'ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ'
ಬೆಂಗಳೂರು, ಆ. 13: ನಿನ್ನೆಯಷ್ಟೇ ತಮ್ಮ 73ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮುಂದಿನ ಹತ್ತು ದಿನಗಳ ಕಾಲ ನಾನು ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಭೇಟಿ ಮಾಡಲು ಬರಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ನನ್ನಿಂದ ಬೇರೆಯವರಿಗೆ ತೊಂದರೆ ಆಗಬಾರದು, ಹೀಗಾಗಿ ಭೇಟಿಗೆ ಬರಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
Recommended Video
ಸತತ 10 ದಿನಗಳ ಚಿಕಿತ್ಸೆ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಜ್ವರದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದಾಗ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಆಗಸ್ಟ್ 3 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ದೂರವಾಣಿ ಕರೆ
ಜ್ವರವನ್ನು ಹೊರತು ಪಡಿಸಿದರೆ, ಕೊರೊನಾ ವೈರಸ್ ಸೋಂಕಿನ ಯಾವುದೇ ಲಕ್ಷಣಗಳು ಸಿದ್ದರಾಮಯ್ಯ ಅವರಿಗೆ ಇರಲಿಲ್ಲ. ಆದರೂ ವಯಸ್ಸಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗುವಂತೆ ಪುತ್ರ, ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಹಾಗೂ ಇತರ ವೈದ್ಯರ ಸಲಹೆಯಂತೆ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ನಿನ್ನೆ ಮತ್ತೊಮ್ಮೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು ನೆಗಟಿವ್ ಎಂದು ವರದಿ ಬಂದಿದೆ. ಹೀಗಾಗಿ ಇವತ್ತು ಸಂಜೆ 6 ಗಂಟೆಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಮನೆಗೆ ತೆರಳಿದ ಬಳಿಕ ನಾಲ್ಕೈದು ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಲಿದ್ದಾರೆ. ಮುಂದಿನ 10 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರುವುದರಿಂದ ಕಾರ್ಯಕರ್ತರು ಹಾಗೂ ನಾಯಕರು ಭೇಟಿಗೆ ಮನೆಗೆ ಬರಬೇಡಿ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಅವರು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಕೊರೊನಾವೈರಸ್ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.