ಗಣೇಶ ಹಬ್ಬ: ಪ್ರತಿಷ್ಠಾಪನೆ, ವಿಸರ್ಜನೆ ಬಗ್ಗೆ ಪಾಲಿಕೆ ಮಾರ್ಗಸೂಚಿ ಏನಿದೆ?
ಬೆಂಗಳೂರು ಆಗಸ್ಟ್ 26: ಗಣೇಶ ಚತುರ್ಥಿ ಸಮೀಸುತ್ತಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಂಬಂಧ ಬರುವ ಅರ್ಜಿಗಳಿಗೆ ತ್ವರಿತವಾಗಿ ಪರಿಶೀಲಿಸಿ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.
ಗಣೇಶ ಚತುರ್ಥಿ ಆಚರಣೆ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತರು, ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಯನ್ನು ಒಳಗೊಂಡ ಅಧಿಕಾರಿಗಳು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ನೀಡುವ ವ್ಯವಸ್ಥೆ ಕಲ್ಪಿಸಿದ್ದಾರೆ. ಅಧಿಕಾರಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕೋರಿ ಬರುವ ಅರ್ಜಿಗಳನ್ನ ತ್ವರಿತವಾಗಿ ವಿಲೇವಾರಿ ಮಾಡುವಂತೆ ಅವರು ಸೂಚಿಸಿದರು.
ಮುಂಜಾಗ್ರತಾ ಕ್ರಮವಾಗಿ ಎಸ್ಡಿಆರ್ಎಫ್ ಹಾಗೂ ಅಗ್ನಿಶಾಮಕ ದಳ ಇಲಾಖೆಗೆ ಅಗ್ನಿಶಾಮಕ ವಾಹನ ಹಾಗೂ ಅಗತ್ಯ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲು ಕೂಡಲೆ ಪತ್ರ ಬರೆಯಬೇಕು ಯೋಜನಾ ವಿಭಾಗದ ವಿಶೇಷ ಆಯುಕ್ತರಿಗೆ ತುಷಾರ್ ಗಿರಿನಾಥ್ ತಿಳಿಸಿದರು.
ಕೋವಿಡ್ ಸಂಪೂರ್ಣವಾಗಿ ಕಡಿಮೆಯಾದ ಹಿನ್ನೆಲೆಯಲ್ಲಿ ಗಣೇಶ ಉತ್ಸವ ಸಮಿತಿಗಳು, ಉತ್ಸವ ಮಂಡಳಿಗಳು, ಸಂಘ-ಸಂಸ್ಥೆಗಳು ವಿಜೃಂಭಣೆಯ ಗಣೇಶೋತ್ಸವ ಆಚರಿಸಲು ನಿರ್ಧರಿಸಿವೆ. ಈ ಮಧ್ಯೆ ಸರ್ಕಾರ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿತ್ತು. ಈ ಸಂಬಂಧ ಬೆಂಗಳೂರು ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅಗತ್ಯ ಸಿದ್ಧತೆ, ಸೂಕ್ತ ಭದ್ರತೆ, ವಿಸರ್ಜನೆ ಕುರಿತು ಶುಕ್ರವಾರ ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಪಾಲಿಕೆ ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ತಿಳಿಸಿದ ಹಲವು ಸೂಚನೆಗಳು ಹೀಗಿವೆ.

ನಗರ ವ್ಯಾಪ್ತಿಯಲ್ಲಿ ಗಣೇಶ ವಿಸರ್ಜನೆಗೆ ವ್ಯವಸ್ಥೆ
ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಪ್ರಮುಖ ಕಲ್ಯಾಣಿಗಳಾದ ಹಲಸೂರು, ಯಡಿಯೂರು, ಸ್ಯಾಂಕಿ, ಹೆಬ್ಬಾಳ ಸೇರಿದಂತೆ ಇನ್ನಿತರೆ ಪ್ರಮುಖ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕಲ್ಯಾಣಿಗಳ ಬಳಿ ಪ್ರತ್ಯೇಕ ತಂಡಗಳನ್ನು ನಿಯೋಜಿಸಿಕೊಳ್ಳಿ. ಕೆರೆಗಳ ಬಳಿ ನುರಿತ ಈಜುಗಾರರನ್ನು ನಿಯೋಜಿಸಬೇಕು ಎಂದರು.

ವಿಘ್ನ ಲೋಪವಾಗದಂತೆ ಎಚ್ಚರವಹಿಸಿ
ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ವೇಳೆ ಗಣೇಶ ಮೂರ್ತಿಗಳಿಗೆ ಯಾವುದೇ ರೀತಿಯ ವಿಘ್ನ ಲೋಪವಾಗದಂತೆ ವಿಸರ್ಜಿಸಲು ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಬೇಕು. ವಿಸರ್ಜನಾ ಸ್ಥಳದಲ್ಲಿ ಸೂಕ್ತ ಭದ್ರತೆ ಒದಗಿಸಲು ಬಿಬಿಎಂಪಿ ಅಧಿಕಾರಿಗಳು, ಮಾರ್ಷಲ್ ಗಳ ನಿಯೋಜನೆ, ಬ್ಯಾರಿಕೇಡ್, ದೀಪಗಳ ಅಳವಡಿಕೆ, ಸಿಸಿ ಟಿವಿ, ಕ್ರೇನ್ ಸೇರಿದಂತೆ ಇನ್ನಿತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿರಬೇಕು. ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹೇಳಿದರು.

ಅಗತ್ಯವಿದ್ದಲ್ಲಿ ಮೊಬೈಲ್ ಟ್ಯಾಂಕರ್ ವ್ಯವಸ್ಥೆ ಮಾಡಿ
ಕಲ್ಯಾಣಿಗಳ ವ್ಯವಸ್ಥೆ ಇಲ್ಲದಿರುವ ಕಡೆ ಹೆಚ್ಚುವರಿಯಾಗಿ ತಾತ್ಕಾಲಿಕ ಮೊಬೈಲ್ ಟ್ಯಾಂಕರ್ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ತೆರಳುವ ಮಾರ್ಗದಲ್ಲಿ ವಿದ್ಯುತ್ ದೀಪಗಳು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ವಿಸರ್ಜನಾ ಸ್ಥಳದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಘನತ್ಯಾಜ್ಯ ವಿಭಾಗದಿಂದ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು.

63 ಏಕಗವಾಕ್ಷಿ ಕೇಂದ್ರ
ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿಲು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳು ಹಾಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಲುವಾಗಿ 421 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಮತ್ತು 37 ತಾತ್ಕಾಲಿಕ ಕಲ್ಯಾಣಿಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಸದರಿ ಮಾಹಿತಿಗಳ ವಿವರಗಳ ಪಟ್ಟಿಗಳ ಪ್ರತಿಯನ್ನು ಲಗತ್ತಿಸಿರಬೇಕು.
ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯದ ಆಯುಕ್ತರು, ವಲಯ ಜಂಟಿ ಆಯುಕ್ತರು, ಆಡಳಿತದ ವಿಭಾಗದ ಉಪ ಆಯುಕ್ತರು, ಮುಖ್ಯ ಅಭಿಯಂತರರು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications