Video: ಕಾಪ್ಸ್ ಸಂಘಟನೆ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಬೆಂಗಳೂರು, ಜು. 29: ಖಾಸಗಿ ಅನುದಾನ ರಹಿತ ಇಂಗ್ಲೀಷ್ ಶಾಲಾ ಆಡಳಿತ ಮಂಡಳಿ ಒಕ್ಕೂಟ ಕ್ಯಾಮ್ಸ್ ನ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.
ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ಯಾಲನಗರದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದ್ದು, ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿರುವ ಶಶಿಕುಮಾರ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಜಾಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಬೃಂದಾವನ್ ಪ್ರಾಪರ್ಟಿಯಲ್ಲಿ ಹೂಡಿಕೆ ಮಾಡಿದವರಿಗೆ ಮಹಾ ಮೋಸ
ಮುತ್ಯಾನಗರದ ಮನೆಯ ಕಾರಿನಿಂದ ಇಳಿಯುವಾಗ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿ ಹಿಂದಿನಿಂದ ಬಂದು ಲಾಂಗ್ ನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಆತ್ಮ ರಕ್ಷಣೆಗಾಗಿ ಶಶಿಕುಮಾರ್ ಪಿಸ್ತೂಲು ಹೊರ ತೆಗೆಯುತ್ತಿದ್ದಂತೆ ನಾಲ್ವರು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ತೊಡೆ ಹಾಗೂ ಕೈಗೆ ಸ್ವಲ್ಪ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು ಶಶಿಕುಮಾರ್ ಮನೆಗೆ ಭದ್ರತೆಯನ್ನು ಒದಗಿಸಿದ್ದಾರೆ.
ಅನುದಾನ ರಹಿತ ಖಾಸಗಿ ಶಾಲೆಗಳ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಶಶಿಕುಮಾರ್ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ. ಖಾಸಗಿ ಶಾಲಾ ಶಿಕ್ಷಕರಿಗೆ ಪರಿಹಾರ ಹಾಗೂ ಲಸಿಕೆ ನೀಡುವಂತೆ ಹೋರಾಟ ನಡೆಸಿದ್ದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆಗಳ ತೆರೆಯುವ ಸಂಬಂಧ ಸರ್ಕಾರ ರಚಿಸಿದ್ದ ಸಮಿತಿಯನ್ನು ಸಹ ಪ್ರತಿನಿಧಿಸಿದ್ದರು.
ಖಾಸಗಿ ಶಾಲೆಗಳು ಹಾಗೂ ಸರ್ಕಾರದ ನಡುವೆ ಸಮನ್ವಯ ಕೊಂಡಿಯಂತೆ ಗುರುತಿಸಿಕೊಂಡಿರುವ ಶಶಿಕುಮಾರ್ ಹತ್ಯೆಗೆ ಯತ್ನಿಸಿದ್ದು, ಶಾಲಾ ವಲಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದೆ.
Recommended Video
ಒನ್ ಇಂಡಿಯಾಗೆ ಪ್ರತಿಕ್ರಿಯೆ: ಕರ್ನಾಟಕ ಸರ್ಕಾರದ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಸಿದಂತೆ ಈ ಹಿಂದೆ ಒನ್ ಇಂಡಿಯಾ ಕನ್ನಡ ಜತೆ ಡಿ. ಶಶಿಕುಮಾರ್ ಮಾತನಾಡಿದ್ದರು. ಸರ್ಕಾರ ಕಳೆದ ಐದು ವರ್ಷದಿಂದ ಪಠ್ಯ ಕ್ರಮವನ್ನು ಪರಿಷ್ಕರಣೆ ಮಾಡದೇ ಮಕ್ಕಳಿಗೆ ಅನ್ಯಾಯ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.