ಕೋರ್ಟ್ ಆದೇಶ ಉಲ್ಲಂಘಿಸಿ ಕ್ವಾರಿಯಲ್ಲಿ ಕಸ: ಬಿಬಿಎಂಪಿ ಆಯುಕ್ತರಿಗೆ ಖಡಕ್ ಎಚ್ಚರಿಕೆ
ಬೆಂಗಳೂರು, ಮಾರ್ಚ್ 06: ನ್ಯಾಯಾಲಯದ ನಿರ್ಬಂಧ ಆದೇಶ ಉಲ್ಲಂಘಿಸಿ ಮಿಟ್ಟಗಾನಹಳ್ಳಿ ಕ್ವಾರಿ ಪ್ರದೇಶದಲ್ಲಿ ಘನತ್ಯಾಜ್ಯವನ್ನು ಸುರಿಯುತ್ತಿರುವ ಸಂಭಂಧ ಹೈಕೋರ್ಟ್ ಶನಿವಾರ ಬಿಬಿಎಂಪಿ ಮುಖ್ಯ ಆಯುಕ್ತರನ್ನು ಮತ್ತೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
ಅಲ್ಲದೆ, ಬಿಬಿಎಂಪಿ ಪದೇ ಪದೇ ಕೋರ್ಟ್ ಆದೇಶ ಉಲ್ಲಂಘಿಸಿದೆ. ಬಿಬಿಎಂಪಿ ಆಯುಕ್ತರನ್ನು ಜೈಲಿಗೆ ಕಳುಹಿಸುತ್ತೇವೆ,ಹೈಕೋರ್ಟ್ ಆದೇಶ ಎಂದರೇನೆಂದು ಅರ್ಥ ಮಾಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದೆ.
ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಮಪರ್ಕವಾಗಿ ವಿಲೇವಾರಿ ಮಾಡಲು ಬಿಬಿಎಂಪಿ ವಿಫಲವಾಗಿದೆ ಎಂದು ತಿಳಿಸಿ 2012ರಲ್ಲಿ ಸಲ್ಲಿಸಲಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಕಳೆದ ಫೆ.15ರಂದು ಆಯುಕ್ತರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೆಂಡಕಾರಿ ಮಾ.5ರಂದು ಆಯುಕ್ತರ ಖುದ್ದು ಹಾಜರಾತಿಗೆ ಸೂಚಿಸಿತ್ತು.

ಅದರಂತೆ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹಾಜರಾಗಿದ್ದರು. ಆಗ ನ್ಯಾಯಪೀಠ ಖಾರವಾದ ಮಾತುಗಳಲ್ಲಿ ಪ್ರಶ್ನಿಸಿತು.
"ಕಾನೂನು ಎಂದರೇನೆಂದು ಆಯುಕ್ತರಿಗೆ ನಾವೇ ಮನವರಿಕೆ ಮಾಡಿಸುತ್ತೇವೆ, ಬಿಬಿಎಂಪಿ ಆಯುಕ್ತರ ನಡೆ ಗಮನಿಸುತ್ತಿದ್ದೇವೆ, ಪ್ರತಿದಿನ ಬಿಬಿಎಂಪಿಯದ್ದೇ ಸಮಸ್ಯೆ, ಈ ಬಿಬಿಎಂಪಿಯಿಂದ ಸಾಕಾಗಿಹೋಗಿದೆ. ಬಿಬಿಎಂಪಿಯವರು ಕಾನೂನಿಗಿಂತ ಅತೀಥರೆಂದು ಭಾವಿಸಿದ್ದಾರೆ. ಈ ಅಧಿಕಾರಿಗಳಿಗೆ ಸರಿಯಾದ ಸಂದೇಶ ರವಾನಿಸಬೇಕಿದೆ. ಪದೇ ಪದೇ ಕರುಣೆ ತೋರಲು ಇದು ಅರ್ಹ ಪ್ರಕರಣವಲ್ಲ. ಯಾವುದೇ ಕಾನೂನು ಇವರನ್ನು ರಕ್ಷಿಸಲು ಸಾಧ್ಯವಿಲ್ಲ'' ಎಂದು ನ್ಯಾಯಪೀಠ ಖಡಕ್ ಆಗಿ ಹೇಳಿತು.

ಆಯುಕ್ತರ ಕ್ಷಮೆ ಯಾಚನೆ: ಮುಖ್ಯ ಆಯುಕ್ತ ಗೌರವ್ ಗುಪ್ತ ಬೇಷರತ್ ಕ್ಷಮೆ ಯಾಚಿಸಿದರು. ಇನ್ನು ಮುಂದೆ ಪಾಲಿಕೆಯಿಂದ ತಪ್ಪುಗಳಾಗುವುದಿಲ್ಲ ಎಂದು ಮನವಿ ಮಾಡಿದರು.
ಆಗ ಪಾಲಿಕೆ ಪರ ವಾದಿಸಿದ ಹಿರಿಯ ನ್ಯಾಯವಾದಿ, ಈಗ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದೆ. ಹಾಗಾಗಿ ಇದೊಂದು ಬಾರಿ ಕರುಣೆ ತೋರಲು ಮನವಿ ಸಲ್ಲಿಸಿದರು.
ಆ ಮನವಿಗೆ ಒಪ್ಪಿದ ನ್ಯಾಯಪೀಠ, ಆದರೆ ಬಿಬಿಎಂಪಿ ಮುಖ್ಯ ಆಯುಕ್ತರು ತಮ್ಮ ನಡವಳಿಕೆಗೆ ಕಾರಣ ವಿವರಿಸಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಕಳೆದ ಫೆ.15ರ ವಿಚಾರಣೆ ವೇಳೆ ನ್ಯಾಯಾಲಯ, ಪಾಲಿಕೆ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಗುಡುಗಿ ಮಾ.೫ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ತಾಕೀತು ಮಾಡಿದೆ. ಅಲ್ಲದೆ, ಬಿಬಿಎಂಪಿ ಅಧಿಕಾರಿಗಳನ್ನು ನ್ಯಾಯಾಲಯದ ಅಂಗಳದಿಂದಲೇ ಜೈಲಿಗೆ ಕಳುಹಿಸಲಾಗುವುದು. ಜೈಲಿಗೆ ಹೋಗಲು ಗಂಟು ಮೂಟೆ ಕಟ್ಟಿಕೊಂಡು ಸಿದ್ಧವಾಗಿ ಬರುವಂತೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ನ್ಯಾಯಾಲಯ ಮೌಖಿಕವಾಗಿ ತಿಳಿಸಿತು.
ಪ್ರಕರಣದ ಹಿನ್ನೆಲೆ:
ಅರ್ಜಿದಾರರ ಪರ ವಕೀಲರು, ಮಿಟ್ಟಗಾನಹಳ್ಳಿ ಕ್ವಾರಿ ಪ್ರದೇಶದಲ್ಲಿ ನಗರದಲ್ಲಿ ಉತ್ಪತ್ತಿಯಾಗುವ ಕಸ ಸುರಿಯುವುದರಿಂದ ಬಿಬಿಎಂಪಿಯನ್ನು ನಿರ್ಬಂಧಿಸಿ 2021ರ ಮಾ.6ರಂದು ಹೈಕೋರ್ಟ್ ಆದೇಶಿಸಿತ್ತು. ಆದರೂ ನ್ಯಾಯಾಲಯದ ಆದೇಶದ ನಂತರವೂ ಮಿಟ್ಟಗಾನಹಳ್ಳಿಯಲ್ಲಿ ಕ್ವಾರಿ ಪ್ರದೇಶಲ್ಲಿ ಕಸ ಸುರಿಯಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ಕೆಎಸ್ಪಿಸಿಬಿ ಪರ ವಕೀಲರು, ತ್ಯಾಜ್ಯ ಸುರಿಯಲು ಮಂಡಳಿಯಿಂದ ಪಾಲಿಕೆಗೆ ಯಾವುದೇ ರೀತಿಯ ಅನುಮತಿ ನೀಡಿಲ್ಲ ಎಂದು ಇದೇ ವೇಳೆ ನ್ಯಾಯಪೀಠಕ್ಕೆ ಸ್ಪಷ್ಟಪಸಿದ್ದರು.
ಮತ್ತೊಂದೆಡೆ ಪ್ರಕರಣ ಸಂಬಂಧ ಸ್ವತಃ ಬಿಬಿಎಂಪಿಯೇ 2021ರ ನ.29ರಂದು ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯವನ್ನು ಮಿಟ್ಟಗಾನಹಳ್ಳಿ ಕ್ವಾರಿ ಪ್ರದೇಶದಲ್ಲಿ ಸುರಿಯಲಾಗುತ್ತಿದೆ ಎಂದು ಹೇಳಿತ್ತು.
ಇದರಿಂದ ತೀವ್ರ ಬೇಸರಗೊಂಡ ನ್ಯಾಯಪೀಠ, ಮಾ.6ರ ನ್ಯಾಯಾಲಯ ನೀಡಿರುವ ಆದೇಶವನ್ನು ಬಿಬಿಎಂಪಿ ಉಲ್ಲಂಘನೆ ಮಾಡಿರುವುದು ಪ್ರಮಾಣ ಪತ್ರದಿಂದ ಸ್ಪಷ್ಟವಾಗಿದೆ. ಇದು ಸಂಪೂರ್ಣವಾಗಿ ನ್ಯಾಯಾಂಗ ನಿಂದನೆಯಾಗಿದೆ. ಯಾರ ಆದೇಶದ ಮೇರೆಗೆ ಕ್ವಾರಿ ಪ್ರದೇಶದಲ್ಲಿ ತ್ಯಾಜ್ಯ ಸುರಿಯಲಾಗಿದೆ? ಎಂದು ಪಾಲಿಕೆ ಪರ ವಕೀಲರನ್ನು ಪ್ರಶ್ನಿಸಿತು.












Click it and Unblock the Notifications