ಶಿವಾನಂದ ವೃತ್ತದ ಮೇಲುಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ- ಹೈಕೋರ್ಟ್ ತಾಕೀತು
ಬೆಂಗಳೂರು,ಜು.8. ನಗರದ ಶಿವಾನಂದ ವೃತ್ತದಲ್ಲಿ ನಿರ್ಮಿಸುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ಆದೇಶ ನೀಡಿದೆ.
ಅಲ್ಲದೆ, ನಗರದ ಶಿವಾನಂದ ವೃತ್ತದ ಜಂಕ್ಷನ್ನಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಯ ಇಳಿಜಾರು ಪ್ರಮಾಣವನ್ನು (ಶೇಷಾದ್ರಿಪುರ ರಸ್ತೆ ಕಡೆಯ) ಶೇ.6.66ರಷ್ಟು ಹೆಚ್ಚಿಸಲು ಅನುಮತಿ ಕೋರಿ ಬಿಬಿಎಂಪಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಪೀಠ ಪುರಸ್ಕರಿಸಿದದೆ.
ಮೇಲ್ಸೇತುವೆ ಯೋಜನೆ ಪ್ರಶ್ನಿಸಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ನ್ಯಾಯಾಲಯದ ಆದೇಶವೇನು?
ನ್ಯಾಯಪೀಠ, ಸಾರ್ವಜನಿಕ ಹಿತಾಸಕ್ತಿಯಿಂದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಶೇಷಾದ್ರಿಪುರ ಕಡೆಯ ಇಳಿಜಾರನ್ನು ಹೆಚ್ಚಿಸಲು ಬಿಬಿಎಂಪಿ ಅನುಮತಿ ಕೋರಿದೆ. ಭಾರತದ ಪ್ರತಿಷ್ಠಿತ ಸಂಸ್ಥೆಯ ಐಐಎಸ್ಸಿಯ ಪ್ರಾಧ್ಯಾಪಕರು ಸಹ ಸುರಕ್ಷತೆ ದೃಷ್ಟಿಯಿಂದ ಮೇಲ್ಸೇತುವೆ ಇಳಿಜಾರಿನ ಪ್ರಮಾಣ ಹೆಚ್ಚಿಸಬಹುದು ಎಂದು ವರದಿ ಸಲ್ಲಿಸಿದೆ. ಆದ್ದರಿಂದ ಐಐಎಸ್ಸಿಯ ವರದಿಯನ್ನು ನ್ಯಾಯಾಲಯ ಒಪ್ಪುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.
ಅಲ್ಲದೆ, 2018ರಲ್ಲಿ ಮೇಲ್ಸೇತುವೆ ಕಾಮಗಾರಿ ಆರಂಭವಾಗಿದೆ. ಶೇ.90ರಷ್ಟು ಕಾರ್ಯ ಪೂರ್ಣಗೊಂಡಿದೆ. ಯೋಜನೆಗೆ ಭೂಮಿ ನೀಡಿರುವ ಭೂ ಮಾಲೀಕರು ಬಿಬಿಎಂಪಿ ಪ್ರಸ್ತಾವನೆ ಮಾಡಿರುವ ಟಿಡಿಆರ್ ಒಪ್ಪದೇ ಇರುವುದರಿಂದ ಭೂ ಸ್ವಾಧೀನ ಪೂರ್ಣಗೊಳಿಸಲು ಮತ್ತಷ್ಟು ಸಮಯ ಬೇಕಾಗುತ್ತದೆ. ನಗರದ ಹೃದಯ ಭಾಗದ ಜನ ಹಾಗೂ ವಾಹನ ದಟ್ಟಣೆಯಿರುವ ರಸ್ತೆಯಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಯೋಜನೆ ವಿಳಂಬದಿಂದ ರಸ್ತೆಯನ್ನು ಬಳಸುವ ವಾಹನದಾರರಿಗೆ ಸಮಸ್ಯೆ ಉಂಟಾಗುತ್ತದೆ ಹಾಗೂ ಯೋಜನೆಯ ವೆಚ್ಚ ಹೆಚ್ಚಾಗಲಿದೆ. ಆದ್ದರಿಂದ ಬಿಬಿಎಂಪಿಯ ಅರ್ಜಿಯನ್ನು ಪುರಸ್ಕರಿಸಿ ಇಳಿಜಾರಿನ ಪ್ರಮಾಣವನ್ನು ಶೆ.6.66ಕ್ಕೆ ಹೆಚ್ಚಿಸುವ ಮೂಲಕ ಬಾಕಿ ಉಳಿದಿರುವ ಮೇಲ್ಸೇತುವೆಯ ಶೇ.10ರಷ್ಟು ಕಾಮಗಾರಿ ಪೂರ್ಣಗೊಳಿಸಲು ಅನುಮತಿ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ ಏನು?
Recommended Video
ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿ ರಾಜ್ಯ ಸರ್ಕಾರ 2017ರ ಜೂ.25ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಕುಮಾರ ಪಾರ್ಕ್ ಪೂರ್ವ ಭಾಗದ ನಿವಾಸಿ ಬಿ.ಪಿ. ಮಹೇಶ್ ಹಾಗೂ ಇತರರು 2017ರ ಅಕ್ಟೋಬರ್ನಲ್ಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಾಮಗಾರಿಗೆ ತಡೆ ನೀಡಲು 2021ರ ಜ.8ರಂದು ಹೈಕೋರ್ಟ್ ನಿರಾಕರಿಸಿತ್ತು. ಅದರಂತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. 2022ರ ಜ.13ರಂದು ಬಿಬಿಎಂಪಿ ಆಯುಕ್ತರು ಮತ್ತು ಕಾರ್ಯಕಾರಿ ಎಂಜಿನಿಯರ್ (ಪ್ರಾಜೆಕ್ಟ್ ಸೆಂಟರ್-2) ಮಧ್ಯಂತರ ಅರ್ಜಿ ಸಲ್ಲಿಸಿ, ಶೇಷಾದ್ರಿಪುರ ಕಡೆಯ ಮೇಲ್ಸೇತುವೆ ಇಳಿಜಾರಿನ ಪ್ರಮಾಣವನ್ನು ಶೇ.6.66ರಷ್ಟು ಹೆಚ್ಚಿಸಲು ಅನುಮತಿ ನೀಡುವಂತೆ ಕೋರಿದ್ದರು.











Click it and Unblock the Notifications