ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 15 ದಿನ ಗಡುವು
ಬೆಂಗಳೂರು, ಮೇ 6 : ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಕಸ ಮತ್ತು ಪ್ಲಾಸ್ಟಿಕ್ ಸಮಸ್ಯೆಯನ್ನು ಬಗೆಹರಿಸಲು ಬಿಬಿಎಂಪಿ ಅಧಿಕಾರಿಗಳು 15 ದಿನಗಳಲ್ಲಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಗಡುವು ನೀಡಿದ್ದಾರೆ.
ಸೋಮವಾರ ಕೆ.ಆರ್.ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳಲ್ಲಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರರೊಂದಿಗೆ ಪರಿಶೀಲನೆ ನಡೆಸಿದ ರಾಮಲಿಂಗಾ ರೆಡ್ಡಿ, ಅಂತಿಮ ಗಡುವಿನೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಲೋಕಸಭೆ ಚುನಾವಣೆ ನೆಪ ಹೇಳಿಕೊಂಡು ಅಧಿಕಾರಿಗಳು ಕಸ ವಿಲೇವಾರಿ ಬಗ್ಗೆ ಗಮನಹರಿಸಿಲ್ಲ. ಕಳೆದ 2 ತಿಂಗಳಿನಿಂದ ಕಸ ವಿಲೇವಾರಿ ಕಾರ್ಯ ಸಮರ್ಪಕವಾಗಿ ನಡೆದಿಲ್ಲ ಎಂದ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು. ಕಸದ ಗುತ್ತಿಗೆದಾರರಿಗೆ ತಪ್ಪದೇ ಬಿಲ್ ಪಾವತಿಯಾಗುತ್ತಿದೆ. ಆದರೆ, ಕಸ ವಿಲೇವಾರಿ ಆಗುತ್ತಿಲ್ಲ ಎಂದು ಸಚಿವರು ದೂರಿದರು. [ಕಸದ ಸಮಸ್ಯೆ ನಿವಾರಣೆಗೆ ವಿದೇಶಿ ತಂತ್ರಜ್ಞಾನ]
ಕಸ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿಯಂತ್ರಣದ ಬಗ್ಗೆ 15 ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಈ ವಿಚಾರದ ಕುರಿತು ಬಿಬಿಎಂಪಿಯಲ್ಲಿ ಮೇ 25ರಂದು ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತದೆ. ಆಗಲೂ ಸಮಸ್ಯೆ ಬಗೆಹರಿಯದಿದ್ದರೆ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಸೋಮಾರಿಗಳು : ಕಸ ವಿಲೇವಾರಿ ಕುರಿತು ಬಿಬಿಎಂಪಿ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರು ಯಾವುದೇ ಕ್ರಮ ಕೈಗೊಂಡಿಲ್ಲ. ಎಲ್ಲರೂ ತುಂಬಾ ಸೋಮಾರಿಗಳು ಎಂದು ಮೇಯರ್ ಕಟ್ಟೆ ಸತ್ಯನಾರಾಯಣ ಆರೋಪಿಸಿದ್ದಾರೆ.
ನಗರದಲ್ಲಿ ಕಸ ಸಮಸ್ಯೆ ಹೆಚ್ಚುತ್ತಲೇ ಇದ್ದು ಜಂಟಿ ಆಯುಕ್ತರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಸ ವಿಲೇವಾರಿ ನಿರ್ವಹಣೆಯನ್ನು ಕೇವಲ ಕಿರಿಯ ಆರೋಗ್ಯಾಧಿಕಾರಿಗಳಷ್ಟೇ ಮಾಡುತ್ತಿದ್ದು, ಇದರಲ್ಲಿ ಹಿರಿಯ ಆರೋಗ್ಯಾಧಿಕಾರಿಗಳು ಕೈ ಜೋಡಿಸುತ್ತಿಲ್ಲ ಎಂದು ಅವರು ದೂರಿದರು.












Click it and Unblock the Notifications