸಿದ್ದೆ. ಇದರಲ್ಲಿ ಹುಳುಕು ಹುಡುಕುವ ಕಾಂಗ್ರೆಸ್ ನಾಯಕರು ಅನ್ನದಾತನಿಗೆ ಮಂಕು ಬೂದಿ ಎರಚಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.

‘ಅಹಿಂದ’ ಮುಖವಾಡ ಇಡೀ ನಾಡಿಗೆ ಗೊತ್ತಾಗಿದೆ
ನಾನು ಚುನಾವಣೆ ಬಂದಾಗ ಜಾತಿ ಕಾರ್ಡ್ ಪ್ಲೇ ಮಾಡುತ್ತೇನೆ ಎಂದು ಮೂದಲಿಸುವ ಸಿದ್ದರಾಮಯ್ಯ 'ಅಹಿಂದ' ರಾಮಯ್ಯ ಆಗಿದ್ದು ಏಕೆ? ನಕಲಿ ಸಮಾಜವಾದಿಯ 'ಅಹಿಂದ' ಮುಖವಾಡ ಇಡೀ ನಾಡಿಗೆ ಗೊತ್ತಾಗಿದೆ. ""ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇಯಿತು. ಕೊಂದಹರೆಂಬುದನರಿಯದೆ ಬೆಂದ ಒಡಲ ಹೊರೆವುತ್ತಲದೆ. ಅದಂದೆ ಹುಟ್ಟಿತ್ತು, ಅದಂದೆ ಹೊಂದಿತ್ತು. ಕೊಂದವರುಳಿವರೆ ಕೂಡಲಸಂಗಮದೇವಾ'' ಎಂದು ಕೊನೆಯ ಟ್ವೀಟ್ ಮಾಡಿದ್ದಾರೆ.












Click it and Unblock the Notifications