NEP: ಕಂಫರ್ಟ್ ಜೋನ್ ಬಿಟ್ಟು ಮೊದಲು ಹೊರಬನ್ನಿ!
ಬೆಂಗಳೂರು, ಸೆ. 03: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ನೂತನ ಶಿಕ್ಷಣ ನೀತಿಯನ್ನು ಪ್ರಪ್ರಥಮವಾಗಿ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನ ಆರಂಭಿಸಿದೆ. ಇದೇ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಅವರು ಖಡಕ್ ಸೂಚನೆಯನ್ನು ನೀಡಿದ್ದಾರೆ. ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ರಾಜ್ಯಪಾಲ ವಜೂಬಾಯಿ ವಾಲಾ ಅವರು ಬುಧವಾರ ಸಮಾಲೋಚನಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ ಭಾಗವಹಿಸಿದ್ದರು.
Recommended Video
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಜಡತ್ವ ಬಿಟ್ಟು ಕೆಲಸ ಮಾಡಬೇಕು ಎಂದು ಸೂಚಿಸುವುದರೊಂದಿಗೆ, ವಿಶ್ವವಿದ್ಯಾಲಯಗಳು ಯಾವ ರೀತಿಯಾಗಿ ಕೆಲಸ ಮಾಡಬೇಕು ಎಂಬುದನ್ನು ಸಭೆಯಲ್ಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ಕುಲಪತಿಗಳಿಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಕುಲಪತಿಗಳ ಕಾರ್ಯವೈಖರಿ ಕುರಿತು ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಪಾಲ ವಜೂಬಾಯಿ ವಾಲಾ ಅವರು ಸಭೆಯಲ್ಲಿ ಸರ್ಕಾರಕ್ಕೆ ಮಹತ್ವದ ಸಲಹೆ ನೀಡಿದರು.
ಸರ್ಕಾರದ ನೀಲನಕ್ಷೆ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಸರ್ಕಾರವೇ ನೀಲನಕ್ಷೆಯನ್ನು ಸಿದ್ಧಪಡಿಸಿ ಕೊಡಲಿದೆ. ಆದರೆ ವಿವಿಗಳ ಕುಲಪತಿಗಳು ಜಡತ್ವ ಬಿಟ್ಟು, ಕಂಫರ್ಟ್ ಜೋನ್ನಿಂದ ಹೊರಗೆ ಬಂದು ಕೆಲಸ ಮಾಡಬೇಕು ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಸೂಚಿಸಿದರು.
ಈ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ಸರಕಾರ ರಾಜಿಮಾಡಿಕೊಳ್ಳದ ಬದ್ಧತೆಯನ್ನು ಹೊಂದಿದೆ. ಅದನ್ನು ಅನುಷ್ಟಾನಕ್ಕೆ ತರುವುದಕ್ಕೆ ಅಗತ್ಯವಾದ ಕಾನೂನು ಮತ್ತು ಆಡಳಿತಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜಾರಿಗೆ ನೀಲನಕ್ಷೆ ಸಿದ್ಧಪಡಿಸುತ್ತಿರುವ ಕಾರ್ಯಪಡೆ ವರದಿ ನೀಡಿದ ಕೂಡಲೇ ಅನುಷ್ಟಾನ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದರು.
ದೇಶದ ದಿಕ್ಸೂಚಿ
ರಾಜ್ಯ ಮಾತ್ರವಲ್ಲ, ಇಡೀ ದೇಶದ ದಿಕ್ಸೂಚಿಯನ್ನೇ ಬದಲಾವಣೆ ಮಾಡಬಲ್ಲ ಶಕ್ತಿ ಹೊಂದಿರುವ ಶಿಕ್ಷಣ ನೀತಿ ಜಾರಿಯಲ್ಲಿ ಕುಲಪತಿಗಳ ಪಾತ್ರ ಅತ್ಯಂತ ಮಹತ್ವದ್ದು. ಉನ್ನತ ಶಿಕ್ಷಣ ಕ್ಷೇತ್ರದ ಸ್ವರೂಪವನ್ನೇ ಬದಲಾವಣೆ ಮಾಡಬಲ್ಲ ನೀತಿಯನ್ನು ಜಾರಿ ಮಾಡಲು ಬಹಳಷ್ಟು ಸಿದ್ಧತೆ ಮಾಡಿಕೊಂಡು ಯೋಜನಾ ಬದ್ಧವಾಗಿ ಮುಂದುವರಿಯಬೇಕಾಗುತ್ತದೆ.
ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡಲು, ಸಿಬ್ಬಂದಿ ನೇಮಕಾತಿ ಸೇರಿದಂತೆ ವಿವಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ತಯಾರಿದೆ. ಆದರೆ ಕುಲಪತಿಗಳು ಕೆಲಸ ಮಾಡಬೇಕು. ಸರಕಾರದಿಂದ ಎಲ್ಲ ರೀತಿಯ ಸಹಕಾರ ಇರುತ್ತದೆ. ಸಂಶೋಧನೆ ಮತ್ತು ಬೋಧನೆಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳನ್ನು ಮೇಲ್ದರ್ಜೆಗೇರಿಸಲಾಗುವುದು ಹಾಗೂ ಬಹು ವಿಷಯಾಧಾರಿತ ಬೋಧನೆ ಮಾಡುವ ನಿಟ್ಟಿನಲ್ಲಿ ಶಕ್ತಿ ತುಂಬಲಾಗುವುದು ಎಂದು ಡಿಸಿಎಂ ಹೇಳಿದರು.
ಶಿಕ್ಷಣದ ಹಬ್
ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯವು ವೇಗವಾಗಿ ದಾಪುಗಾಲು ಇಡುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರು ದೇಶದಲ್ಲಿಯೇ ಅತ್ಯಂತ ಪ್ರಮುಖ ಶಿಕ್ಷಣದ ಹಬ್ ಆಗಿ ಹೊರ ಹೊಮ್ಮುತ್ತಿದೆ. ವೈದ್ಯಕೀಯ, ತಾಂತ್ರಿಕ, ಎಂಜಿನೀಯರಿಂಗ್ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ಬೆಂಗಳೂರು ನಂ. 1 ಆಗಿದೆ. ಶಿಕ್ಷಣ ನೀತಿ ಜಾರಿ ಮಾಡುವುದರಿಂದ ವಿಶ್ವವಿದ್ಯಾಲಯಗಳು ಅತ್ಯುತ್ತಮ ಸಾಧನೆ ಮಾಡಲಿವೆ. ಅದಕ್ಕೆ ಬೇಕಾದ ಸಿಬ್ಬಂದಿಯನ್ನೂ ಸರಕಾರ ಒದಗಿಸುವ ಭರವಸೆ ಇದೆ ಎಂದು ರಾಜ್ಯಪಾಲ ವಜೂಭಾಯಿ ವಾಲ ಸಮಾಲೋಚನಾ ಸಭೆಯಲ್ಲಿ ಹೇಳಿದರು.
ಕರ್ನಾಟಕವು ಜಾಗತಿಕವಾಗಿ ಶೈಕ್ಷಣಿಕವಾಗಿ ಪೈಪೋಟಿ ನಡೆಸುವ ಎಲ್ಲ ಸಾಮರ್ಥ್ಯವನ್ನು ಹೊಂದಿದೆ. ಆ ನಿಟ್ಟಿನಲ್ಲಿ ಶಿಕ್ಷಣ ನೀತಿ ಜಾರಿಯನ್ನೇ ಒಂದು ಸವಾಲಾಗಿ ಸ್ವೀಕರಿಸಿ ಕುಲಪತಿಗಳೆಲ್ಲರೂ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಗುರುತರ ಬದಲಾವಣೆಗಳು ಗೋಚರವಾಗಲಿವೆ ಎಂದರು.
ಸ್ವಾಯತ್ತತೆ ಬೇಕು
ವಿಶ್ವವಿದ್ಯಾಲಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಹಾಗೂ ಶಿಕ್ಷಣ ನೀತಿಯನ್ನು ಉತ್ತಮವಾಗಿ ಜಾರಿ ಮಾಡಲು ನೆರವಾಗುವ ನಿಟ್ಟಿನಲ್ಲಿ ವಿವಿಗಳಿಗೆ ಆಡಳಿತಾತ್ಮಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ವಾಯತ್ತತೆ ನೀಡಬೇಕೆಂದು ಸಭೆಯಲ್ಲಿ ಭಾಗವಹಿಸಿದ್ದ ಕೆಲ ಕುಲಪತಿಗಳು ಅಭಿಪ್ರಾಯ ವ್ಕಕ್ತಪಡಿಸಿದ್ದಾರೆ.
ಜತೆಗೆ, ವಿವಿಗಳನ್ನು ತಾಂತ್ರಿಕವಾಗಿ ಮೇಲ್ದರ್ಜೆಗೇರಿಸಬೇಕು. ಗುಣಮಟ್ಟದ ಬೋಧನೆಗೆ ಅಗತ್ಯವಾದ ಎಲ್ಲ ಸಹಕಾರವನ್ನು ಸರಕಾರ ನೀಡಬೇಕು ಎಂದು ಕುಲಪತಿಗಳು ಸರ್ಕಾರಕ್ಕೆ ಮನವಿ ಮಾಡಿದರು.
ಶಿಕ್ಷಣ ನೀತಿ ನಿರೂಪಣಾ ಸಮಿತಿ ಸದಸ್ಯರಾಗಿದ್ದ ಅಜೀಂ ಪ್ರೇಮ್ಜೀ ವಿವಿ ಕುಲಪತಿ ಅನುರಾಗ್ ಬೇಹರ್ ಅವರು ನೀತಿಯ ಕುರಿತು ಎಲ್ಲ ಕಲಪತಿಗಳಿಗೆ ಮಾಹಿತಿ ವಿನಿಮಯ ಮಾಡಿಕೊಂಡರು. ಸಭೆಯಲ್ಲಿ ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ಸೇರಿ ವಿವಿಧ ವಿವಿಗಳ 27 ಉಪ ಕುಲಪತಿಗಳು ಹಾಜರಿದ್ದರು.