ಸಿದ್ದರಾಮಯ್ಯ ಭೇಟಿಯಾದ ಗೌತಮಿ ಪೋಷಕರು
ಬೆಂಗಳೂರು, ಏ.4 : ಕಾಡುಗೋಡಿಯ ಪ್ರಗತಿ ಕಾಲೇಜಿನ ಹಾಸ್ಟೆಲ್ನಲ್ಲಿ ಗುಂಡಿಗೆ ಬಲಿಯಾದ ಪಿಯು ವಿದ್ಯಾರ್ಥಿನಿ ಗೌತಮಿ ಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಗುಂಡಿನ ದಾಳಿ ನಡೆಸಿದ ಆರೋಪಿ ಮಹೇಶ್ಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಸಲ್ಲಿಸಿದರು.
ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಜೊತೆಗೆ ಶುಕ್ರವಾರ ಗೌತಮಿ ಪೋಷಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಮತ್ತು ನಿಸ್ಪಕ್ಷಪಾತವಾಗಿ ನಡೆಸಬೇಕು ಎಂದು ಪೋಷಕರು ಮನವಿ ಮಾಡಿದರು. [ಪೊಲೀಸರ ವಶಕ್ಕೆ ಮಹೇಶ್]

ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆಸಿ ಗೌತಮಿಯನ್ನು ಹತ್ಯೆ ಮಾಡಿದ ಆರೋಪಿ ಮಹೇಶ್ಗೆ ಕಠಿಣ ಶಿಕ್ಷೆ ಆಗಬೇಕು. ಕಾಲೇಜಿನ ಆಡಳಿತ ಮಂಡಳಿ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. [ದ್ವಿತೀಯ ಪಿಯು ವಿದ್ಯಾರ್ಥಿನಿ ಗುಂಡಿಗೆ ಬಲಿ]
ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ : ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು, 'ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದೇವೆ. ನಮ್ಮ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ' ಎಂದರು.
ಸರ್ಕಾರದಿಂದ ಚಿಕಿತ್ಸೆ : ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಗೌತಮಿ ಸ್ನೇಹಿತೆ ಶಿರಿಷಾ ಮಣಿಪಾಲ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ. ಆಕೆಯ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಈ ಬಗ್ಗೆ ಪೋಷಕರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಆಸ್ಪತ್ರೆಗೂ ಪತ್ರ ಬರೆಯಲಾಗಿದೆ.












Click it and Unblock the Notifications