ಪಿಂಚಣಿ ಹಣ ನೀಡದ ಸರ್ಕಾರಕ್ಕೆ ಕುಮಾರಸ್ವಾಮಿ ಪಂಚ್!
ಬೆಂಗಳೂರು, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಸಂಭ್ರಮದಲ್ಲಿದೆ. ಸೋಮವಾರಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ವರ್ಷವಾಗಿದೆ.
Recommended Video
ಕರ್ನಾಟಕದಲ್ಲಿ ಕೊರೊನಾವೈರಸ್ ಮಹಾಮಾರಿಯು ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದೆ. ಕೊವಿಡ್-19 ಸೋಂಕಿನ ನೆಪದಲ್ಲಿ ಸರ್ಕಾರವು ಹಣವನ್ನೆಲ್ಲಾ ಉಪಕರಣ ಖರೀದಿ. ಕೊರೊನಾವೈರಸ್ ನಿರ್ವಹಣೆಗೆ ಖರ್ಚು ಮಾಡುತ್ತಿದೆ.
ರಾಜ್ಯದಲ್ಲಿ ಸರ್ಕಾರದ ಪಿಂಚಣಿ ಹಣವನ್ನೆ ನೆಚ್ಚಿಕೊಂಡು ಬದುಕುತ್ತಿರುವ ಜನರ ಬದುಕು ಡೋಲಾಯಮಾನ ಸ್ಥಿತಿಗೆ ಬಂದು ತಲುಪಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಮತ್ತೊಮ್ಮೆ ಕಿವಿ ಹಿಂಡುವ ಕಾರ್ಯವನ್ನು ಮಾಡಿದ್ದಾರೆ.

ಐದಾರು ತಿಂಗಳಿನಿಂದ ಪಿಂಚಣಿ ನೀಡಿಲ್ಲ ಸರ್ಕಾರ
ರಾಜ್ಯದಲ್ಲಿ ಕಳೆದ "ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ಅಂಗವಿಕಲ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು" ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಔಗತ್ಯ ವಸ್ತುಗಳನ್ನು ಖರೀದಿಸಲಾಗದೇ ಜನರ ಪೀಕಲಾಟ
ಕೊರೊನಾವೈರಸ್ ಹರಡುತ್ತಿರುವ ಇಂಥ ಸಂಕಷ್ಟದ ಸಮಯದಲ್ಲಿ ಸಕಾಲಕ್ಕೆ ಪಿಂಚಣಿ ಕೈಗೆ ಸಿಗದೇ ಅಗತ್ಯ ಔಷಧಗಳನ್ನು ಕೊಳ್ಳಲೂ ಫಲಾನುಭವಿಗಳು ಪರದಾಡುತ್ತಿದ್ದಾರೆ. ಹಲವು ಮಂದಿಗೆ ಊಟಕ್ಕೂ ತತ್ವಾರವಾಗಿದೆ. ವರ್ಷಾಚರಣೆಯ ಸಂಭ್ರಮದಲ್ಲಿರುವ ಬಿಜೆಪಿ ಸರ್ಕಾರ ಮೊದಲು ಹಣ ಬಿಡುಗಡೆಗೆ ಆದೇಶಿಸುವಂತೆ ಆಗ್ರಹಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯದ್ದು ಕಣ್ಣು, ಕಿವಿ ಇಲ್ಲದ ಸರ್ಕಾರ
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿಯ ನಡುವೆಯೂ ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ವೃದ್ಧರು, ಅಂಗವಿಕಲರು ಮತ್ತು ವಿಧವಾ ವೇತನದ ಫಲಾನುಭವಿಗಳನ್ನು ಅಲೆದಾಡಿಸಲಾಗುತ್ತಿದೆ. ಇದು ನಾಚಿಕೆಗೇಡು ಸಂಗತಿಯಾಗಿದ್ದು, ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಬೀಜ ಮಂತ್ರ ಪಠಿಸುತ್ತಿರುವ ರಾಜ್ಯ ಸರ್ಕಾರ
ರಾಜ್ಯದಲ್ಲಿ ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.












Click it and Unblock the Notifications