ಪರಿಶಿಷ್ಟ ಪಿಯು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ
ಬೆಂಗಳೂರು, ಜನವರಿ 12: ಪರಿಶಿಷ್ಟ ಜಾತಿ ಮತ್ತು ಪಂಗಡದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಡಲು ನಿರ್ಧರಿಸಲಾಗಿದ್ದು, ಬಡ ವಿದ್ಯಾರ್ಥಿಗಳಿಗೂ ಮುಂದಿನ ವರ್ಷದಿಂದ ಉಚಿತ ಲ್ಯಾಪ್ ಟಾಪನ್ನು ನೀಡಲು ಚಿಂತಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ತಿಳಿಸಿದರು.
ಆಧುನಿಕ ಯುಗದಲ್ಲಿ ಅಂತರ್ಜಾಲ ಬಳಕೆ ಹಾಗೂ ಕಂಪ್ಯೂಟರ್ ಬಳಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಹಾಗಾಗಿ ಈ ವರ್ಷದಿಂದಲೇ ಮೊದಲ ವರ್ಷದ ಪದವಿಪೂರ್ವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲಾಗುವುದು. ಜಾತಿಭೇದವಿಲ್ಲದೆ 3 ಲಕ್ಷಕ್ಕಿಂತ ಕಡಿಮೆ ಆದಾಯವಿರುವ ಕುಟುಂಬದ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ನೀಡುವ ಚಿಂತನೆ ಇದೆ. ಇದನ್ನು ಮುಂದಿನ ವರ್ಷದಿಂದ ಜಾರಿಗೆ ತರಲಾಗುವುದು ಎಂದು ತಿಳಿಸಿದರು.[ಪರಿಶಿಷ್ಟ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಭಾಗ್ಯ]
ರಾಜ್ಯದಲ್ಲಿರುವ 412 ಸರ್ಕಾರಿ ಪದವಿ ಕಾಲೇಜುಗಳ ಪೈಕಿ 90 ಕಾಲೇಜುಗಳಲ್ಲಿ ಉಚಿತ ವೈ-ಫೈ ಸೌಲಭ್ಯ ಒದಗಿಸಲಾಗಿದೆ. ಮುಂದಿನ ವರ್ಷದಿಂದ ಎಲ್ಲ ಕಾಲೇಜುಗಳಿಗೂ ಉಚಿತ ವೈ-ಫೈ ಸೌಲಭ್ಯ ನೀಡಲಾಗುವುದು ಎಂದರು. ಉನ್ನತ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದ್ದು, ಎಲ್ಲ ವಿಶ್ವವಿದ್ಯಾಲಯಗಳಿಗೂ ಅನ್ವಯವಾಗುವಂತೆ ಏಕರೂಪ ಕಾಯ್ದೆಯನ್ನು ಜಾರಿಗೆ ತರುವ ಸಿದ್ಧತೆ ನಡೆದಿದೆ. ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಹೊಸ ಕಾಯ್ದೆ ಮಂಡನೆಯಾಗಲಿದೆ ಎಂದರು.
ವ್ಯಾಸಂಗದ ಜೊತೆ ಕೌಶಲಾಭಿವೃದ್ಧಿಗಾಗಿ ಪ್ರತ್ಯೇಕ ಕೌಶಲ್ಯ ವಿವಿ ಮಾಡುವ ಚಿಂತನೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಉನ್ನತ ಶಿಕ್ಷಣಕ್ಕೆ ಒತ್ತು ನೀಡಲು ಮುಖ್ಯಮಂತ್ರಿಗಳು ಗಮನ ಹರಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಪ್ರಥಮವಾಗಿ ಮಹಾರಾಣಿ ಕಾಲೇಜನ್ನು ಕ್ಲಸ್ಟರ್ ವಿವಿಯಾಗಿ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಸವಲತ್ತುಗಳನ್ನು ಒದಗಿಸಲಾಗುವುದು ಎಂದರು.