ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನ
ಬೆಂಗಳೂರು, ನವೆಂಬರ್ 2: ಮಾಜಿ ಸಚಿವ ವೈಜನಾಥ ಪಾಟೀಲ್(82) ಇಂದು ನಿಧನರಾಗಿದ್ದಾರೆ.
ಬೆಂಗಳೂರಿನ ವೊಕಾರ್ಡ್ ಪೋರ್ಟೀಸ್ ಆಸ್ಪತ್ರೆಯಲ್ಲಿ ಅವರು ಸುಮಾರು ಹತ್ತು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೂಲತಃ ಬೀದರ್ ಜಿಲ್ಲೆಯವರಾಗಿದ್ದ ವೈಜನಾಥ ಪಾಟೀಲ, ಕಲಬುರ್ಗಿಯನ್ನು ತಮ್ಮ ರಾಜಕೀಯ ಕರ್ಮಭೂಮಿಯನ್ನಾಗಿಸಿಕೊಂಡಿದ್ದರು. ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

ನಂತರ ಜೆಡಿಎಸ್ ನಿಂದ 2004ರಲ್ಲಿ ಎರಡನೆಯ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ತೋಟಗಾರಿಕೆ ಹಾಗೂ ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಹೋರಾಡಿದ್ದಾರೆ. ಚಿಂಚೋಳಿಯಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ.
ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯನ್ನು ಅಸ್ತಿತ್ವಕ್ಕೆ ತಂದಿದ್ದರು. ಸಮಿತಿಯ ಮೂಲಕವೇ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕೊಡಿಸಲು ನಿರಂತರ ಹೋರಾಟ ನಡೆಸಿದ್ದರು. ಕೊನೆಗೆ ಕಲಂ 371(ಜೆ)ಗೆ ತಿದ್ದುಪಡಿಯಾಗಿ, ವಿಶೇಷ ಸ್ಥಾನಮಾನವೂ ಸಿಕ್ಕಿದ್ದು, ವೈಜನಾಥ ಪಾಟೀಲರು ಮುಂಚೂಣಿಯಲ್ಲಿ ನಿಲ್ಲುತ್ತಾರೆ.
ಜನತಾ ಪರಿವಾರದಿಂದ ರಾಜಕೀಯ ಪ್ರವೇಶ ಮಾಡಿದ ಪಾಟೀಲ, ನಂತರದಲ್ಲಿ ಕಾಂಗ್ರೆಸ್, ಕೆ.ಜೆ.ಪಿ.ಗೆ ಪಕ್ಷಾಂತರ ಮಾಡಿ, ಕೆಲ ತಿಂಗಳ ಹಿಂದೆ ನಡೆದಿದ್ದ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.












Click it and Unblock the Notifications