ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು,ಮೇ 15 : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಇನ್ನು ಮುಂದೆ ಬೆಂಗಳೂರು - ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆ ನಡೆಯಿತು. ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ . ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು ಎಂದು ಸೂಚಿಸಿದರು. ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು.
ನೀತಿ ಯೋಜನೆ ಸಮಿತಿಗಳ ಆಯ್ಕೆ ಕಾಲಕಾಲಕ್ಕೆ ಆಗುವ ಕುರಿತಂತೆ ಹಾಗೂ ಸಭೆಗಳು ನಿಯಮಿತವಾಗಿ ನಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು.ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಯಬೇಕು. ಇದಕ್ಕೆ ಕ್ರಮ ಕೈಗೊಳ್ಳಲಾಗುವಂತೆ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗುವುದು. ತಾಲ್ಲೂಕು, ಜಿಲ್ಲಾ ಮಟ್ಟದ ಸಮಿತಿಯ ಶಿಫಾರಸುಗಳನ್ನು ಗಮನಕ್ಕೆ ತಂದು ಬಜೆಟ್ ಪೂರ್ವ ಸಭೆಗಳಲ್ಲಿ ಮಂಡಿಸಬೇಕು.
ನಾನು ವಿಕೇಂದ್ರೀಕರಣದ ಪರ, ಅಧಿಕಾರವನ್ನು ಗ್ರಾಮ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು. ಸಂವಿಧಾನದ (73)(74) ರನ್ವಯ ಗ್ರಾಮ , ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿಲ್ಲ ಇದನ್ನು ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಹಾಗೂ ಸ್ಥಳೀಯ ಸಂಸ್ಥೆ ಗಳಲ್ಲಿ ಮಹಿಳಾ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಗಮನ ವಹಿಸಲು ಉಪಾಧ್ಯಕ್ಷರಿಗೆ ಸೂಚಿಸಿದರು. ಸ್ಥಳೀಯ ಸಂಸ್ಥೆಗಳ ಆರ್ಥಿಕ ಸಹಾಯ ಒದಗಿಸಲು ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ ಅವರು ವರದಿಯನ್ನು ನೀಡಿದ್ದು ಅದರ ಜಾರಿಗೆ ಕ್ರಮ ವಹಿಸಲಾಗುವುದು .
ಸಂವಿಧಾನದ 73ನೇ ತಿದ್ದುಪಡಿ ಅನ್ವಯ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಅದರಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯು 13 ಇಲಾಖೆಗಳಿಗೆ ಸಂಬಂಧಿಸಿದಂತೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಿದ್ದು ಅದರಲ್ಲಿ ಆರೋಗ್ಯ ಇಲಾಖೆ, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ ಮತ್ತು ರೇಷ್ಮೆ ಸೇರಿದಂತೆ 9 ಇಲಾಖೆಗಳ ಕಾರ್ಯಚಟುವಟಿಕೆಯ ಜವಾಬ್ದಾರಿ ನಕ್ಷೆಗಳು ಅಧಿಸೂಚನೆಗೊಂಡಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಂದ ಸಹಮತಿ ಬಾಕಿ ಇರುತ್ತದೆ.
2ನೇ ಹಂತದಲ್ಲಿ ಬಾಕಿ ಇರುವ ಉಳಿದ 16 ಇಲಾಖೆಗಳ ಕಾರ್ಯಚಟುವಟಿಕೆಗಳ ಜವಾಬ್ದಾರಿ ನಕ್ಷೆಯನ್ನು 2025ರ ಆಗಸ್ಟ್ 15ರ ಒಳಗೆ ಪೂರ್ಣ ಗೊಳಿಸಲು ಸೂಚಿಸಿದರು. ಗ್ರಾಮ ಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿ ಪಡಿಸಲಾಗಿದ್ದು ಪ್ರಸ್ತುತ ವಿಸ್ತರಣೆ ಆಗಿರುವ ಪ್ರದೇಶವನ್ನು ಪುನರ್ ಸಮೀಕ್ಷೆ ಮಾಡಿಸಿ ನಿಗದಿ ಪಡಿಸಲು ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರಮ ವಹಿಸುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.












Click it and Unblock the Notifications