ಕ್ಷೀರಭಾಗ್ಯ ಯೋಜನೆ ಆರು ದಿನಗಳಿಗೆ ವಿಸ್ತರಣೆ?
ಬೆಂಗಳೂರು, ಜೂನ್ 3 : ಕರ್ನಾಟಕ ಸರ್ಕಾರ ಕ್ಷೀರಭಾಗ್ಯ ಯೋಜನೆಯನ್ನು ಆರು ದಿನಗಳಿಗೆ ವಿಸ್ತರಣೆ ಮಾಡಲು ಚಿಂತನೆ ನಡೆಸಿದೆ ಎಂದು ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಸದ್ಯ ವಾರದಲ್ಲಿ ಮೂರು ದಿನ ಒಂದರಿಂದ 10ನೇ ತರಗತಿ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ಹಾಲು ನೀಡಲಾಗುತ್ತಿದೆ.
ಬೆಂಗಳೂರಿನ ಕೆಎಂಎಫ್ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ಹಾಲು ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಟಿ.ಬಿ.ಜಯಚಂದ್ರ ಅವರು, ಕೆಎಂಎಫ್ ನಲ್ಲಿ ಹೆಚ್ಚುವರಿ ಉತ್ಪಾದನೆಯಾಗುತ್ತಿದ್ದ ಹಾಲಿನ ಪುಡಿಯನ್ನು ಮಕ್ಕಳಿಗೆ ನೀಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೊಳಿಸಿದೆ. ಇದಕ್ಕಾಗಿ 8.81ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದರು.

ಕ್ಷೀರಭಾಗ್ಯ ಯೋಜನೆಯಡಿ ಸದ್ಯ 1 ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಮೂರು ದಿನಗಳ ಕಾಲ ಹಾಲು ನೀಡಲಾಗುತ್ತಿದೆ. ಸರ್ಕಾರ ಇದನ್ನು ಆರು ದಿನಗಳಿಗೆ ವಿಸ್ತರಣೆ ಮಾಡಲು ಚಿಂತನೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. [ಏನಿದು ಕ್ಷೀರಭಾಗ್ಯ ಯೋಜನೆ?]
ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು 4 ರೂ.ಗಳಿಗೆ ಹೆಚ್ಚಿಸಿದೆ. ಈ ಹಣವನ್ನು ಇನ್ನುಮುಂದೆ ಆನ್ ಲೈನ್ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜಯಚಂದ್ರ ತಿಳಿಸಿದರು. ಮಕ್ಕಳಲ್ಲಿ ಅಪೌಷ್ಟಿಕತೆ ದೂರ ಮಾಡಲು ಕ್ಷೀರಭಾಗ್ಯ ಯೋಜನೆ ಜಾರಿಗೆ ತರಲಾಗಿದೆ, ಸಬ್ಸಿಡಿ ಮತ್ತು ಕ್ಷೀರಭಾಗ್ಯ ಯೋಜನೆಗೆ ಸರ್ಕಾರ ವಾರ್ಷಿಕ 1500 ಕೋಟಿ ವೆಚ್ಚ ಮಾಡುತ್ತಿದೆ ಎಂದರು.
ರಾಜಕೀಯ ಬೇಡ : ಕೆಎಂಎಫ್ ಸಂಸ್ಥೆ ರೈತರು ಮತ್ತು ಹಾಲು ಉತ್ಪಾದಕರ ಅಭಿವೃದ್ಧಿಗಾಗಿ ಶ್ರಮಿಸಬೇಕು. ಆದ್ದರಿಂದ ಕೆಎಂಎಫ್ ಸಂಸ್ಥೆಯಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಎಂಎಫ್ ಉತ್ಪನ್ನಗಳು ದಿನದಿಂದ ದಿನಕ್ಕೆ ಪ್ರಸಿದ್ಧಿ ಪಡೆಯುತ್ತಿವೆ. ಸಂಸ್ಥೆಯಲ್ಲಿ ರಾಜಕೀಯಕ್ಕೆ ಅವಕಾಶ ನೀಡದೆ ಎಲ್ಲದೂ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡಿ ಎಂದರು.












Click it and Unblock the Notifications