ಎನ್ಐಎ ಅಧಿಕಾರಿಗಳಿಂದ ಮಾಜಿ ಮೇಯರ್ ಸಂಪತ್ ರಾಜ್ ವಿಚಾರಣೆ
ಬೆಂಗಳೂರು, ನವೆಂಬರ್ 23: ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ವಿಚಾರಣೆ ನಡೆಸಿದ್ದಾರೆ. ಸಿಸಿಬಿ ಪೊಲೀಸರ ವಿಚಾರಣೆ ಮುಗಿದ ಬಳಿಕ ಇದೀಗ ಎನ್ಐಎ ಅಧಿಕಾರಿಗಳು ಸಂಪತ್ ರಾಜ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳನ್ನು ಎನ್ಐಎ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಮೂಲಕ ಭಯೋತ್ಪಾದನೆ ಕೃತ್ಯ ಎಸಗಿದ ಹಾಗೂ ಸಾರ್ವಜನಿಕ ಆಸ್ತಿಗೆ ನಷ್ಟವುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿದೆ.
ಬೆಂಗಳೂರು; ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಗೆ ದಾಖಲು
ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರನ್ನು ಪ್ರೇರಪಿಸಿ ಅವರಿಗೆ ಆರ್ಥಿಕ ನೆರವು ನೀಡಿದ ಆರೋಪ ಸಂಪತ್ ರಾಜ್ ಮೇಲಿದೆ.ಅಲ್ಲದೇ ಪರಿಶಿಷ್ಠ ಜಾತಿ ಮತ್ತು ಪಂಗಡ ದೌರ್ಜನ್ಯ ನಿಷೇಧ ಕಾಯ್ದೆ ಅಡಿ ಅವರ ವಿರುದ್ಧ ಕೇಸು ದಾಖಲಾಗಿದ್ದು, ವಿಚಾರಣೆಗೆ ಹಾಜರಾಗಲು ಸಂಪತ್ ರಾಜ್ ಅವರಿಗೆ ಸೂಚಿಸಲಾಗಿತ್ತು. ಅನಾರೋಗ್ಯ ನಾಟಕವಾಗಿ ತಲೆಮರೆಸಿಕೊಂಡಿದ್ದರು. ಕೆಲ ದಿನಗಳ ಹಿಂದಷ್ಟೇ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಸ್ನೇಹಿತರ ಮನೆಗೆ ಬಂದಾಗ ಸಂಪತ್ ರಾಜ್ ಅವರನ್ನು ಬಂಧಿಸಿದ್ದರು. ಮೂರು ದಿನ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಇದೇ ವೇಳೆ ಎನ್ಐಎ ಅಧಿಕಾರಿಗಳು ವಿಚಾರಣೆಗೆ ಮುಂದಗಿದ್ದರು. ಜೈಲಿನಲ್ಲಿಯೇ ವಿಚಾರಣೆ ನಡೆಸಲು ಅನುಮತಿ ನೀಡಿ ನ್ಯಾಯಾಲಯ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಡಿ.ಜೆ.ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗಳಿಗೆ ಬೆಂಕಿ ಇಟ್ಟ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಂಪತ್ ರಾಜ್ ಪಾತ್ರ ಇರುವ ಬಗ್ಗೆ ಎನ್ಐಎ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡಸಿದ್ದಾರೆ.
ವಿಚಾರಣೆ ವೇಳೆ ಸಂಪತ್ ರಾಜ್ ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಎನ್ಐಎ ದಾಖಲಿಸಿರುವ ಎರಡು ಪ್ರಕರಣ ಸಂಬಂಧ ಹಲವಾರು ಆರೋಪಿಗಳ ಹೇಳಿಕೆ ದಾಖಲಿಸಿಕೊಂಡಿದ್ದು, ಆ ಹೇಳಿಕೆಗಳ ಆಧಾರದ ಮೇಲೆ ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಸಂಪತ್ ರಾಜ್ ಅವರ ಪತ್ರ ಇರುವ ಬಗ್ಗೆ ಎನ್ಐಎ ತನಿಖೆಯಲ್ಲಿ ಸಾಕ್ಷಗಳು ಲಭ್ಯವಾದಲ್ಲಿ ಸಂಪತ್ ರಾಜ್ ಅವರನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸಲಿದೆ.