ಸ್ಥಳೀಯ ಚುನಾವಣೆ: ಸರ್ಕಾರಕ್ಕೆ ಹೈಕೋರ್ಟ್ ಡೆಡ್ ಲೈನ್
ಬೆಂಗಳೂರು, ಜೂನ್ 7: ರಾಜ್ಯದ 200ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಕುರಿತಂತೆ ಐದು ದಿನಗಳಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.
ನಗರ ಸ್ಥಳೀಯ ಸಂಸ್ಥೆಗಳಿಗೆ ಕ್ಷೇತ್ರ ಪುನರ್ವಿಂಗಡಣೆ ನೆಪದಲ್ಲಿ ಚುನಾವಣೆಯನ್ನು ಮುಂದೂಡಲು ಪ್ರಯತ್ನಿಸುತ್ತಿರುವ ಸರ್ಕಾರ ನಗರಾಭಿವೃದ್ಧಿ ಸದಸ್ಯರು ಇಲ್ಲದ ಕಾರಣ ಮೂರು ವಾರಗಳ ಕಾಲಾವಕಾಶವನ್ನು ನೀಡುವಂತೆ ಕೋರಿತು.
ಆದರೆ ಇದನ್ನು ಸ್ಪಷ್ಟವಾಗಿ ತಳ್ಳಿ ಹಾಕಿರುವ ಹೈಕೋರ್ಟ್ ಯಾವುದೇ ಕಾರಣಕ್ಕೂ ನಗರ ಸ್ಥಳೀಯ ಸಂಸ್ಥೆಗಳ ಪುನರ್ವಿಂಗಡಣೆ ಕುರಿತಂತೆ ಐದು ದಿನಗಳಲ್ಲಿ ವರದಿ ಸಲ್ಲಿಸಿ ಎಂದು ತಾಕೀತು ಮಾಡಿತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಮುಂದಿನ ಮೂರು ತಿಂಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳಿಗೆ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯಬಹುದಾಗಿದೆ.
ಬುಧವಾರ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಜೆಡಿಎಸ್ನಿಂದ 8 ಮಂದಿ ಶಾಸಕರು, ಕಾಂಗ್ರೆಸ್ನಿಂದ 16 ಶಾಸಕರು ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.