ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆಯೇ ಜಿಬಿಎ ಚುನಾವಣೆ ನಡೆಯಲಿದೆ ಎಂದು ಅವರು ಖಚಿತಪಡಿಸಿದ್ದಾರೆ.
ಬುಧವಾರ ಬೆಂಗಳೂರಿನ ಜಿಬಿಎ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ವಿಚಾರಗಳ ಕುರಿತು ತಮ್ಮ ನಿಲುವನ್ನು ವ್ಯಕ್ತಪಡಿಸಿದರು. "ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಯಾವಾಗ ನಡೆಯಲಿದೆ?" ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, "ಕೋರ್ಟ್ ನಿರ್ದೇಶನದ ಪ್ರಕಾರವೇ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ, ಈ ವಿಚಾರದಲ್ಲಿ ಕಾನೂನಿನ ಚೌಕಟ್ಟನ್ನು ಮೀರುವಂತಿಲ್ಲ" ಎಂದು ಸ್ಪಷ್ಟಪಡಿಸಿದರು.

ಆದಾಯಕ್ಕಿಂತ ಜನರ ಬದುಕು ಮುಖ್ಯ
ಈ ವರ್ಷ ಜಿಬಿಎಯಿಂದ ನಿರೀಕ್ಷಿಸುತ್ತಿರುವ ಆದಾಯದ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, "ಸದ್ಯಕ್ಕೆ ಆದಾಯ ಬರಲಿ ನೋಡೋಣ, ನಾವು ಕೇವಲ ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನರ ಬದುಕನ್ನು ರಕ್ಷಣೆ ಮಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ, ವಿದೇಶ ಪ್ರಯಾಣ ಬೇಡ ಎಂದು ಹೇಳುವಂತಹ ಕಷ್ಟ ಕಾಲದಲ್ಲಿ ಜನರಿಗೆ ಒಳ್ಳೆಯದಾಗಬೇಕು ಎಂಬುದೇ ನಮ್ಮ ಉದ್ದೇಶ" ಎಂದು ಹೇಳಿದರು.
ನೀಟ್ ಪರೀಕ್ಷೆ ರದ್ದು - ದೇಶಕ್ಕೆ ದೊಡ್ಡ ಅಪಮಾನ
ಇದೇ ವೇಳೆ ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, "ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯು ಇಡೀ ದೇಶಕ್ಕೆ ಆಗಿರುವ ದೊಡ್ಡ ಅಪಮಾನವಾಗಿದೆ. ಈ ಬಗ್ಗೆ ಕೇಂದ್ರ ಸಚಿವರು ಹಾಗೂ ಸಂಸದರು ದೇಶದ ಜನತೆಗೆ ಉತ್ತರಿಸಬೇಕು. ಇದೇ ಪ್ರಕರಣ ನಮ್ಮ ರಾಜ್ಯದಲ್ಲಿ ಆಗಿದ್ದರೆ ಇಷ್ಟು ಹೊತ್ತಿಗೆ ನಮ್ಮ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ವರ್ಷಗಟ್ಟಲೆ ಓದಿ ಅನೇಕ ಕನಸುಗಳನ್ನು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಇಂದು ತೀವ್ರ ಆಕ್ರೋಶಗೊಂಡಿದ್ದಾರೆ, ಅವರಿಗೆ ನ್ಯಾಯ ಸಿಗಬೇಕಿದೆ" ಎಂದು ತಿಳಿಸಿದರು












Click it and Unblock the Notifications