ಪಿಎಸ್ಐ ಹಗರಣ:ವಿಚಾರಣೆ ಬೇರೊಂದು ಪೀಠಕ್ಕೆ ವರ್ಗಾವಣೆ
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಬೇರೊಂದು ಪೀಠದ ಮುಂದೆ ಪಟ್ಟಿ ಮಾಡಲು ಹೈಕೋರ್ಟ್ ಶುಕ್ರವಾರ
ಬೆಂಗಳೂರು ಜನವರಿ 28: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ರಾಜಕೀಯ ಪಕ್ಷಗಳಿಗೆ ಆರೋಪ- ಪ್ರತ್ಯಾರೋಪಗಳಿಗೆ ಅಸ್ತ್ರವಾಗಿರುವ ಪ್ರಕರಣ ಸದ್ಯಕ್ಕೆ ತಾರ್ಕಿಕ ಅಂತ್ಯ ಕಾಣುವಂತೆ ತೋರುತ್ತಿಲ್ಲ.
ಜೊತೆಗೆ ಹೈಕೋರ್ಟ್ನಲ್ಲಿ ಈ ಕುರಿತು ನಡೆಯುತ್ತಿರುವ ವಿಚಾರಣೆಯೂ ಮುಗಿಯುವಂತೆ ಕಾಣುತ್ತಿಲ್ಲ. ಏಕೆಂದರೆ, ಇದುವರೆಗೆ ದಾಖಲಾಗಿರುವ ಎಫ್ಐಆರ್ ಹಾಗೂ ತನಿಖೆಗೆ ಸಂಬಂಧಿಸಿದ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಬೇರೊಂದು ಪೀಠದ ಮುಂದೆ ಪಟ್ಟಿ ಮಾಡಲು ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತು.
ಈ ಸಂದರ್ಭದಲ್ಲಿ ಸಿಜೆ, "ಈ ಪೀಠದ ಮುಂದೆ ಬೇಡ. ನಾವಿಬ್ಬರೂ ಇಲ್ಲದಿರುವ ಪೀಠದ ಮುಂದೆ ಅರ್ಜಿ ಪಟ್ಟಿಮಾಡಬೇಕು" ಎಂದು ಆದೇಶಿಸಿ ಕಡತವನ್ನು ರಿಜಿಸ್ಟ್ರಾರ್ ಜನರಲ್ ಮುಂದೆ ಮಂಡಿಸಲು ಸೂಚಿಸಿದರು.
ಅರ್ಜಿಯಲ್ಲಿ, ಪಿಎಸ್ಐ ಹಗರಣಕ್ಕೆ ಸಂಬಂಧಿಸಿದ ಇಲ್ಲಿಯವರೆಗೆ ವಿವಿಧೆಡೆ ದಾಖಲಾಗಿರುವ ಎಫ್ಐಆರ್ ಮತ್ತು ದೂರುಗಳಿಗೆ ಸಂಬಂಧಿಸಿದ ಸಂಪೂರ್ಣವಾದ ತನಿಖಾ ದಾಖಲೆಗಳನ್ನು ಸಲ್ಲಿಸಲು ಸಿಐಡಿಗೆ ಆದೇಶಿಸಬೇಕು. ಪ್ರಕರಣದ ತನಿಖೆ ನಡೆಸಿರುವ ಸಿಐಡಿಗೆ ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪೌಲ್ ಬಂಧನ ಬಳಿಕದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲು ನಿರ್ದೇಶಿಸಬೇಕು. ನ್ಯಾಯಯುತ, ಸ್ವತಂತ್ರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ಮತ್ತು ಸಿಐಡಿಗೆ ನಿರ್ದೇಶಿಸಬೇಕು ಎಂದು ಕೋರಲಾಗಿದೆ.
ಪೊಲೀಸ್ ನೇಮಕಾತಿ ವಿಭಾಗದ ಕೆಲವು ಅಧಿಕಾರಿಗಳು, ರಾಜಕಾರಣಿಗಳ ನೆರವಿನಿಂದ ಅಕ್ರಮ ಮಾರ್ಗದ ಮೂಲಕ ಕೆಲವು ಅಭ್ಯರ್ಥಿಗಳಿಗೆ ಅನುಕೂಲವಾಗಿದ್ದು, ಇದರಿಂದ ಪಿಎಸ್ಐ ಪರೀಕ್ಷೆಯನ್ನು ಅರ್ಹತೆಯ ಆಧಾರದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳ ಬದುಕು ಮತ್ತು ವೃತ್ತಿಯು ಅತಂತ್ರಕ್ಕೆ ಸಿಲುಕಿದೆ ಎಂದು ಅರ್ಜಿಯಲ್ಲಿ ಉಲ್ಲೇ ಖಿಸಲಾಗಿದೆ.












Click it and Unblock the Notifications