ಕೋವಿಡ್ ಲಸಿಕೆ ಪಡೆಯಲು ಹಿರಿಯ ನಾಗರಿಕರಿಗೆ ವಾಹನ ವ್ಯವಸ್ಥೆ: ಡಿಸಿ ಜೆ. ಮಂಜುನಾಥ್
ಬೆಂಗಳೂರು, ಮಾ. 20: ಹಿರಿಯ ನಾಗರಿಕರಿಗೆ ಯಲಹಂಕ ಕ್ಷೇತ್ರದಲ್ಲಿ ವಿಶೇಷ ವಾಹನ ವ್ಯವಸ್ಥೆ ಕಲ್ಪಿಸಿ ಕೋವಿಡ್ ಲಸಿಕಾ ಕೇಂದ್ರಕ್ಕೆ ಕರೆದೊಯ್ದು ಲಸಿಕೆ ವಿತರಿಸುವ ಕಾರ್ಯವನ್ನು ಇಂದು ಪ್ರಾರಂಭಿಸಲಾಗಿದೆ. ದಾಸನಪುರ ಹೋಬಳಿಯಲ್ಲೂ ಇದೇ ರೀತಿ ವ್ಯವಸ್ಥೆ ರೂಪಿಸಿ ಹೆಚ್ವು ಹಿರಿಯ ನಾಗರೀಕರಿಗೆ ಲಸಿಕೆ ಸಿಗುವಂತೆ ಮಾಡಲಾಗುವುದು ಎಂದು ಬಿಡಿಎ ಅಧ್ಯಕ್ಷ, ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಹೇಳಿದ್ದಾರೆ. ಅವರು ಇಂದು ದಾಸನಪುರ ಹೋಬಳಿಯ ಕಮ್ಮಸಂದ್ರ ಗ್ರಾಮದಲ್ಲಿ ನಡೆದ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರು, ಈ ವರೆಗೆ ಶೇ. 90ರಷ್ಟು ಆರೋಗ್ಯ ಕಾರ್ಯಕರ್ತರು ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಇದೀಗ ಎರಡನೇ ಹಂತದಲ್ಲಿ ಮುಂಚೂಣಿ ಕೊರೊನಾ ಯೋಧರಿಗೆ ಲಸಿಕೆ ಕೊಡಲಾಗುತ್ತಿದೆ. ಜೊತೆಗೆ 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ 45 ರಿಂದ 59 ವರ್ಷ ವಯೋಮಿತಿಯೊಳಗಿನ ಅಸ್ವಸ್ಥತೆಯುಳ್ಳ ಸಾರ್ವಜನಿಕರಿಗೆ ಲಸಿಕೆ ಕೊಡಲಾಗುತ್ತಿದೆ ಎಂದರು.
ಹಿರಿಯ ನಾಗರಿಕರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಲಸಿಕೆ ವಿತರಿಸಿ ನಂತರ ಅವರ ಮನೆಗಳಿಗೆ ವಾಪಸು ತಲುಪಿಸಲು ವಾಹನ ವ್ಯವಸ್ಥೆ ಮಾಡಲಾಗಿದೆ. ಮಾಕಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಲಸಿಕೆ ನೀಡಲಾಗುತ್ತಿದ್ದು ಕಮ್ಮಸಂದ್ರ ಗ್ರಾಮದ ಎಲ್ಲ ಹಿರಿಯ ನಾಗರೀಕರು ಈ ವ್ಯವಸ್ಥೆಯನ್ನು ಬಳಸಿಕೊಂಡು ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂದು ಜೆ. ಮಂಜುನಾಥ್ ಮನವಿ ಮಾಡಿದರು.

ಕೊರೋನಾ ಸೋಂಕಿನ ಎರಡನೇ ಅಲೆ ತಲೆದೋರುತ್ತಿದ್ದು, ಸೋಂಕು ತಡೆಯುವಲ್ಲಿ ಗ್ರಾಮಸ್ಥರು ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.












Click it and Unblock the Notifications