ಐತಿಹಾಸಿಕ ಬೆಂಗಳೂರು ಕರಗ ನಡೆಯುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಚಿನ್ನದ ನೆಕ್ಲೆಸ್ ಕಳ್ಳತನ ಆರೋಪ
ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಹೆಸರಾದ ನಗರದ ತಿಗಳರಪೇಟೆಯ ಶ್ರೀಧರ್ಮರಾಯಸ್ವಾಮಿ ದೇವಾಲಯದಲ್ಲಿ ಚಿನ್ನದ ಸರ ಕಳವು ಪ್ರಕರಣ ಬೆಳಕಿಗೆ ಬಂದಿದ್ದು, ಗಂಭೀರ ತಿರುವು ಪಡೆದುಕೊಂಡಿದೆ. ಈ ಪ್ರಕರಣದ ಸಂಬಂಧ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ನಾಗರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಸಮಗ್ರ ತನಿಖೆ ಅಗತ್ಯವಿದ್ದು, ಅಧಿಕಾರಿಯು ಹುದ್ದೆಯಲ್ಲಿ ಮುಂದುವರೆದರೆ ತನಿಖೆಗೆ ಅಡ್ಡಿಪಡಿಸುವ ಹಾಗೂ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ ಎಂಬ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜೊತೆಗೆ ಮೇಲ್ನೋಟಕ್ಕೆ ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಅಮಾನತು ವಿಧಿಸಲಾಗಿದೆ.

ಪ್ರಕರಣದ ಹಿನ್ನೆಲೆ ಏನು?
ಜುಲೈ 9ರಿಂದ ಶ್ರೀ ಧರ್ಮರಾಯಸ್ವಾಮಿ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ನಾಗರಾಜು ಅವರ ವ್ಯಾಪ್ತಿಯಲ್ಲಿ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯವೂ ಒಳಗೊಂಡಿದೆ. ಬಳಿಕ ದೇವಾಲಯಕ್ಕೆ ಭಕ್ತರು ಹರಕೆ ರೂಪದಲ್ಲಿ ನೀಡಿದ್ದ ಚಿನ್ನದ ನೆಕ್ಲೇಸ್ ಕಳವಾಗಿದೆ ಎಂಬ ಆರೋಪ ಕೇಳಿಬಂದಿತ್ತು. ನಂತರ ಕೆಲ ದಿನಗಳ ಬಳಿಕ ಆ ಚಿನ್ನದ ಸರ ಹುಂಡಿಯಲ್ಲಿ ಪತ್ತೆಯಾಗಿದ್ದರೂ, ಅದರ ತೂಕ ಮೂಲ ನೆಕ್ಲೇಸ್ನ ತೂಕಕ್ಕೆ ಹೊಂದಿಕೆಯಾಗುತ್ತಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ದೇವಸ್ಥಾನದ ಮಾಜಿ ಅಧ್ಯಕ್ಷ ಸತೀಶ್ ಕೂಡ ಅನುಮಾನ ವ್ಯಕ್ತಪಡಿಸಿದ್ದರು.
ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಕೆ.ನಾಗರಾಜು ಅವರನ್ನು ಅಮಾನತುಗೊಳಿಸಲಾಗಿದೆ. ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಟ್ಟು ತೆರಳುವಂತಿಲ್ಲ ಎಂದು ಮುಜರಾಯಿ ಇಲಾಖೆ ಆಯುಕ್ತರಾದ ಶರತ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದ ಬಳಿ ಪ್ರತಿಕ್ರಿಯೆ ನೀಡಿದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, "ಚಿನ್ನದ ನೆಕ್ಲೇಸ್ ಕಳವಾಗಿದ್ದು, ಬಳಿಕ ಮತ್ತೆ ಯಾರೋ ಅದನ್ನು ಹುಂಡಿಯಲ್ಲಿ ಹಾಕಿದ್ದಾರೆ ಎಂಬ ಆರೋಪಗಳಿವೆ. ಯಾರು ತಪ್ಪು ಮಾಡಿದ್ದಾರೆ ಎನ್ನುವುದನ್ನು ತನಿಖೆ ಮೂಲಕ ಪತ್ತೆಹಚ್ಚಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಆ ಚೈನ್ ಎಲ್ಲಿಂದ ಮಿಸ್ ಆಯ್ತು ಮತ್ತು ಮತ್ತೆ ಹುಂಡಿಗೆ ಹೇಗೆ ಬಂತು ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕು" ಎಂದಿದ್ದಾರೆ.
ಚಿನ್ನ ಕಚೇರಿಗೆ ಒಯ್ಯಲಾಗಿತ್ತು
ಧರ್ಮರಾಯಸ್ವಾಮಿ ದೇವಸ್ಥಾನದ ಹುಂಡಿಯಿಂದ ಸಂಗ್ರಹವಾದ ಚಿನ್ನದ ವಿಚಾರದಲ್ಲಿ ಉದ್ಭವಿಸಿರುವ ಆರೋಪಗಳಿಗೆ ಸಂಬಂಧಿಸಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್ ಸ್ಪಷ್ಟನೆ ನೀಡಿದ್ದು, ಹುಂಡಿ ಎಣಿಕೆಯ ವೇಳೆ 68 ಗ್ರಾಂ ಚಿನ್ನ ಲಭ್ಯವಾಗಿದ್ದು, ಸಮೀಪದ ಚಿನ್ನದ ವ್ಯಾಪಾರಿಯಿಂದ ತೂಕ ಮತ್ತು ಪರೀಕ್ಷೆ ಮಾಡಿಸಲಾಗಿದೆ ಎಂದಿದ್ದಾರೆ. ಈ ದೇವಾಲಯವು ಬಿ ದರ್ಜೆಯದು ಆಗಿರುವುದರಿಂದ ಲಾಕರ್ ಮತ್ತು ಭದ್ರತೆ ಇಲ್ಲದ ಕಾರಣ ಚಿನ್ನವನ್ನು ಅಧಿಕೃತವಾಗಿ ಕಚೇರಿಗೆ ತೆಗೆದುಕೊಂಡು ಹೋಗಲಾಗಿದೆ. ಮರುದಿನ ಭಾನುವಾರವಾಗಿದ್ದರಿಂದ ಸೋಮವಾರ ವಾಪಸ್ ತಂದಿದ್ದು, ಆಗಲೂ ಚಿನ್ನದ ತೂಕ 68 ಗ್ರಾಂ ಆಗಿಯೇ ಇತ್ತು ಎಂದಿದ್ದಾರೆ. ಅಲ್ಲದೆ ಚಿನ್ನದ ಎಣಿಕೆ, ಸಾಗಣೆ ಮತ್ತು ವಾಪಸ್ ತರುವುದು ಎಲ್ಲವೂ ವಿಡಿಯೋ ದಾಖಲೆಯೊಂದಿಗೆ ನಡೆದಿದೆ. ಯಾವುದೇ ತಪ್ಪು ಮಾಡಿಲ್ಲ, ಎಲ್ಲ ದಾಖಲೆಗಳನ್ನು ಮೇಲಧಿಕಾರಿಗಳಿಗೆ ಸಲ್ಲಿಸಿದ್ದೇನೆ ಎಂದಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications