'ಗೌರಿ ಲಂಕೇಶ್ ಹಂತಕರ ಸುಳಿವು ಪತ್ತೆ, ಶೀಘ್ರದಲ್ಲಿಯೇ ಬಂಧನ'
ಬೆಂಗಳೂರು, ನವೆಂಬರ್ 11 : ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಇಂದು (ನವೆಂಬರ್ 11) ರಂದು ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, "ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಬಗ್ಗೆ ಎಸ್ ಐಟಿಯಿಂದ ಸಂಪೂರ್ಣ ಮಾಹಿತಿ ಲಭ್ಯವಾಗಿದೆ. ಇನ್ನಷ್ಟು ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದು, ಈ ಬಗ್ಗೆ ಮಾಹಿತಿ ನೀಡಲಾಗುವುದಿಲ್ಲ ಎಂದು ಹೇಳಿದರು.

ಇನ್ನು ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣವನ್ನೂ ಉಲ್ಲೇಖಿಸಿರುವ ರಾಮಲಿಂಗಾ ರೆಡ್ಡಿ ದಾಭೋಲ್ಕರ್ ಹತ್ಯೆ ಪ್ರಕರಣದ ಆರೋಪಿಗಳು ಇನ್ನೂ ಸಿಕ್ಕಿಲ್ಲ, ಮಹಾರಾಷ್ಟ್ರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆದರೆ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಬಗ್ಗೆ ಸ್ಪಷ್ಟ ಸುಳಿವು ದೊರೆತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.
ಗೌರಿ ಹತ್ಯೆ ಆರೋಪಿಗಳ ಸುಳಿವು ಸಿಕ್ಕಿದೆ, ಶೀಘ್ರದಲ್ಲಿಯೇ ಬಂಧಿಸುತ್ತೇವೆ ಎಂದು ಗೃಹ ಸಚಿ ರಾಮಲಿಂಗ ರೆಡ್ಡಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳುತ್ತಾ ಬಂದಿದ್ದಾರೆ. ಇನ್ನು ಎಂ.ಎಂ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿ ಎರಡು ವರ್ಷಗಳೆ ಉರುಳಿದವು. ಆದರೆ, ಇದುವರೆಗೆ ಈ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.
ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ರನ್ನು ರಾಜರಾಜೇಶ್ವರಿ ನಗರದ ಮನೆಯ ಮುಂಭಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಇದಾದ ನಂತರ ತನಿಖೆಗಾಗಿ ಎಸ್ಐಟಿ ರಚನೆ ಮಾಡಲಾಗಿತ್ತು. ಜತೆಗೆ ಹಂತಕರ ಸುಳಿವು ನೀಡಿದವರಿಗೆ ರಾಜ್ಯ ಸರಕಾರ 10 ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಿಸಿದೆ.












Click it and Unblock the Notifications