ಬೆಂಗಳೂರಲ್ಲಿ ಈ ಬಾರಿ 1654 ಪಿವಿಪಿ ಗಣೇಶ ವಿಗ್ರಹ ಬಳಕೆ
ಬೆಂಗಳೂರು, ಸೆಪ್ಟೆಂಬರ್ 19 : ಬೆಂಗಳೂರು ನಗರದಲ್ಲಿ ಈ ಬಾರಿ 1654 ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ ಬಳಕೆ ಮಾಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ಹೈಕೋರ್ಟ್ಗೆ ಈ ಕುರಿತು ಪ್ರಮಾಣ ಪತ್ರವನ್ನು ಸಲ್ಲಿಸಿದೆ. ಗಣೇಶ ಚತುರ್ಥಿ ದಿನವಾದ ಸೆಪ್ಟೆಂಬರ್ 2ರಂದು 1654 ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳನ್ನು ವಿಸರ್ಜನೆ ಮಾಡಲು ತರಲಾಗಿತ್ತು.
ಸೆಪ್ಟೆಂಬರ್ 2ರಂದು ನಗರದಲ್ಲಿ 1,91,247 ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಗಿದೆ. ಇವುಗಳಲ್ಲಿ 1654 ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳಿದ್ದವು. ಅವುಗಳನ್ನು ವಿಸರ್ಜನೆ ಮಾಡಲು ಅವಕಾಶ ನೀಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳನ್ನು ಬಳಕೆ ಮಾಡದಂತೆ ಜನರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಲವು ಕ್ರಮಗಳನ್ನು ಕೈಗೊಂಡಿತ್ತು. ಈ ಜಾಗೃತಿ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಮಂಡಳಿ ಹೇಳಿದೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಗಣೇಶ ಚತುರ್ಥಿಗೆ ಕೆಲವು ದಿನಗಳು ಇರುವಾಗ ಕೆಂಗೇರಿಯಲ್ಲಿ ಗಣೇಶ ತಯಾರಿಕಾ ಶೆಡ್ಗಳ ಮೇಲೆ ದಾಳಿ ಮಾಡಿದ್ದರು. ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ನಿರ್ಮಾಣ ಮಾಡಿದ್ದ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದು, ಘಟಕಕ್ಕೆ ಬೀಗ ಜಡಿದಿದ್ದರು.
ಬೆಂಗಳೂರು ನಗರದಲ್ಲಿ ಪಿಓಪಿ ಗಣೇಶ ವಿಗ್ರಹದ ಬದಲು ಪರಿಸರ ಸ್ನೇಹಿ ವಿಗ್ರಹಗಳನ್ನು ಬಳಕೆ ಮಾಡಿ ಎಂದು ದೊಡ್ಡ ಅಭಿಯಾನವನ್ನು ಬಿಬಿಎಂಪಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಕೈಗೊಂಡಿದ್ದವು.












Click it and Unblock the Notifications