ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಟಿಕೆಟ್ ಬೇಡವೆಂದ ಕಾಂಗ್ರೆಸ್ ನಾಯಕ
ಬೆಂಗಳೂರು, ಸೆಪ್ಟೆಂಬರ್ 25 : ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಬೇಡ ಎಂದು ಹೇಳಿದ್ದಾರೆ. ಅಕ್ಟೋಬರ್ 21ರಂದು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ.
ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್. ಸಿ. ಬಾಲಕೃಷ್ಣ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಟಿಕೆಟ್ ಬೇಡ ಎಂದು ಹೇಳಿದ್ದಾರೆ. ಕಾಂಗ್ರೆಸ್ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಬಾಲಕೃಷ್ಣ ಅವರಿಗೆ ಸೂಚನೆ ನೀಡಿತ್ತು.
"ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವಂತೆ ಹೈಕಮಾಂಡ್ನಿಂದ ಸೂಚನೆ ಬಂದಿದೆ. ಆದರೆ, ನಾನು ವಿಧಾನಸಭಾ ಕ್ಷೇತ್ರವನ್ನು ಬದಲಾಯಿಸುವುದಿಲ್ಲ. ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ" ಎಂದು ಎಚ್. ಸಿ. ಬಾಲಕೃಷ್ಣ ಸ್ಪಷ್ಟಪಡಿಸಿದರು.

"ಊರಿನಿಂದ ಊರಿಗೆ ಹೋಗುವ ಗೌಡನ ಸ್ಥಿತಿ ಏನಾಗುತ್ತದೆ ಎಂಬುವುದು ನನಗೆ ಗೊತ್ತಿದೆ. ನಾನು ನಮ್ಮೂರು ಗೌಡನಾಗಿಯೇ ಉಳಿಯುತ್ತೇನೆ. ಮಾಗಡಿ ವಿಧಾನಸಭಾ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ" ಎಂದು ಹೇಳಿದರು.
ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಗೋಪಾಲಯ್ಯ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಚುನಾವಣಾ ಆಯೋಗ ಅಕ್ಟೋಬರ್ 21ರಂದು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಸುವುದಾಗಿ ಘೋಷಣೆ ಮಾಡಿದೆ.
ಸುಪ್ರೀಂಕೋರ್ಟ್ನಲ್ಲಿ ಶಾಸಕರ ಪರವಾಗಿ ತೀರ್ಪು ಬಂದರೆ ಕೆ. ಗೋಪಾಲಯ್ಯ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.
2018ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಮಂಜುನಾಥ ಎಚ್. ಎಸ್. ಕಣಕ್ಕಿಳಿದು 20,496 ಮತಗಳನ್ನು ಪಡೆದಿದ್ದರು. ಈ ಬಾರಿ ಅಭ್ಯರ್ಥಿ ಬದಲಾವಣೆ ಮಾಡಿ ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಲು ಕಾಂಗ್ರೆಸ್ ತಂತ್ರ ರೂಪಿಸಿದೆ.












Click it and Unblock the Notifications