ಬಿಸಿಯೂಟ ನೌಕರರ ಸಮಸ್ಯೆ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಮಾರ್ಚ್ 21: ಬಿಸಿಯೂಟ ತಯಾರು ಮಾಡುವ ಕಾರ್ಯಕರ್ತೆಯರಿಗೆ ಸೂಕ್ತ ವೇತನ ಮತ್ತು ಇನ್ನಿತರೆ ಸೌಲಭ್ಯ ಕಲ್ಪಿಸಿಕೊಡುವ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದೆ.
ಈ ಸಂಬಂಧ ನೂತನವಾಗಿ ರಚನೆಯಾಗಿರುವ ಎಂಇಪಿ ಪಕ್ಷದ ವತಿಯಿಂದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿ ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾ.ಬಿ.ಎಂ. ಶ್ಯಾಮಪ್ರಸಾದ್ ಅವರನ್ನೊಳಗೊಂಡ ನ್ಯಾಯಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಿಸಿಯೂಟ ಕಾರ್ಯಕರ್ತೆಯರ ನ್ಯಾಯ ಸಮ್ಮತವಾದ ಬೇಡಿಕೆ ಈಡೇರಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಏ.4ಕ್ಕೆ ಮುಂದೂಡಿದೆ.

ಏಮಿದು ಪ್ರಕರಣ: ಸುಮಾರು ಒಂದು ತಿಂಗಳ ಹಿಂದೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ಕೈಗೊಂಡಿದ್ದರು., ಈ ವೇಳೆ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಆಲ್ ಇಂಡಿಯಾ ಮಹಿಳಾ ಎಂಪವರ್ ಮೆಂಟ್ ಪಾರ್ಟಿಯ ಅಧ್ಯಕ್ಷೆ ಡಾ. ನೌಹೀರಾ ಶೇಕ್ ಅವರು ಬಿಸಿಯೂಟ ಕಾರ್ಯಕರ್ತೆಯರ ಕುಂದು-ಕೊರತೆಗಳನ್ನು ಕೇಳಿ ಸಮಾಧಾನಪಡಿಸಿದ್ದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಜತೆಗೆ ಕೋರ್ಟ್ ಮೂಲಕವೇ ಅವರಿಗೆ ಸಲ್ಲಬೇಕಾದ ನ್ಯಾಯಬದ್ಧ ವೇತನ ಮತ್ತು ಇನ್ನಿತರೆ ಮೂಲಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಭರವಸೆ ನೀಡಿದ್ದರು. ಎಂಇಪಿ ಪರವಾಗಿ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ವಿಚಾರಣೆಗೆ ಅಂಗೀಕರಿಸಿ ಸಾಧ್ಯವಾದಷ್ಟು ಬೇಗ ಇವರ ಸಮಸ್ಯೆಗಳನ್ನು ಪರಿಹಾರ ಮಾಡಿ ಎಂದು ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿರುವುದಕ್ಕೆ ಡಾ. ನೌಹೀರಾ ಶೇಖ್ ಹರ್ಷ ವ್ಯಕ್ತಪಡಿಸಿದ್ದಾರೆ.












Click it and Unblock the Notifications