ಅಕ್ರಮ ಫ್ಲೆಕ್ಸ್ : ಸಿಎಸ್ ಮುಚ್ಚಳಿಕೆ ಪತ್ರಕ್ಕೆ ಹೈಕೋರ್ಟ್ ಚಾಟಿಯೇಟು
ಬೆಂಗಳೂರು, ಆಗಸ್ಟ್ 10: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಅಕ್ರಮ ಬ್ಯಾನರ್, ಫ್ಲೆಕ್ಸ್, ಹೋರ್ಡಿಂಗ್ಸ್ಗಳ ತೆರವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೈಕೋರ್ಟ್ಗೆ ಶುಕ್ರವಾರ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಈ ಪ್ರಮಾಣ ಪತ್ರವನ್ನು ಪರಿಶೀಲಿಸಿದ ಹೈಕೋರ್ಟ್ ತೀರ್ವ ಅಸಮಾಧಾನ ವ್ಯಕ್ತಪಡಿಸಿದ್ದು, ಇಂತಹ ಕಣ್ಣೊರೆಸುವ ತಂತ್ರಗಳನ್ನು ನಿಲ್ಲಿಸಿ ಎಂದು ಕಟುವಾಗಿಯೇ ನುಡಿದಿದೆ.
ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳ ಹಾವಳಿ ಮಿತಿಮೀರಿದ್ದು ಇವೆಲ್ಲವನ್ನೂ ತೆರವುಗೊಳಿಸುವಂತೆ ಪೊಲೀಸರು ಹಾಗೂ ಬಿಬಿಎಂಪಿ ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಇದುವರೆಗೂ ಎಷ್ಟು ಹೋರ್ಡಿಂಗ್ಗಳನ್ನು ತೆರವುಗೊಳಿಸಿದ್ದೇವೆ ಎನ್ನುವ ಪರಿಪೂರ್ಣ ಮಾಹಿತಿಯನ್ನು ನೀಡಿಲ್ಲ.

ಈ ಅನಧಿಕೃತ ಜಾಹೀರಾತು ಫಲಕಗಳ ತೆರವಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು.
ಇನ್ನೊಂದು ತಿಂಗಳಲ್ಲಿ ಬೆಂಗಳೂರನ್ನು ಫ್ಲೆಕ್ಸ್ ಮುಕ್ತವನ್ನಾಗಿಸಬೇಕು, ಇಲ್ಲವಾದರೆ ಸಾಧ್ಯವಿಲ್ಲ ಎಂದು ಒಪ್ಪಿಕೊಳ್ಳಿ, ಫ್ಲೆಕ್ಸ್ ಪ್ರಕರಣಗಳ ದಿನ ನಿತ್ಯದ ವಿಚಾರಣೆಗೆಂದೇ ಎಸಿಎಂಎಂ ಕೋರ್ಟ್ನಲ್ಲಿ ಪ್ರತ್ಯೇಕ ಪೀಠ ಸ್ಥಾಪಿಸುತ್ತೇನೆ. ಈ ತಿಂಗಳ ಅಂತ್ಯದಲ್ಲಿ ವಿಚಾರಣೆ ನಡೆಸಿ ಆದೇಶ ನೀಡಬೇಕು.
ನಗರದ ಯಾವ ಯಾವ ಕಡೆ ಫ್ಲೆಕ್ಸ್ ತೆರವು ಕಾರ್ಯಾಚರಣೆಗೆ ನಡೆಯುತ್ತಿದೆ. ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಬಿಬಿಎಂಪಿ ಆಗಸ್ಟ್ 13ರೊಳಗೆ ನನಗೆ ನಿಖರ ಹಾಗೂ ಸ್ಪಷ್ಟ ವರದಿ ಸಲ್ಲಿಸಬೇಕು. ಈವರೆಗೆ ಎಷ್ಟು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣ ಯಾವ ಹಂತದಲ್ಲಿದೆ ಎಂಬ ಬಗ್ಗೆ ಸರ್ಕಾರ ವರದಿ ಸಲ್ಲಿಸಬೇಕು. ಪ್ರಮಾಣಪತ್ರದಲ್ಲಿ ಒಂದೇ ಒಂದು ಶಬ್ದ ಸತ್ಯಕ್ಕೆ ದೂರವಾಗಿದ್ದರೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಿದೆ.












Click it and Unblock the Notifications