ರಾಜ್ಯದಲ್ಲಿ ವಿದ್ಯಾರ್ಥಿಗಳ ಕೈಗೆ ಡ್ರಗ್ಸ್‌ ಸಿಗದಂತೆ ಕ್ರಮ: ಪ್ರಕರಣಗಳ ಅಪ್ಡೇಟ್ ಕೊಟ್ಟ ಗೃಹ ಸಚಿವ

ಬೆಂಗಳೂರು, ಜುಲೈ 18: ಸರ್ಕಾರವು ಡ್ರಗ್ಸ್ ಮುಕ್ತ ಕರ್ನಾಟಕ‌ ನಿರ್ಮಾಣದ ಘೋಷಣೆಯನ್ನು ಈಗಾಗಲೇ ಮಾಡಿದೆ. ಅದರ ಮುಂದುವರಿದ ಭಾಗವಾಗಿ ಸೂಕ್ತ ಕ್ರಮಗಳ ಮೂಲಕ ಯಾವುದೇ ಕಾರಣಕ್ಕು ಉಡ್ತಾ ಕರ್ನಾಟಕ ಆಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ್ ಸರ್ಜಿ ಅವರು ಪ್ರಸ್ತಾಪಿಸಿದ, 'ರಾಜ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗುತ್ತಿರುವುದು ಗಮನಕ್ಕೆ ಬಂದಿದೆಯೇ, ದಾಖಲಾಗಿರುವ ಪ್ರಕರಣಗಳೆಷ್ಟು ಮತ್ತು ಎಷ್ಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಆಗಿದೆ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು‌.

G Parameshwara said That Drugs will not Be Allowed in Hands of Students in Karnataka

ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡುವ ಪೆಡ್ಲರ್‌ಗಳ ಮೇಲೆ‌ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಕಳೆದ ವರ್ಷ 2023ರಲ್ಲಿ 2409 ಶಾಲಾ-ಕಾಲೇಜುಗಳಲ್ಲಿ 3.95 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗಿತ್ತು.

ಪ್ರಸಕ್ತ ವರ್ಷ ಜೂನ್‌ನಲ್ಲಿ 3,600 ಶಾಲಾ-ಕಾಲೇಜುಗಳಲ್ಲಿ 5.50 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ್ದೇವೆ‌. ಯಾವುದೇ ಕಾರಣಕ್ಕು ವಿದ್ಯಾರ್ಥಿಗಳ ಕೈಗೆ ಡ್ರಗ್ಸ್ ಸಿಗಬಾರದು ಎಂಬುದು ನಮ್ಮ ಉದ್ದೇಶ. ಅವರಿಗೆ ಜಾಗೃತಿ ಮೂಡಿಸಿದರೆ ಡ್ರಗ್ಸ್ ತೆಗೆದುಕೊಳ್ಳಲು ಹಿಂಜರಿಯುತ್ತಾರೆ ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.

ಪ್ರಕರಣಗಳು ಎಷ್ಟಿವೆ, ಶಿಕ್ಷೆ ಡಿಟೇಲ್ಸ್ ಕೊಟ್ಟ ಸಚಿವರು

2022ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ 6406 ಪ್ರಕರಣ ದಾಖಲಿಸಿದ್ದು, 6164 ಆರೋಪಿಗಳನ್ನು ಬಂಧಿಸಲಾಗಿದೆ. 3881 ಪ್ರಕರಣಗಳು ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಇದರಲ್ಲಿ 2365 ಜನರಿಗೆ ಶಿಕ್ಷೆಯಾಗಿದೆ. 2023ರಲ್ಲಿ 6764 ಪ್ರಕರಣಗಳಲ್ಲಿ 2280 ಬಂಧಿಸಲಾಗಿದೆ. 4187 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, 2280 ಆರೋಪಿತರಿಗೆ ಶಿಕ್ಷೆಯಾಗಿದೆ. ಪ್ರಸಕ್ತ ವರ್ಷ ಜುಲೈ 10ರವರೆಗೆ 1791 ಪ್ರಕರಣಗಳಲ್ಲಿ 1179 ಆರೋಪಿಗಳನ್ನು ಬಂಧಿಸಲಾಗಿದೆ. 884 ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು 189 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಮಾಹಿತಿ ನೀಡಿದರು.

G Parameshwara said That Drugs will not Be Allowed in Hands of Students in Karnataka

150 ಕೋಟಿ ರೂ.‌ ಮೌಲ್ಯದ ಡ್ರಗ್ಸ್ ನಾಶ

ರಾಜ್ಯದಲ್ಲಿ ಸುಮಾರು 150 ಕೋಟಿ ರೂ.‌ ಮೌಲ್ಯದ ಡ್ರಗ್ಸ್ ನಾಶಪಡಿಸಿದ್ದೇವೆ. 10 ಟನ್ ಗಾಂಜಾ, 250 ಕೆಜಿಯಷ್ಟು ಸಿಂಥೆಟಿಕ್ ಡ್ರಗ್ಸ್ ಸುಟ್ಟು ಹಾಕಲಾಗಿದೆ. ಯುವಕರು ಮಾದಕ ವ್ಯಸನದಲ್ಲಿ ಸಿಲುಕಿಕೊಂಡು ನರಳುತ್ತಿದ್ದಾರೆ. ಹೀಗಾಗಿ ಡ್ರಗ್ಸ್ ವಿರುದ್ಧವಾಗಿ ನಿರಂತರವಾದ ಹೋರಾಟ ನಡೆಸಲಾಗುತ್ತಿದೆ ಎಂದರು.

ವಿದೇಶದಿಂದ ವಿದ್ಯಾರ್ಥಿ ವೀಸಾದ ಮೇಲೆ ಬಂದು ದಂಧೆಗೆ ಇಳಿಯುತ್ತಿದ್ದಾರೆ. 150 ವಿದೇಶಿಗರನ್ನು ಗುರುತಿಸಿ, ಅಂಥವರನ್ನು ಬಂಧಿಸಿ ವಾಪಸ್ ಕಳಿಹಿಸಲಾಗಿದೆ. ವಿದೇಶಿ ಯುವಕರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. ಸಿಐಡಿ ಮಾದಕದ್ರವ್ಯ ವಿಭಾಗವನ್ನು ಬಲಪಡಿಸುವ ನಿಟ್ಟಿನಲ್ಲಿ ಎಡಿಜಿಪಿ ಮತ್ತು ಐಜಿಪಿ ಹುದ್ದೆಯನ್ನು ಸೃಜಿಸಲಾಗಿದೆ. ರಾಜ್ಯದಲ್ಲಿ 43 ಸೆನ್ (ಸೈಬರ್, ನಾರ್ಕೋಟಿಕ್ ಮತ್ತು ಎಕನಾಮಿಕ್ ಅಫೆನ್ಸ್) ಸ್ಥಾಪಿಸಲಾಗಿದ್ದು, ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ವಿದೇಶದಿಂದ ಬರುವ ಪಾರ್ಸೆಲ್‌ಗಳ ಮೇಲೆ ನಿಗಾವಹಿಸಲಾಗಿದೆ. ಡ್ರಗ್ಸ್ ಕುರಿತು ಸಾರ್ಜಜನಿಕತು ಮಾಹಿತಿ ನೀಡಲು 'ಮ್ಯಾಪ್‌ಡ್ರಗ್ಸ್' ಮೊಬೈಲ್ ಅಪ್ಲಿಕೇಶನ್ ತರಲಾಗಿದೆ. ಇದರ‌ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದರು.

ಪೊಲೀಸ್ ಭಾಗಿಯಾದರೆ ಅವರ ವಿರುದ್ಧವು ಕ್ರಮ

ಸದಸ್ಯ ಡಾ. ಧನಂಜಯ್ ಸರ್ಜಿ ಅವರು, ಡಾರ್ಕ್‌ವೆಬ್ ಮೂಲಕ ಡ್ರಗ್ಸ್ ಬರುತ್ತಿದೆ. ಈ ಬಗ್ಗೆ ಗಮನಹರಿಸಬೇಕು. ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ತೆಗೆದುಕೊಂಡು ಅಮಲಿನಲ್ಲಿ ಓಡಾಡುವ ವೀಡಿಯೋಗಳು ವೈರಲ್ ಆಗುತ್ತಿವೆ ಎಂದರು. ಈ ವೇಳೆ ಕಾಂಗ್ರೆಸ್ ಸದಸ್ಯ ಸಲೀಂ ಅಹ್ಮದ್ ಅವರು, ದಂಧೆಯಲ್ಲಿ ಪೊಲೀಸರು ಭಾಗಿಯಾಗುತ್ತಿದ್ದಾರೆ. ಇದಕ್ಕೆ ನಿರ್ಧ್ಯಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಧ್ವನಿ ಎತ್ತಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ ಅವರು ಪ್ರತಿಕ್ರಿಯಿಸಿ, ಈಗಾಗಲೇ ಸಾವಿರಾರು ಕೇಸ್‌ಗಳನ್ನು ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ.‌ ಪೊಲೀಸರು ಭಾಗಿಯಾಗಿರುವುದು ಕಂಡು ಬಂದರೆ, ಅವರ ವಿರುದ್ಧವೂ ಯಾವುದೇ ರೀತಿಯ ಮುಲಾಜಿಲ್ಲದೆ‌ ಕ್ರಮ ಜರುಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+