ರಾಜ್ಯದ ಸೇವಾ ವಲಯದ ಅಭಿವೃದ್ಧಿಗೆ ಕಾರ್ಯತಂತ್ರ:ಶೆಟ್ಟರ್
ಬೆಂಗಳೂರು, ನವೆಂಬರ್ 19: ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವೀಸಸ್ ಮಾಹಿತಿ ತಂತ್ರಜ್ಞಾನ ಬೆಂಗಳೂರಿನಲ್ಲಿ 2019 ರ ನವೆಂಬರ್ 26 ರಿಂದ 28 ರವರೆಗೆ ನಡೆಯಲಿದೆ.
ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಕರ್ಟೇನ್ ರೈಸರ್ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಉನ್ನತಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಚಿವ ಜಗದೀಶ್ ಶೆಟ್ಟರ್ ಅವರು, ''ಕರ್ನಾಟಕದಲ್ಲಿ ಸೇವಾ ವಲಯ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಇದನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕವಾದ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ ಮತ್ತು ವಿಶೇಷ ಆದ್ಯತೆಯನ್ನು ನೀಡಲಿದೆ. ಅಲ್ಲದೇ, ಈ ಮೂಲಕ ರಾಜ್ಯದ ಸೇವಾವಲಯದಿಂದ ದೇಶದ ಆರ್ಥಿಕ ಪ್ರಗತಿಗೆ ಗಣನೀಯವಾದ ಕೊಡುಗೆ ದೊರೆಯುವಂತೆ ಮಾಡಲಿದ್ದು, ರಾಜ್ಯವನ್ನು ಸೇವಾವಲಯದಲ್ಲಿ ನಂಬರ್ ಒನ್ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತಿದೆ" ಎಂದರು.
ಕರ್ನಾಟಕ ಸೇವಾ ವಲಯದ ಅಭಿವೃದ್ಧಿ
"ಕೇಂದ್ರ ಸರ್ಕಾರ ಸೇವಾ ವಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಇದಕ್ಕೆ ಪೂರಕವಾಗಿ ಕರ್ನಾಟಕ ಸರ್ಕಾರ ಸೇವಾ ವಲಯಕ್ಕೆ ಅಗತ್ಯ ಸೌಲಭ್ಯಗಳನ್ನು ನೀಡುತ್ತಿದೆ. ಈ ಮೂಲಕ ಕರ್ನಾಟಕ ಸೇವಾ ವಲಯದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತದೆ"ಎಂದು ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರು ಮಾತನಾಡಿ, ಸರ್ವೀಸ್ ಸೆಕ್ಟರ್ ಅಂದರೆ ಸೇವಾ ವಲಯವು ಭಾರತದ ಆರ್ಥಿಕತೆಯ 5 ಟ್ರಿಲಿಯನ್ ಡಾಲರ್ ನ ಗುರಿ ತಲುಪಲು ಇಂಜಿನ್ ಇದ್ದಂತೆ ಎಂದು ಅಭಿಪ್ರಾಯಪಟ್ಟರು.
ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ 5 ನೇ ಜಿಇಎಸ್ 2019 ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ. ವಿಶೇಷವಾಗಿ ಕರ್ನಾಟಕ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳು, ಅನಿಮೇಷನ್ ಮತ್ತು ವಿಶ್ಯುವಲ್ ಉದ್ಯಮ, ಶಿಕ್ಷಣ, ಆರೋಗ್ಯ ಸೇರಿದಂತೆ ಇನ್ನಿತರೆ ಪ್ರಮುಖ ವಲಯಗಳಲ್ಲಿ ನಾಯಕನ ಸ್ಥಾನದಲ್ಲಿ ನಿಂತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಅವರು ಹೇಳಿದರು.
ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ
ಇದೇ ವೇಳೆ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರು, "ಸೇವಾ ಕ್ಷೇತ್ರದಲ್ಲಿ ಕರ್ನಾಟಕ 2018-19 ನೇ ಸಾಲಿನಲ್ಲಿ ನಾಯಕನ ಸ್ಥಾನವನ್ನು ಅಲಂಕರಿಸಿದೆ. ಏಕೆಂದರೆ, ಒಟ್ಟಾರೆ ದೇಶದ ಸೇವಾ ರಫ್ತು ಪ್ರಮಾಣದಲ್ಲಿ ಶೇ.38 ರಷ್ಟು ಪಾಲನ್ನು ಕರ್ನಾಟಕ ಹೊಂದಿತ್ತು. ಇದಕ್ಕೆ ಪ್ರಮುಖ ಕಾರಣ ಕರ್ನಾಟಕದಲ್ಲಿ ಉತ್ಪಾದನೆ ಮತ್ತು ಸೇವಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಹಲವಾರು ಉಪಕ್ರಮಗಳನ್ನು ಕೈಗೊಂಡಿರುವುದಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವು ದೇಶದ ಸೇವಾ ವಲಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿ ರೂಪುಗೊಳ್ಳುತ್ತಿದೆ" ಎಂದು ಅಭಿಪ್ರಾಯಪಟ್ಟರು.
ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್
ಇದೇ ವೇಳೆ ಮಾತನಾಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ಅವರು, "ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಹಾಗೂ ಸಿಐಐ , ಸರ್ವೀಸ್ ಎಕ್ಸ್ ಪೋರ್ಟ್ ಪ್ರಮೋಶನ್ ಕೌನ್ಸಿಲ್ ಸಹಯೋಗದಲ್ಲಿ ನಡೆಯುತ್ತಿರುವ 5 ನೇ ಜಿಇಸಿಗೆ ಎಲ್ಲರನ್ನೂ ಸ್ವಾಗತಿಸುತ್ತಿದ್ದೇವೆ" ಎಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸುಧಾಂಶು ಪಾಂಡೆ, ಎಸ್ ಇಪಿಸಿ ಡೈರೆಕ್ಟರ್ ಜನರಲ್ ಸಂಗೀತಾ ಗೋಡ್ಬೊಲೆ, ಸಿಐಐ ಕರ್ನಾಟಕ ವಿಭಾಗದ ಅಧ್ಯಕ್ಷ ಅಮಾನ್ ಚೌಧರಿ ಸೇರಿದಂತೆ ಮೊದಲಾದ ಉನ್ನತಾಧಿಕಾರಿಗಳು ಮಾತನಾಡಿದರು.