ಆಸ್ತಿ ಜಪ್ತಿ, ಬಂಧನ ಭೀತಿಯಲ್ಲಿ ಗಾಲಿ ಜನಾರ್ದನ ರೆಡ್ಡಿ!
ಬೆಂಗಳೂರು, ನವೆಂಬರ್ 05: ಉತ್ತರಕನ್ನಡದ ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರನ್ನು ವಿದೇಶಕ್ಕೆ ಸಾಗಿಸಿದ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (ಎಸ್ಐಟಿ)ಕೈಗೆತ್ತಿಕೊಳ್ಳುವುದು ಖಚಿತವಾಗಿದೆ. ಈ ಮೂಲಕ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಇತರ ಆರೋಪಿಗಳಿಗೆ ಆಸ್ತಿ ಜಪ್ತಿ, ಬಂಧನ ಭೀತಿ ಶುರುವಾಗಿದೆ.
ಬೇಲೇಕೇರಿ ಬಂದರು ಎಸ್ ಐಟಿಯಿಂದ ಮರು ತನಿಖೆ
ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಣೆ ಪ್ರಕರಣದ ತನಿಖೆಯ ಮೇಲುಸ್ತುವಾರಿಗಾಗಿ ರಚಿಸಿರುವ ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಮಾತನಾಡಿದ ಸಮಿತಿಯ ಅಧ್ಯಕ್ಷ, ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್, ಅಕ್ರಮ ಅದಿರು ಸಾಗಣೆ ಕುರಿತಂತೆ ಸಿಬಿಐ ಕೈಗೆತ್ತಿಕೊಂಡಿದ್ದ 15 ಪ್ರಕರಣಗಳ ಪೈಕಿ ಈಗ ಎರಡು ಪ್ರಕರಣಗಳ ತನಿಖೆಯನ್ನು ಮುಕ್ತಾಯಗೊಳಿಸಿದೆ. ಇದರ ಬಗ್ಗೆ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಎಸ್ಐಟಿ ತನಿಖೆ ನಡೆಸುವ ಬಗ್ಗೆ ಸಚಿವ ಸಂಪುಟಕ್ಕೆ ಶಿಫಾರಸು ಮಾಡಲಾಗಿದೆ ಎಂದರು.
'ಅಕ್ರಮವಾಗಿ ಅದಿರು ಸಾಗಿಸಿದ ಆರೋಪ ಹೊತ್ತಿರುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆಯೂ ಉಪ ಸಮಿತಿ ಚರ್ಚಿಸಿದೆ. ಮುಟ್ಟುಗೋಲು ಹಾಕಿಕೊಳ್ಳಲು ತಾಂತ್ರಿಕ ಹಾಗೂ ಕಾನೂನಾತ್ಮಕ ಅಡಚಣೆ ಇದ್ದು, ಕಾನೂನು ಇಲಾಖೆಯಿಂದ ಅಭಿಪ್ರಾಯ ಪಡೆಯಲಾಗಿದೆ. ಕಾನೂನು ಇಲಾಖೆಯ ಅಭಿಪ್ರಾಯ ಆಧಾರ ಮೇಲೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಪಾಟೀಲ್ ಹೇಳಿದರು.
ನಾಡಗೀತೆಗೆ ದೃಶ್ಯನಮನ ಸಲ್ಲಿಸಿದ ಗಾಲಿ ಜನಾರ್ದನ ರೆಡ್ಡಿ
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಥಮ ಆರೋಪಿ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಶಾಸಕರಾದ ಸತೀಶ್ ಸೈಲ್, ನಾಗೇಂದ್ರ, ಸುರೇಶ್ಬಾಬು, ಆನಂದ್ಸಿಂಗ್ ವಿರುದ್ಧವೂ ಚಾರ್ಜ್ಶೀಟ್ ಸಲ್ಲಿಸಲಾಗಿತ್ತು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸೇರಿದಂತೆ 18 ಮಂದಿಯನ್ನು ಇದರಲ್ಲಿ ಉಲ್ಲೇಖಿಸಲಾಗಿತ್ತು. ನಂತರ ಎಲ್ಲರಿಗೂ ಜಾಮೀನು ಸಿಕ್ಕಿದ್ದು, ಸಿಬಿಐ ಕೂಡಾ ಈ ಪ್ರಕರಣದ ತನಿಖೆ ಕೈಬಿಟ್ಟಿದೆ.