Bengaluru: 'ಇವಿ' ಚಾಲಿತ 'ಉತ್ಕೃಷ್ಟತಾ ಮತ್ತು ನಾವೀನ್ಯತೆ ಕೇಂದ್ರ' ಲೋಕಾರ್ಪಣೆ ಮಾಡಿದ ಎಂಬಿ ಪಾಟೀಲ್
ಬೆಂಗಳೂರು, ಅಕ್ಟೋಬರ್ 18: ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಸಮರ್ಪಕ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ. ಈಗ ಈ ಕ್ಷೇತ್ರದಲ್ಲಿ ರಾಜ್ಯವು ಈಗಾಗಲೇ 25 ಸಾವಿರ ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸಿದೆ. ಮುಂಬರುವ ದಿನಗಳಲ್ಲಿ ಇನ್ನೂ 15 ಸಾವಿರ ಕೂಟಿ ರೂ. ಹೂಡಿಕೆ ಇಲ್ಲಿ ಸಾಧ್ಯವಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.
ಬುಧವಾರ ಬೆಂಗಳೂರಿನ ಕೆಂಗೇರಿ ಸಮೀಪದ ಮೈಲಸಸಂದ್ರದಲ್ಲಿರುವ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿ ಸ್ಥಾಪಿಸಿರುವ ಜಾಗತಿಕ ಮಟ್ಟದ ವಿದ್ಯುತ್ ಚಾಲಿತ ವಾಹನಗಳ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರ ಲೋಕಾರ್ಪಣೆ ಗೊಳಿಸಿ ಅವರು ಮಾತನಾಡಿದರು.

ಮೊದಲಿಗೆ ನಮ್ಮಲ್ಲಿ 2017ರಲ್ಲಿ ವಿದ್ಯುತ್ ಚಾಲಿತ ವಾಹನಗಳ ನೀತಿಯನ್ನು ಜಾರಿಗೆ ತರಲಾಯಿತು. 2021ರಲ್ಲಿ ಇದನ್ನು ಜಾಗತಿಕ ಮಟ್ಟಕ್ಕೆ ತಕ್ಕಂತೆ ಪರಿಷ್ಕರಿಸಲಾಯಿತು. ರಾಜ್ಯದ ನೀತಿಯು ಇ.ವಿ.ಬ್ಯಾಟರಿ ಮತ್ತು ಕೋಶಗಳ ಉತ್ಪಾದನೆ, ಬಿಡಿಭಾಗಗಳ ತಯಾರಿಕೆ, ಒಇಎಂ (ಒರಿಜನಲ್ ಎಕ್ವಿಪ್ಮೆಂಟ್ ಮ್ಯಾನುಫ್ಯಾಕ್ಚರರ್ಸ್), ಚಾರ್ಜಿಂಗ್ ಮತ್ತು ಪರೀಕ್ಷಾರ್ಥ ಮೂಲಸೌಲಭ್ಯ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೂಡಿಕೆಯ ಸಮಗ್ರ ಮೌಲ್ಯ ಸರಪಳಿಯನ್ನು ಒಳಗೊಂಡಿದೆ. ಹೀಗಾಗಿ ರಾಜ್ಯ EV ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಿದರ
ಕರ್ನಾಟಕದಲ್ಲಿ 2 ಲಕ್ಷ EV ನೋಂದಣಿ
ರಾಜ್ಯದಲ್ಲಿ ಸದ್ಯಕ್ಕೆ 2 ಲಕ್ಷ ವಿದ್ಯುತ್ ಚಾಲಿತ ವಾಹನಗಳು ನೋಂದಣಿಯಾಗಿವೆ. ಕರ್ನಾಟಕವು ದೇಶದ ಮೂರನೇ ಸ್ಥಾನದಲ್ಲಿದ್ದೇವೆ. ಮುಂಬರುವ ದಿನಗಳಲ್ಲಿ ಇ.ವಿ.ವಾಹನಗಳು ಮತ್ತಷ್ಟು ಜನಪ್ರಿಯವಾಗಲಿದ್ದು, ಸುಗಮ, ತ್ವರಿತ, ಸುರಕ್ಷಿತ ಮತ್ತು ಮಾಲಿನ್ಯರಹಿತ ಸಂಚಾರವನ್ನು ಸಾಧ್ಯವಾಗಿಸಲಿವೆ. ಇನ್ನು ಒಂದು ದಶಕದಲ್ಲಿ ಸಾಂಪ್ರದಾಯಿಕ ಇಂಧನದ ವಾಹನಗಳು ನೇಪಥ್ಯಕ್ಕೆ ಸರಿಯಲಿವೆ.
ಕರ್ನಾಟಕದಲ್ಲಿ ಸದ್ಯಕ್ಕೆ ಈ ಕ್ಷೇತ್ರದಲ್ಲಿ 7 ಒಇಎಂ, ಬಿಡಿಭಾಗಗಳನ್ನು ತಯಾರಿಸುವ 50 ಕಂಪನಿಗಳು, 45 ನವೋದ್ಯಮಗಳು, ಅತ್ಯಧಿಕ ಆರ್ & ಡಿ ಕೇಂದ್ರಗಳು ಇವೆ. ಈ ಕ್ಷೇತ್ರವು ಸಾವಿರಾರು ಸಂಖ್ಯೆಯ ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸುವ ಉಪಕ್ರಮವನ್ನು ಶಿಕ್ಷಣ ಕ್ರಮದಲ್ಲೇ ಅಳವಡಿಸಿಕೊಳ್ಳಲಾಗಿದೆ ಎಂದರು.
ಅತ್ಯುತ್ತಮ ಗುಣಮಟ್ಟದ ಕೇಂದ್ರ
ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವು ಅತ್ಯುತ್ತಮ ಗುಣಮಟ್ಟದಿಂದ ಕೂಡಿದೆ. ಇದು ತರಬೇತಿ, ಸಂಶೋಧನೆ, ಕೌಶಲಾಭಿವೃದ್ಧಿ, ಸಹಭಾಗಿತ್ವ ಮತ್ತು ಪರಿಪೋಷಣೆಗಳಿಗೆ ಉತ್ತಮ ವೇದಿಕೆಯಾಗಿ ಒದಗಿ ಬರಲಿದೆ. ಇದು ಅಂತಿಮವಾಗಿ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸಲು ಚಿಮ್ಮುಹಲಗೆಯಾಗಿ ಕೆಲಸ ಮಾಡಲಿದೆ ಎಂದು ಸಚಿವರು ಭರವಸೆ ನೀಡಿದರು.

3ಡಿ ಅನುಭವದ ಲ್ಯಾಬ್ ವೀಕ್ಷಣೆ
ಕಾರ್ಯಕ್ರಮಕ್ಕೂ ಮೊದಲು ಸಚಿವರು ಉತ್ಕೃಷ್ಟತಾ ಕೇಂದ್ರದಲ್ಲಿರುವ 3ಡಿ ಅನುಭವ ನೀಡುವ ಲ್ಯಾಬ್, ಸರ್ವೀಸ್ ಲ್ಯಾಬ್, ಬಿಡಿಭಾಗಗಳ ಲ್ಯಾಬ್ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ, ಅಲ್ಲಿನ ಸಾಧನ-ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವೀಕ್ಷಿಸಿ, ವಿವರಣೆ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಎಸ್ ಟಿ ಸೋಮಶೇಖರ್ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮ ಆಗಮಿಸಲು ಮೆಟ್ರೋ ಏರಿದ ಎಂಬಿ ಪಾಟೀಲ್
ಕೆಂಗೇರಿಯಲ್ಲಿನ ಈ ಜೆಎಸ್ಎಸ್ ಕಾರ್ಯಕ್ರಮಕ್ಕೆ ಸಚಿವ ಎಂಬಿ ಪಾಟೀಲ್ ಅವರು ವಿಧಾನಸೌಧದಿಂದ ಕಂಗೇರಿವರೆಗೆ 'ನಮ್ಮ ಮೆಟ್ರೋ' ರೈಲಿನ ಮೂಲಕ ಸಂಚರಿಸಿದರು. ಅಲ್ಲಿಂದ ಕಾರ್ಯಕ್ರಮಕ್ಕೆ ತೆರಳಿದರು. ಮೊದಲ ಬಾರಿಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿ ಸಚಿವರು ಖುಷಿ ಅನುಭವಿಸಿದರು.
ಮೆಟ್ರೋ ಬಳಸಿದ್ದರಿಂದ ವಿಧಾನಸೌಧದಿಂದ ಮೈಲಸಂದ್ರಕ್ಕೆ ಕೇವಲ 30 ನಿಮಿಷಗಳಲ್ಲಿ ತಲುಪಿದೆ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಗರದ ಜೀವನಾಡಿಯಾಗಲಿದೆ' ಎಂದು ಅವರು ಸಂತಸ ವ್ಯಕ್ತಪಡಿಸಿದರು. ಪ್ರಯಾಣದ ಸಂದರ್ಬದಲ್ಲಿ ಸಹ ಪ್ರಯಾಣಿಕರ ಜತೆ ಮಾತನಾಡಿದರು. ವೇಗದ ಸಾರಿಗೆ ಕುರಿತು ಮಾಹಿತಿ ಕೇಳಿದರು.












Click it and Unblock the Notifications