ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ಗುರುವಾರದೊಳಗೆ ತೆರೆ, 2ನೇ ಪಟ್ಟಿ ಬಿಡುಗಡೆ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯೆ
ಬೆಂಗಳೂರು, ಏಪ್ರಿಲ್ 04: ಜೆಡಿಸ್ನಿಂದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ಪಧಿಸುವವರು ಯಾರು, ಎರಡನೇ ಪಟ್ಟಿ ಯಾವಾಗ? ಬಿಡುಗಡೆಯಾಗುತ್ತದೆ ಎಂಬ ಕಾತರತೆಗೆ ನಾಳೆ ಬುಧವಾರ ಇಲ್ಲವೇ ಗುರುವಾರ (ಏಪ್ರಿಲ್ 6ರೊಳಗೆ) ತೆರೆ ಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಅಭ್ಯರ್ಥಿಗ ಎರಡನೇ ಪಟ್ಟಿ ಬಿಡುಗಡೆ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಾಳೆ ಅಥವಾ ಗುರುವಾರ ಪಟ್ಟಿ ಬಿಡುಗಡೆ ಆಗಬಹುದು. ಆ ಪಟ್ಟಿಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೆ ಎಂಬ ಮಾಹಿತಿ ಇರಲಿದೆ ಎಂದು ಅವರು ಖಚಿತಪಡಿಸಿದರು.

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೆಗೌಡರು ಬುಧವಾರ ಸಂಜೆ ದೆಹಲಿಯಿಂದ ವಾಪಸ್ ಆಗುತ್ತಾರೆ. ನಂತರವೇ ಎರಡು ಪಟ್ಟಿಯಲ್ಲಿನ ಹೆಸರುಗಳು ಬಹಿರಂಗಗೊಳ್ಳಲಿವೆ ಎಂದರು.
ನನಗಿಂತಲೂ ನಿಮಗೆ (ಮಾಧ್ಯಮಗಳಿಗೆ) ಹಾಸನ ಟಿಕೆಟ್ ಘೋಷಣೆ ಬಗ್ಗೆ ಕುತೂಹಲವಿದೆ. ಹಾಸನವನ್ನು ಸೇರಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅದನ್ನು ಬಿಟ್ಟು ಮಾಡಿದರೆ ಇನ್ನೊಂದು ಕಥೆ ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಆ ಪಟ್ಟಿಯಲ್ಲಿ ಹಾಸನ ಟಿಕೆಟ್ ಯಾರಿಗೆ ಎಂಬ ಮಾಹಿತಿ ಒಳಗೊಂಡು ನಿರ್ಧಾರ ಹೊರ ಬೀಳಲಿದೆ ಎಂದು ತಿಳಿಸಿದರು.
ಮೊದಲ ಪಟ್ಟಿ ಬಿಡುಗಡೆಯಾದಗಲೂ ಯಾವುದೇ ಸಮಸ್ಯೆ ಇರಲಿಲ್ಲ. ಎರಡನೇ ಪಟ್ಟಿ ವೇಳೆ ಹಾಸನದ್ದು ಹೆಚ್ಚು ಪ್ರಚಾರವಾಗಿದೆ. ಹಾಸನ ವಿಚಾರದಿಂದ ಜನತಾದಳಕ್ಕೂ ಹೆಚ್ಚು ಪ್ರಚಾರವಾಗಿದೆ. ಇದರಿದ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಶೇಕಡಾ 2ರಿಂದ 3ರಷ್ಟು ಮತ ಪ್ರಮಾಣ ಹೆಚ್ಚಾಗಲಿದೆ. ನಮ್ಮ ಗುರಿ ಮುಟ್ಟೋದಕ್ಕೆ ನಾವು ಯಾವುದೇ ದುಡುಕಿನ ತೀರ್ಮಾನ ಮಾಡುವುದಿಲ್ಲ. ಕಾರ್ಯಕರ್ತರ ಅಪೇಕ್ಷೆ, ಗೆಲ್ಲುವ ಮಾನದಂಡದಲ್ಲೇ ಟಿಕೆಟ್ ಕೊಡುತ್ತೇವೆ ಎಂದು ಅವರು ಪ್ರಶ್ನೆ ಒಂದಕ್ಕೆ ಅವರು ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಪಟ್ಟಿ ರಿಲೀಸ್ ಆಗದ ಹಿನ್ನೆಲೆ ಜೆಡಿಎಸ್ ಪಟ್ಟಿ ವಿಳಂಬ ಆಗುತ್ತಿದೆಯಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಟ್ಟಿ ಬಗ್ಗೆ ಚಿಂತೆ ನಮಗಿಲ್ಲ. ಜೆಡಿಎಸ್ ಪಕ್ಷವು ನಮ್ಮದೇ ಆದ ರೀತಿಯಲ್ಲಿ ಅಭ್ಯರ್ಥಿಗಳನ್ನು ನಿರ್ಧರಿಸಿ ಪಟ್ಟಿ ಬಿಡುಗಡೆ ಮಾಡಲಿದೆ ಎಂದರು.
ಕಾಂಗ್ರೆಸ್ ಸಿಎಂ ಸ್ಥಾನ: ಕೂಸು ಹುಟ್ಟುವ ಮುನ್ನವೇ ಕುಲಾವಿ?
ಕೆಪಿಸಿಸಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ ಎಂಬ ಸಿದ್ದರಾಮಯ್ಯನವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ವಿಚಾರ ಅದು ಅವರ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ವಿಷಯ. ಕಾಂಗ್ರೆಸ್ನವರ ಆಂತರಿಕ ವಿಚಾರಗಳ ಬಗ್ಗೆ ನಾನು ಯಾಕೆ ಪ್ರತಿಕ್ರಿಯೆ ನೀಡಲಿ?. ಚುನಾವಣೆಯಲ್ಲಿ ಜನ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಕೊಡುತ್ತಾರೋ ಅದು ಮುಖ್ಯ. ಎಷ್ಟು ಸ್ಥಾನ ಬರುತ್ತವೆ ಅನ್ನುವುದರ ಮೇಲೆ ಮುಖ್ಯಮಂತ್ರಿಗಳ ನಿರ್ಧಾರ ಆಗುತ್ತದೆ. ಮಗು ಹುಟ್ಟೋಕು ಮುನ್ನ ಕುಲಾವಿ ಹೊಲಿಸಿದರೆ ಆಗುತ್ತದೆಯೇ?. ಮುಗು ಹುಟ್ಟಿದರೆ ಕುಲಾವಿ ಹೊಲಿಸಬಹುದು, ಅದಕ್ಕೂ ಮುನ್ನ ಕುಲಾವಿ ಹಾಕಿಕೊಳ್ಳುತ್ತೀನಿ ಎಂದರೆ ಏಕೆ ಬೇಡ ಅನ್ನಬೇಕು ಎಂದು ಅವರು ವಿಶ್ಲೇಷಿಸಿದರು.

ಆರೋಗ್ಯ ಸಚಿವರಿಗೆ ಕುಮಾರಸ್ವಾಮಿ ತಿರುಗೇಟು
ಜೆಡಿಎಸ್ ಕುರಿತು ಅನಗತ್ಯ ಹೇಳಿಕೆ ನೀಡಿರುವ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ಕುಮಾರಸ್ವಾಮಿ ಅವರು ಕಿಡಿ ಕಾರಿದರು. ಚ್ಚು ಕಡಿಮೆ ಆಗಿ ಅದರೆ ಅವರೇ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದು ಬಿಟ್ಟೀತು?. ಆಮೇಲೆ ಶಾಸಕನಾಗೋಕೆ ಆಗೋದಿಲ್ಲವಲ್ಲ? ಅವರು ಮಾಡಿದ ಅನಾಚಾರ ಜನರಿಗೆ ಗೊತ್ತಿದೆ.
ರೆಫ್ರಿಜರೇಟರ್, ಸ್ಟವ್ ಎಲ್ಲಾ ಹಂಚುತ್ತಿದ್ದಾರೆ. ಕ್ಷೇತ್ರದಲ್ಲಿ ಇಷ್ಟೆಲ್ಲಾ ಕೊಡುತ್ತಿದ್ದಾರೆ ಎಂದರೆ ಇನ್ನೆಷ್ಟು ಶ್ರೀಮಂತರು ಎಂದು ಜನರು ಮನೇಲಿ ಕೂರಿಸಿಬಿಟ್ಟರೆ ಕಷ್ಟ. ಎಚ್ಚರಿಕೆಯಿಂದ ಇದ್ದರೆ ಉತ್ತಮ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.












Click it and Unblock the Notifications