ಸುಲಿಗೆ ಮಾಡುವ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸುಧಾಕರ್
ಬೆಂಗಳೂರು, ಜೂನ್ 15: ''ರಾಜ್ಯದಲ್ಲಿ ಇಲ್ಲಿ ತನಕ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್ 19 ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ, ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೋವಿಡ್ ಚಿಕಿತ್ಸೆ ಪ್ರಾರಂಭಿಸಲಾಗುವುದು, ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು'' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Recommended Video
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕರೆದಿದ್ದ ಪರಾಮರ್ಶೆ ಸಭೆಯ ನಂತರ ಸಚಿವ ಸುಧಾಕರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪಿಪಿಇ ಕಿಟ್ ಮುಂತಾದ ಉಪಕರಣಗಳ ಖರೀದಿ ಕುರಿತಂತೆ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, MDA ಹಾಗು CE ಅನುಮೋದನೆ ದೊರಕಿರುವ ಅಂತರಾಷ್ಟ್ರೀಯ ಗುಣಮಟ್ಟದ ಉಪಕರಣಗಳನ್ನೇ ನಮ್ಮ ರಾಜ್ಯದಲ್ಲಿ ಖರೀದಿಸಲಾಗುತ್ತಿದ್ದು ಈ ಕುರಿತು ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ತಾವೇ ಖುದ್ದಾಗಿ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸುತ್ತಿರುವುದಾಗಿ ತಿಳಿಸಿದರು.
ಬೀದರ್ ವೈದ್ಯಕೀಯ ಕಾಲೇಜಿನ ನಿರ್ದೇಶಕರ ವಿರುದ್ಧ ಸುಧಾಕರ್ ಗರಂ
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದೆಂದು ತಿಳಿಸಿದ ಡಾ.ಸುಧಾಕರ್, ಸರ್ಕಾರವೇ ಚಿಕಿತ್ಸಾ ದರ, ಪರೀಕ್ಷಾ ದರ ಮುಂತಾದವುಗಳನ್ನು ನಿಗದಿಪಡಿಸಲಿದ್ದು, ಸುಲಿಗೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ರಾಜ್ಯಾದ್ಯಂತ ಏಕರೂಪದ ಚಿಕಿತ್ಸಾದರ ನಿಗದಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದರು. ಕೊರೋನ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಖಾಸಗಿ ವಲಯವೂ ಕೈಜೋಡಿಸಬೇಕಿದೆ ಎಂದು ಅವರು ಹೇಳಿದರು.
ಕೊರೊನಾ ಚಿಕಿತ್ಸೆಗೆ ವಿಮಾ ಸೌಲಭ್ಯ
ಕೊರೊನಾಗೆ ಚಿಕಿತ್ಸೆಯನ್ನೂ ABARK ಅಡಿಯಲ್ಲಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರದ ಆರೋಗ್ಯ ಸಚಿವಾಲಯದ ಜೊತೆ ಶೀಘ್ರದಲ್ಲೇ ಮಾತುಕತೆ ನಡೆಸುವುದಾಗಿ ಸಚಿವರು ತಿಳಿಸಿದರು. ಇದರಿಂದ ಆರೋಗ್ಯ ವಿಮೆಯ ಅಡಿಯಲ್ಲಿ ಕೋವಿಡ್ ಚಿಕಿತ್ಸೆಯೂ ಸೇರಲ್ಪಡುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೂ ಚಿಕಿತ್ಸೆಗೆ ಅನುಕೂಲ ಆಗಲಿದೆ ಎಂದು ಅವರು ಹೇಳಿದರು.
ಮಾಸ್ಕ್ ಧರಿಸುವುದರಿಂದ 90% ಸೋಂಕು ತಡೆಗಟ್ಟಬಹುದು
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮಾಸ್ಕ್ ಧರಿಸುವುದರಿಂದ 90% ಸೋಂಕು ತಡೆಗಟ್ಟಬಹುದಾಗಿದೆ. ಆದ್ದರಿಂದ ಎಲ್ಲರೂ ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಸಚಿವರು ತಾಕೀತು ಮಾಡಿದರು. ಸರ್ಕಾರದ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕು. ಮದುವೆ ಮುಂತಾದ ಸಮಾರಂಭಗಳಿಗೂ ನೀಡಲಾಗಿರುವ ಮಾರ್ಗಸೂಚಿಗಳ ಪಾಲನೆ ಆಗಬೇಕು ಎಂದು ಅವರು ಹೇಳಿದರು.
ವಿಶ್ವ ರಕ್ತದಾನಿಗಳ ದಿನ; ಜಿಮ್ಸ್ ನಲ್ಲಿ ರಕ್ತದಾನ ಮಾಡಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್
ನೈಜ ಅಂಶಗಳನ್ನು ತೋರಿಸಿ ಮಾಧ್ಯಮಗಳಿಗೆ ಮನವಿ
ಕೊರೋನ ಕುರಿತಾಗಿ ಜನರಲ್ಲಿ ಇರುವ ಆತಂಕವನ್ನು ದೂರಮಾಡಿ ನೈಜ ಅಂಶಗಳನ್ನು ತೋರಿಸುವಂತೆ ಸಚಿವರು ಮಾಧ್ಯಮಗಳಿಗೆ ಮನವಿ ಮಾಡಿದರು. ಬೆಂಗಳೂರಿನಲ್ಲಿ ಸುಮಾರು 697 ಜನ ಸೋಂಕಿತರಲ್ಲಿ ಈಗ 330 ಸಕ್ರಿಯ ಪ್ರಕರಣಗಳಿವೆ. ಅದರಲ್ಲೂ ಐಸಿಯು ನಲ್ಲಿ ಕೇವಲ 6 ಜನ ಮಾತ್ರ ಇದ್ದಾರೆ. 93% ಜನರಿಗೆ ಯಾವುದೇ ಲಕ್ಷಣಗಳಿಲ್ಲ. ಕೊರೋನ, ಸಾರ್ಸ್ ವೈರಾಣುವಿಗಿಂತ ಅಪಾಯಕಾರಿ ಅಲ್ಲ. ಮರಣ ಪ್ರಮಾಣ ನಮ್ಮ ರಾಜ್ಯದಲ್ಲಿ ಕೇವಲ 1.2% ನಷ್ಟಿದೆ. ರಾಷ್ಟ್ರೀಯ ಸರಾಸರಿ 2.8% ನಷ್ಟಿದೆ. ಸಾರ್ಸ್ ಸೋಂಕಿನ ಮರಣ ಪ್ರಮಾಣ ಶೇ.10% ಇತ್ತು. ಆದ್ದರಿಂದ ಹರಡುವಿಕೆ ಪ್ರಮಾಣ ಹೆಚ್ಚಾಗಿದೆ ಎನ್ನುವುದನ್ನು ಬಿಟ್ಟರೆ ಇದು ಇತರೆ ವೈರಾಣುಗಳಿಗಿಂತ ಕಡಿಮೆ ಅಪಾಯಕಾರಿಯಾಗಿದೆ. ಆದ್ದರಿಂದ, ಮಾಧ್ಯಮದವರು ಜನರಲ್ಲಿ ಆತಂಕ ಸೃಷ್ಟಿಸುವ ಬದಲು ತೀವ್ರತೆ ಕುರಿತಾದ ಅಂಕಿ ಅಂಶಗಳ ಮೂಲಕ ಜಾಗೃತಿ ಮೂಡಿಸುವಂತೆ ಹಾಗೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಅರಿವು ಮೂಡಿಸಲು ಸಚಿವ ಸುಧಾಕರ್ ಮನವಿ ಮಾಡಿದರು
ರಾಜ್ಯಕ್ಕೆ ಏಕರೂಪದ ದರ ನಿಗದಿ
ಬೆಂಗಳೂರಿನಲ್ಲಿ ಫೀವರ್ ಕ್ಲಿನಿಕ್ ನಲ್ಲಿ ಪ್ರಾಥಮಿಕ ಪರೀಕ್ಷೆ ನಡೆಯುತ್ತಿದೆ, ನಾನು ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದೇನೆ, ಖಾಸಗಿ ಆಸ್ಪತ್ರೆಗೆ ಕೋವಿಡ್ ಟೆಸ್ಟಿಂಗ್, ಚಿಕಿತ್ಸೆಗೆ ದರ ನಿಗದಿ ಮಾಡಿ, ರಾಜ್ಯಕ್ಕೆ ಏಕರೂಪದ ದರ ನಿಗದಿ ಮಾಡುತ್ತೇವೆ. ಖಾಸಗಿ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ಮಾಡಿ ಚಿಕಿತ್ಸೆ ನೀಡಲು ಮುಂದೆ ಬರಬೇಕು, ಬಡವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಿಮೆಯಲ್ಲಿ ನೆರವು ಕೊಡುವ ಬಗ್ಗೆ ಚರ್ಚೆ ಆಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದರು.