ಎಸ್ಟಿ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ; ಶ್ರೀಗಳು
ಬೆಂಗಳೂರು, ಫೆಬ್ರವರಿ 7: " ಕುರುಬರ ಎಸ್ಟಿ ಮೀಸಲಾತಿ ಹೋರಾಟ ಸಮಿತಿಯ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಮಾವೇಶಕ್ಕೂ ಭಾರೀ ಸಂಖ್ಯೆಯಲ್ಲಿ ಜನರು ಬಂದಿದ್ದಾರೆ" ಎಂದು ಕಾಗಿನೆಲೆಯ ನಿರಂಜನಾನಂದಪುರಿ ಶ್ರೀಗಳು ಹೇಳಿದರು.
ಜನವರಿ 15ರಂದು ಕಾಗಿನೆಲೆಯಿಂದ ಕನಕ ಗುರು ಪೀಠದಿಂದ ಶ್ರೀ ನಿರಂಜನಾನಂದ ಪುರಿ ಸ್ವಾಮಿಗಳ ನೇತೃತ್ವದಲ್ಲಿ ಹೊರಟ ಪಾದಯಾತ್ರೆ ಬೆಂಗಳೂರು ತಲುಪಿದೆ. ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪಾದಯಾತ್ರೆ ಕೈಗೊಳ್ಳಲಾಗಿತ್ತು.
ಪಾದಯಾತ್ರೆ ಸಮಾರೋಪ ಸಮಾರಂಬ ಭಾನುವಾರ ಬೆಂಗಳೂರು ಹೊರವಲಯದ ತುಮಕೂರು ರಸ್ತೆಯ ಮಾದನಾಯಕನಹಳ್ಳಿಯಲ್ಲಿರುವ ಅಂತರರಾಷ್ಟ್ರೀಯವಾಗಿ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುತ್ತಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನರು ಸಮಾವೇಶಕ್ಕಾಗಿ ಆಗಮಿಸಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಸೇರಿರುವ ಸಾಧ್ಯತೆ ಇದೆ. ಮಾದನಾಯಕನಹಳ್ಳಿ ಸುತ್ತಮುತ್ತ ಕಣ್ಣು ಹಾಯಿಸಿದಲ್ಲೆಲ್ಲಾ ಜನರೇ ಕಾಣುತ್ತಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಶ್ರೀ ನಿರಂಜನಾನಂದ ಪುರಿ ಸ್ವಾಮಿಗಳು ಸೇರಿದಂತೆ ಹಲವು ಮಠಾಧೀಶರು, ಸಚಿವ ಕೆ. ಎಸ್. ಈಶ್ವರಪ್ಪ, ಎಂಟಿಬಿ ನಾಗರಾಜ್, ಆರ್. ಶಂಕರ್ ಸೇರಿದಂತೆ ವಿವಿಧ ರಾಜಕೀಯ ನಾಯಕರು ಪಾಲ್ಗೊಂಡಿದ್ದಾರೆ.
"ನಮ್ಮ ಹೋರಾಟಕ್ಕೆ ಅಭೂತಪೂರ್ವವಾದ ಸ್ಪಂದನೆ ಸಿಕ್ಕಿದೆ. ಇಂದು ಅಸಂಖ್ಯಾತ ಕುರುಬರು ಸಮಾವೇಶಕ್ಕೆ ಆಗಮಿಸಿರುವುದು ಸಂತಸ ತಂದಿದೆ" ಎಂದು ಶ್ರೀ ನಿರಂಜನಾನಂದ ಪುರಿ ಸ್ವಾಮಿಗಳು ಹೇಳಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಮಾವೇಶಕ್ಕೆ ಗೈರಾಗಿದ್ದಾರೆ. ಸಮಾವೇಶದದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, "ಕುರುಬರ ತನು, ಮನ, ಧನದ ಬಲದಿಂದ ಮುಖ್ಯಮಂತ್ರಿ ಆದವರು, ಹೋರಾಟ ಸಮಾವೇಶಕ್ಕೆ ಗೈರಾಗಿರುವುದು ಸರಿಯಲ್ಲ" ಎಂದು ಸಿದ್ದರಾಮಯ್ಯ ಹೆಸರು ಹೇಳದೇ ಟೀಕಿಸಿದರು.
"ಇದು ಸಮಸ್ತ ಕುರುಬ ಸಮುದಾಯದ ಪರವಾಗಿ ನಡೆಯುತ್ತಿರುವ ಹೋರಾಟ. ಇಲ್ಲಿ ರಾಜಕೀಯ ಕಾರ್ಯಸೂಚಿ ಇಲ್ಲ. ಕುರುಬರ ಬೆಂಬಲದಿಂದ ಮುಖ್ಯಮಂತ್ರಿ ಆದವರು ಈ ಬಗ್ಗೆ ಕಣ್ಣು ತೆರೆದು ನೋಡಬೇಕು" ಎಂದರು.












Click it and Unblock the Notifications