ಹೆಚ್ ಡಿ ದೇವೇಗೌಡರನ್ನು ಮುಖ್ಯಮಂತ್ರಿಗಳೇ ಆಹ್ವಾನಿಸಿರುವರು: ಸಚಿವ ಅಶ್ವಥ್ ನಾರಾಯಣ
ಬೆಂಗಳೂರು, ನವೆಂಬರ್ 12: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಸ್ವತಃ ಮುಖ್ಯಮಂತ್ರಿಗಳೇ ಕರೆ ಮಾಡಿ ಹಾಗೂ ಪತ್ರ ಬರೆದು ಆಹ್ವಾನಿಸಿದ್ದರು. ಇದರಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರ ಕುರಿತು ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅಶ್ವಥ್ ನಾರಾಯಣ್, ಶುಕ್ರವಾರ ಬೆಂಗಳೂರಿನಲ್ಲಿ ನಡೆದಿರುವುದು ಕೆಂಪೇಗೌಡರಿಗೆ ಸಂಬಂಧಿಸಿದ ಕಾರ್ಯಕ್ರಮವಾಗಿದೆ. ನಮಗೆ ನಾಡಪ್ರಭು ಕೆಂಪೇಗೌಡರು ಮುಖ್ಯವಾಗಬೇಕಷ್ಟೆ. ಇಷ್ಟಕ್ಕೂ ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯನ್ನು ಅಚ್ಚು ಹಾಕಿರಲಿಲ್ಲ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ದೇವೇಗೌಡರು ಸೇರಿದಂತೆ ಮಾಜಿ ಮುಖ್ಯಮಂತ್ರಿಗಳನ್ನೆಲ್ಲ ಆಮಂತ್ರಿಸಿದ್ದಾರೆ ಎಂದು ಉತ್ತರಿಸಿದರು.
ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಲ್ಲರನ್ನೂ ಬೊಮ್ಮಾಯಿಯವರೇ ಖುದ್ದಾಗಿ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ಅದರಲ್ಲೂ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಕಂಡರೆ ನಮಗೆಲ್ಲ ಅಪಾರ ಗೌರವವಿದೆ ಎಂದರು.
ಬಿಜೆಪಿ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಎಚ್ಡಿಕೆ:
ಪ್ರಗತಿ ಪ್ರತಿಮೆಯ ಶಂಕುಸ್ಥಾಪನೆ ಮತ್ತು ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಸ್ವತಃ ನಾನೇ ದೇವೇಗೌಡರನ್ನು ಆಹ್ವಾನಿಸಿದ್ದೇನೆ. ಈಗ ನಡೆದಿದ್ದು ಪ್ರಧಾನಿಗಳ ಕಾರ್ಯಕ್ರಮವಾದ್ದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕರೆದಿದ್ದಾರೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದರು.
ರಾಜ್ಯ ಬಿಜೆಪಿಯು ಪ್ರಗತಿ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಆಹ್ವಾನಿಸದೇ ತಪ್ಪು ಮಾಡಿದ್ದನ್ನು ಸಮರ್ಥಿಸಿಕೊಳ್ಳುತ್ತಿದೆ. ಮುಖ್ಯಮಂತ್ರಿಗಳೇ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ್ದಾರೆ ಎನ್ನುತ್ತಿದ್ದಾರೆ. ಸಮಾರಂಭಕ್ಕೆ ಕರೆದರು ಅವರ ಪತ್ರ ಬಂದು ತಲುಪಿದ್ದು ಯಾವಾಗ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದರು.
ಈ ಬಗ್ಗೆ ಮುಖ್ಯಮಂತ್ರಿಗಳೇ ಉತ್ತರಿಸಬೇಕು. ಸತ್ಯ ಯಾವುದು, ಸುಳ್ಳು ಯಾವುದು ಎಂಬುದನ್ನು ತಿಳಿಸುವ ಧಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆಯೇ ಎಂದು ಸರಣಿ ಟ್ವೀಟ್ ಮೂಲಕ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಪ್ರತಿಯಾಗಿ ಇದೀಗ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ ಕೊಟ್ಟಿದ್ದಾರೆ.