ಉಕ್ರೇನ್ನಿಂದ ಬಂದ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಿ; ಸರ್ಕಾರಕ್ಕೆ ಎಚ್ಡಿಕೆ ಆಗ್ರಹ
ಬೆಂಗಳೂರು, ಮಾರ್ಚ್ 7: ರಷ್ಯಾದ ಸೇನಾ ದಾಳಿಗೆ ತತ್ತರಿಸಿರುವ ಉಕ್ರೇನ್ ದೇಶದಿಂದ ಭಾರತಕ್ಕೆ ವಾಪಸ್ ಬಂದು ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲ ವಿದ್ಯಾರ್ಥಿಗಳ ನೆರವಿಗೆ ಕೇಂದ್ರ ಸರಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.
ಅಲ್ಲದೆ, ಜೀವ ಉಳಿಸಿಕೊಂಡು ಕರ್ನಾಟಕ ರಾಜ್ಯಕ್ಕೂ ವಾಪಸ್ ಬಂದಿರುವ ಎಲ್ಲ ವಿದ್ಯಾರ್ಥಿಗಳಿಗೂ ರಾಜ್ಯ ಸರಕಾರ ಮಾನವೀಯ ದೃಷ್ಟಿಯಿಂದ ಉಚಿತ ವೈದ್ಯ ಶಿಕ್ಷಣ ನೀಡಬೇಕು ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಯಾರ ಜತೆಯೂ ಚುನಾವಣೆ ಮೈತ್ರಿ ಇಲ್ಲ: ಎಚ್ಡಿ ಕುಮಾರಸ್ವಾಮಿ
ಈ ಬಗ್ಗೆ ಸೋಮವಾರ ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೆಲ ಮಹತ್ವದ ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ.
"ಆಪರೇಷನ್ ಗಂಗಾ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ನಿಂದ ವಿದ್ಯಾರ್ಥಿಗಳನ್ನು ಏರ್ಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿಶ್ವ ವಿದ್ಯಾಲಯಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ," ಎಂದು ಮಾಧ್ಯಮಗಳೇ ತೋರಿಸುತ್ತಿವೆ ಎಂದು ತಿಳಿಸಿದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ನೀಟ್ ವಿರುದ್ಧ ನಿರ್ಣಯ; ಎಚ್ಡಿಕೆ
"ಕರ್ನಾಟಕದ 800ರಿಂದ 1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಸಿಲುಕಿಕೊಂಡಿದ್ದಾದ್ದು, ಅವರೂ ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ," ಎಂದು ಎಚ್.ಡಿ. ಕುಮಾರಸ್ವಾಮಿ ಉಲ್ಲೇಖಿಸಿದ್ದರೆ.
"ಯುದ್ಧ ಭೂಮಿಯಿಂದ ಜೀವ ಉಳಿಸಿಕೊಂಡು ಬಂದ ಭಾರತೀಯ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯವಾಗಿದೆ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ," ಎಂದು ಎಚ್ಡಿಕೆ ಆಗ್ರಹಿಸಿದರು.
2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್ ಮೂಲಕ ಶೇ.50ರಷ್ಟು ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ ಎನ್ನುವುದು ನನ್ನ ಅಭಿಪ್ರಾಯವೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ʼವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ಹಣದ ಮೂಲಕ ಶಿಕ್ಷಣಕ್ಕೆ ಬೆಲೆ ಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ. ಕೇಂದ್ರ- ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
Recommended Video