ರಮೇಶ್ ಕುಮಾರ್ ಅವರದ್ದು ಸ್ಯಾಡಿಸ್ಟ್ ಮನೋಭಾವ: ಸುಧಾಕರ್
ಬೆಂಗಳೂರು, ಆಗಸ್ಟ್ 21: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಯಾಡಿಸ್ಟ್ (ವಿಕೃತ) ಮನಸ್ಥಿತಿಯವರು ಎಂದು ಅನರ್ಹ ಶಾಸಕ ಸುಧಾಕರ್ ಹೇಳಿದ್ದಾರೆ.
ನಿನ್ನೆ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮನ್ನು (ರಾಜೀನಾಮೆ ನೀಡಿದ್ದ ಶಾಸಕರು) ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬ ಉದ್ದೇಶದಿಂದಲೇ ಅವರು ನಮ್ಮನ್ನು ಅನರ್ಹ ಮಾಡಿದ್ದಾರೆ ಎಂದು ಸುಧಾಕರ್ ಹೇಳಿದರು.
ಕಾನೂನು ಬಾಹಿರವಾಗಿ ನಮ್ಮನ್ನು ಅನರ್ಹ ಮಾಡಿರುವುದು ಪಾಪದ ಕೆಲಸ ಎಂದ ಅವರು, ಪಾಪದ ಕೆಲಸದ ವಿರುದ್ಧ ನಾವು ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ, ಆದರೆ ನಮ್ಮ ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ ಎಂದರು.

ಈ ವಾರವೆಲ್ಲಾ ರಾಮಜನ್ಮಭೂಮಿ ಪ್ರಕರಣ ವಿಚಾರಣೆ ಸುಪ್ರಿಂನಲ್ಲಿ ನಡೆಯುತ್ತಿದೆ ಹಾಗಾಗಿ ನಮ್ಮ ಅರ್ಜಿ ವಿಚಾರಣೆಗೆ ಬಂದಿಲ್ಲ. ಹಾಗಾಗಿ ನಾವು ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸೇರಿ ಮುಂದೆ ಮಾಡಬೇಕಾದ ಕಾರ್ಯದ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಸುಧಾಕರ್ ಹೇಳಿದರು.
ನಮಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ. ನಾವು ಮತ್ತೆ ಶಾಸಕರಾಗಿ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ದುಡಿಯುತ್ತೇವೆ ಎಂದು ಸುಧಾಕರ್ ಭರವಸೆ ವ್ಯಕ್ತಪಡಿಸಿದರು.
ರಮೇಶ್ ಜಾರಕಿಹೊಳಿ ಅವರ ಬೆಂಗಳೂರು ನಿವಾಸದಲ್ಲಿ ನಿನ್ನೆ ಅನರ್ಹ ಶಾಸಕರು ಸಭೆ ನಡೆಸಿದ್ದರು. ಇಂದು ಕೆಲವು ಅನರ್ಹ ಶಾಸಕರು ದೆಹಲಿಗೆ ತೆರಳಿದ್ದಾರೆ.












Click it and Unblock the Notifications