ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧವಿಲ್ಲ
ಬೆಂಗಳೂರು, ಡಿಸೆಂಬರ್ 29: ಬೆಂಗಳೂರು ನಗರ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ತಯಾರಿ ಮಾಡಿಕೊಳ್ಳುತ್ತಿದೆ. ನಗರದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಬೇಕು ಎಂದು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಾನ್ಯ ಮಾಡಿಲ್ಲ.
ಡಿಸೆಂಬರ್ 31ರಂದು ಬೆಂಗಳೂರಿನ ಎಂ. ಜಿ. ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯಲ್ ಸ್ಟ್ರೀಟ್ಗಳಲ್ಲಿ ಹೊಸ ವರ್ಷಾಚರಣೆ ಎಂದಿನಂತೆ ಆಭಾದಿತವಾಗಿ ನಡೆಯಲಿದೆ. ಏಕೆಂದರೆ ಹೊಸ ವರ್ಷಾಚರಣೆಗೆ ನಿರ್ಬಂಧವಿಲ್ಲ ಎಂದು ಕೋರ್ಟ್ ಹೇಳಿದೆ.

ಕೋವಿಡ್ ರೂಪಾಂತರಿ ಜೆ.ಎನ್.1 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾ ನಗರದಲ್ಲಿನ ಕೆಲವು ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಬೇಕು ಎಂದು ಕೋರಿದ್ದ ಮನವಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.
ಅರ್ಜಿಯ ವಾದವೇನು?; ಹೈಕೋರ್ಟ್ ವಕೀಲ ಎನ್. ಪಿ. ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಆರ್. ನಟರಾಜ್ ನೇತೃತ್ವದ ರಜಾಕಾಲದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಕೀಲ ಎನ್. ಪಿ. ಅಮೃತೇಶ್, "ರಾಜ್ಯದ ವಿವಿಧೆಡೆ ಕೋವಿಡ್ ರೂಪಾಂತರ ಸೋಂಕು ಪುನಃ ಹರಡುತ್ತಿರುವ ಬಗ್ಗೆ ವರದಿಗಳಿವೆ. ಹಾಗಾಗಿ, ಬೆಂಗಳೂರಿನ ಎಂ. ಜಿ. ರಸ್ತೆ, ಬ್ರಿಗೇಡ್ ರಸ್ತೆ, ಕಮರ್ಷಿಯಲ್ ಸ್ರ್ಟೀಟ್ ಹಾಗೂ ಇತರೆಡೆ ಹೊಸ ವರ್ಷಾಚರಣೆಗೆ ಹೆಚ್ಚಿನ ಜನ ಸೇರುವುದನ್ನು ತಡೆಯಬೇಕಿದೆ. ಇಂತಹ ಜಮಾವಣೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಸಾಧ್ಯವಿಲ್ಲ. ಆದ್ದರಿಂದ, ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆ ನಿರ್ಬಂಧಿಸುವಂತೆ ನಿರ್ದೇಶಿಸಬೇಕು" ಎಂದು ಕೋರಿದ್ದರು.
ಸರ್ಕಾರದ ಪರ ವಕೀಲರು, "ಸರ್ಕಾರ ಈ ನಿಟ್ಟಿನಲ್ಲಿ ಈಗಾಗಲೇ ಸರಣಿ ಸಭೆ ನಡೆಸಿದೆ. ಇನ್ನೂ ಆಖೈರು ತೀರ್ಮಾನ ಕೈಗೊಂಡಿಲ್ಲ. ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಕಾನೂನು ಶಾಂತಿ ಪಾಲನೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಸಿದ್ಧವಿದೆ" ಎಂದು ಉತ್ತರಿಸಿದರು.
ಕೋವಿಡ್ ತಡೆಯಲು ಹೊಸ ವರ್ಷಾಚರಣೆ ನಿರ್ಬಂಧಿಸಬೇಕಾಗುತ್ತದೆ. ರಾಜ್ಯದಲ್ಲೂ ಕೋವಿಡ್ ಹರಡುವ ಭೀತಿ ಎದುರಾಗಿದೆ. ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ ನೀಡಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಆದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, "ಒಂದು ವೇಳೆ ಬೆಂಗಳೂರಿನಲ್ಲಿ ನಿರ್ಬಂಧಿಸಿದರೆ ಸಂಭ್ರಮಿಸುವ ಜನರು ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಆದಾಗ್ಯೂ, ಸದ್ಯಕ್ಕೆ ಕೋವಿಡ್ಗೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ" ಎಂಬ ಅಭಿಪ್ರಾಯಪಟ್ಟು ವಿಚಾರಣೆಯನ್ನು 2024ರ ಜನವರಿ ತಿಂಗಳಿಗೆ ಮುಂದೂಡಲಾಗಿದೆ.












Click it and Unblock the Notifications