ಹಲಗೆ ವಡೇರನಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣ: ಕುಮಾರಸ್ವಾಮಿಗೆ ಎದುರಾಯ್ತು ಕಂಟಕ !
ಬೆಂಗಳೂರು, ಜನವರಿ 18: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಭೂ ಕಂಟಕ ಎದುರಾಗಿದೆ. ಹಲಗೆ ವಡೇರನಹಳ್ಳಿ ಡಿ ನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಹೀಗಾಗಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ಕುಮಾರಸ್ವಾಮಿ ಎದುರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ.
ವಿಶೇಷ ವೆಂದರೆ ಕುಮಾರಸ್ವಾಮಿ ವಿರುದ್ಧ ಡಿ ನೋಟಿಫಿಕೇಷನ್ ಅಕ್ರಮ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು "ಬಿ" ವರದಿ ಸಲ್ಲಿಸಿದ್ದರು. ಈ ವರದಿಯನ್ನು ದೂರುದಾರ ಮಹದೇವ ಸ್ವಾಮಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಲೋಕಾಯುಕ್ತ ಪೊಲೀಸರ ಬಿ ವರದಿ ತಿರಸ್ಕರಿಸಿದ್ದ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿತ್ತು.
ಕುಮಾರಸ್ವಾಮಿಗೆ ಡಿನೋಟಿಫಿಕೇಷನ್ ಸಂಕಷ್ಟ: ನ್ಯಾಯಾಲಯದಿಂದ ಸಮನ್ಸ್ ಜಾರಿ
ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನ್ಯಾಯಾಲಯ ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಿತ್ತು. ವಿಚಾರಣೆ ರದ್ದು ಕೋರಿ ಕುಮಾರಸ್ವಾಮಿ ಕೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಕೂಡ ಕುಮಾರಸ್ವಾಮಿ ಮನವಿಯನ್ನು ತಿರಸ್ಕರಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೊರೆ ಹೋಗಿದ್ದರು. ಸುಪ್ರೀಂಕೋರ್ಟ್ ಕೂಡ ವಿಚಾರಣೆ ಎದುರಿಸುವಂತೆ ಸೂಚಿಸಿ ಸೋಮವಾರ ಮಹತ್ವದ ತೀರ್ಪು ನೀಡಿದೆ.
ಏನಿದು ಅಕ್ರಮ: ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಉತ್ತರಹಳ್ಳಿ ಹೋಬಳಿಯ ಹಲಗೆ ವಡೇರಹಳ್ಳಿ ಸರ್ವೆ ನಂ 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನು ಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ ಆರೋಪ ಕೇಳಿ ಬಂದಿತ್ತು. ಬನಶಂಕರಿ ಲೇಔಟ್ ನಿರ್ಮಾಣಕ್ಕೆ ಬಿಡಿಎ 1989 ರಲ್ಲಿ ಸ್ವಾಧೀನ ಪಡಿಸಿಕೊಂಡಿತ್ತು. 1995 ರಲ್ಲಿ ಅಂತಿಮ ಆದೇಶ ಹೊರಡಿಸಿತ್ತು.
ಭೂಮಿಯನ್ನು ಸ್ವಾಧೀನದಿಂದ ಕೈ ಬಿಡುವಂತೆ ಭೂ ಮಾಲೀಕರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ರದ್ದು ಪಡಿಸಿತ್ತು.ಇದಾದ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಇದೇ ಭೂಮಿಯನ್ನು ಡಿ ನೋಟಿಫಿಕೇಷನ್ ಮಾಡಿ ಆದೇಶ ಹೊರಡಿಸಿದ್ದರು. ಈ ಕುರಿತ ದಾಖಲೆಗಳ ಸಮೇತ ಮಹದೇವಸ್ವಾಮಿ ಅವರು 2012 ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಖಾಸಗಿ ದೂರನ್ನು ತನಿಖೆ ನಡೆಸಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಅದರಂತೆ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬಿ. ವರದಿಯನ್ನು ಸಲ್ಲಿಸಿದ್ದರು.
Recommended Video
ಲೋಕಾಯುಕ್ತ ಪೊಲೀಸರ ಬಿ ವರದಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನೋಟಸ್ ನ್ನು ಪ್ರಶ್ನಿಸಿ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಕೂಡ ಕುಮಾರಸ್ವಾಮಿ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್ ಕೂಡ ವಿಚಾರಣೆ ಎದುರಿಸುವಂತೆ ಕುಮಾರಸ್ವಾಮಿಗೆ ಸೂಚಿಸಿದೆ. ನ್ಯಾ. ಅಶೋಕ್ ಭೂಷಣ್ ನೇತೃತ್ವದ ಪೀಠ ಈ ಮಹತ್ವದ ತೀರ್ಪು ನೀಡಿದೆ.