Govt employees strike: ಸಂಧಾನ ವಿಫಲ, ಮುಷ್ಕರಕ್ಕೆ ಸರ್ಕಾರಿ ನೌಕರರ ನಿರ್ಧಾರ, ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ
7ನೇ ವೇತನ ಆಯೋಗದ ವರದಿ ಜಾರಿ, ಹಳೆಯ ಪಿಂಚಣಿ ಯೋಜನೆಗೆ ಮರುಪಾವತಿ ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರಿ ನೌಕರರು ಮುಂದಿಟ್ಟಿದ್ದಾರೆ.
ಬೆಂಗಳೂರು, ಮಾರ್ಚ್. 01 : 7ನೇ ವೇತನ ಆಯೋಗದ ವರದಿ ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ನೌಕರರು ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ತಡ ರಾತ್ರಿ ನಡೆಸಿದ ಸಂಧಾನ ವಿಫಲವಾಗಿದೆ.
7ನೇ ವೇತನ ಆಯೋಗದ ವರದಿ ಜಾರಿ, ಹಳೆಯ ಪಿಂಚಣಿ ಯೋಜನೆಗೆ ಮರುಪಾವತಿ ಮತ್ತು ಕನಿಷ್ಠ ಶೇ.40ರಷ್ಟು ಫಿಟ್ಮೆಂಟ್ ಸೌಲಭ್ಯಗಳನ್ನು ಜಾರಿಗೊಳಿಸುವುದು ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರಿ ನೌಕರರು ಮುಂದಿಟ್ಟಿದ್ದಾರೆ. 5 ಲಕ್ಷಕ್ಕೂ ಹೆಚ್ಚು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ತಡ ರಾತ್ರಿ ಸಭೆ ನಡೆಸಿದ್ದರು. ಆದರೆ ಈ ಸಭೆಯಲ್ಲಿ ಯಾವುದೇ ನಿರ್ಣಯಕ್ಕೆ ಬಂದಿರಲಿಲ್ಲ. ಪದಾಧಿಕಾರಿಗಳು ಮುಖ್ಯಮಂತ್ರಿಗಳ ಭರವಸೆ ಕುರಿತು ಸಂಘದ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿ ಹೊರನಡೆದಿದ್ದರು. ಈಗ ಪೂರ್ವ ನಿರ್ಣಯದಂತೆ ಮುಷ್ಕರ ನಡೆಯಲಿದೆ ಎಂದಿದ್ದಾರೆ.
ಏಳನೇ ವೇತನ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಸ್ವಲ್ಪ ಸಮಯ ಕೇಳಿದ್ದರು. ತಕ್ಷಣ ಮಧ್ಯಂತರ ವರದಿ ತರಿಸಿಕೊಂಡು ನೌಕರರಿಗೆ ಮಧ್ಯಂತರ ಪರಿಹಾರ ಘೋಷಿಸಲಾಗುವುದು ಎಂದಿದ್ದರು. ಶೇಕಡ 40ರಷ್ಟು ವೇತನ ಹೆಚ್ಚಳ ಸಾಧ್ಯವಿಲ್ಲ. ಬದಲಿಗೆ 7 ಅಥವಾ 8ರಷ್ಟು ಮಾತ್ರ ವೇತನ ಹೆಚ್ಚಿಸಲು ಸಾಧ್ಯ. ಎನ್ಪಿಎಸ್ ರದ್ದತಿ ಹಾಗೂ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೊಳಿಸುವ ಸಂಬಂಧ ಉನ್ನತಾಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು.
"7ನೇ ವೇತನ ಆಯೋಗದ ಮಧ್ಯಂತರ ವರದಿ ಕೇಳಿ ಅನುಷ್ಠಾನಗೊಳಿಸಲಾಗುವುದು, ಅದಕ್ಕಾಗಿ ರಾಜ್ಯ ಬಜೆಟ್ನಲ್ಲಿ ಹಣ ಮೀಸಲಿಡಲಾಗಿದೆ. ನಮ್ಮ ಮಾತುಕತೆಯ ಆಧಾರದ ಮೇಲೆ ಮಾತುಕತೆ ಸೌಹಾರ್ದಯುತವಾಗಿ ಮುಕ್ತಾಯವಾಗುವ ವಿಶ್ಬಾಸ ಇದೆ. ಅವರು ಪದಾಧಿಕಾರಿಗಳ ಜೊತೆ ಚರ್ಚಿಸಿ ನಿರ್ಣಯ ತಿಳಿಸುವುದಾಗಿ ಹೇಳಿದ್ದಾರೆ. ಅವರ ನಿರ್ಣಯದ ಆಧಾರದ ಮೇಲೆ ನಾವು ನಿರ್ಣಯ ಕೈಗೊಳ್ಳುತ್ತೇವೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಸರ್ಕಾರಿ ನೌಕಕರ ಸಂಘದ ಸಭೆ ನಂತರ ಮಾತನಾಡಿರುವ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಮೊದಲೆ ಘೋಷಿಸಿದಂತೆ ಮುಷ್ಕರ ಆರಂಭವಾಗಲಿದೆ ಎಂದು ತಿಳಿಸಿದ್ದರು. ಹೀಗಾಗಿ, ಬುಧವಾರ ನೌಕರರು ಮುಷ್ಕರ ನಡೆಸುವುದು ಖಚಿತವಾಗಿದ್ದು, ಸರ್ಕಾರಿ ಸೇವೆಗಳು ವ್ಯತ್ಯಯವಾಗುವ ಸಾಧ್ಯತೆ ಇದೆ. ಪ್ರತಿಭಟನೆಯಿಂದಾಗಿ ಸರ್ಕಾರಿ ಆಸ್ಪತ್ರೆ, ಬಿಬಿಎಂಪಿ ಕಚೇರಿ, ಕಂದಾಯ ಕಚೇರಿಗಳಲ್ಲಿ ಒಪಿಡಿ ಸೇರಿದಂತೆ ಬಹುತೇಕ ಸೇವೆಗಳು ಸ್ಥಗಿತಗೊಳ್ಳಲಿವೆ.












Click it and Unblock the Notifications