ಸುವರ್ಣ ಸೌಧ ಮುತ್ತಿಗೆ ಹಾಕ್ತಾರಂತೆ ಗ್ರಾಮ ಸಹಾಯಕರು

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಮುದ್ದುಕೃಷ್ಣ, ರಾಜ್ಯ ಕಂದಾಯ ಇಲಾಖೆಯಲ್ಲಿ ಸುಮಾರು 34 ವರ್ಷಗಳಿಂದ ನಾವು ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಆದರೆ, ನಮ್ಮನ್ನು ಕಂದಾಯ ಇಲಾಖೆಯ ಡಿ ದರ್ಜೆ ನೌಕರರಾಗಿ ಪರಿಗಣಿಸಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ 10,450 ಜನರು ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ಡಿ ದರ್ಜೆ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ, ಬೆಳಗಾವಿಯಲ್ಲಿ ನ.25ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುವುದಾಗಿ ಅವರು ಹೇಳಿದ್ದಾರೆ.
ನ.25ರಂದು ಖಾನಾಪುರ ತಾಲೂಕಿನ ನಂದಗಡ ಗ್ರಾಮದ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳದಿಂದ ಪಾದಯಾತ್ರೆ ಮೂಲಕ ಬೆಳಗಾವಿ ಸುವರ್ಣ ಸೌಧಕ್ಕೆ ತೆರಳಿ, ಅಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುವುದಾಗಿ ಮುದ್ದುಕೃಷ್ಣ ತಿಳಿಸಿದ್ದಾರೆ. ನೌಕರರಿಗೆ ಸದ್ಯ 7000 ರೂ. ವೇತನ ನೀಡಲಾಗುತ್ತಿದೆ. ಆದರೆ, ದಿನಭತ್ಯೆ, ತುಟ್ಟಿಭತ್ಯೆ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಗ್ರಾಮದಲ್ಲಿ ಬಿ.ಪಿ.ಎಲ್.ಕಾರ್ಡ್ ಹೊಂದಿರುವ ವ್ಯಕ್ತಿ ಮರಣ ಹೊಂದಿದರೆ ಅವರನ್ನು ಗುರುತಿಸುವ ಕೆಲಸ ಗ್ರಾಮ ಸಹಾಯಕರದ್ದು, ಆದರೆ, ನಮ್ಮನ್ನು ಬಿ.ಪಿ.ಎಲ್.ಕಾರ್ಡ್ ವ್ಯಾಪ್ತಿಗೆ ಒಳಪಡಿಸಿಲ್ಲ ಎಂದು ಅವರು ದೂರಿದರು. ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸಿ 15,000 ರೂ. ವೇತನ ನೀಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುವುದು ಎಂದರು.
ಗ್ರಾಮ ಸಹಾಯಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರವೂ ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ, ಬೇಡಿಕೆ ಈಡೇರಿಸಿಲ್ಲ. ಆದ್ದರಿಂದ ಹೋರಾಟ ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.











Click it and Unblock the Notifications