ಎಚ್.ಡಿ. ಕುಮಾರಸ್ವಾಮಿ ಯೋಜನೆಗಳನ್ನು ಹೈಜಾಕ್ ಮಾಡಿದ ಪ್ರಧಾನಿ ಮೋದಿ?
ಬೆಂಗಳೂರು, ನ. 02: ಆತ್ಮ್ನಿರ್ಭರ್ ಭಾರತ್ ಯೋಜನೆ ಮೂಲತಃ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾಸಸ್ವಾಮಿ ಅವರ ಚಿಂತನೆಯಾ? ಹೌದು ಎನ್ನುತ್ತಾರೆ ಮಾಜಿ ಸಿಎಂ ಎಚ್ಡಿಕೆ ಅವರು. ಅದಕ್ಕೆ ಸೂಕ್ತ ದಾಖಲೆಯನ್ನೂ ಅವರು ಕೊಟ್ಟಿದ್ದಾರೆ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಜಾರಿಗೆ ತಂದಿದ್ದ ಯೋಜನೆಯನ್ನೇ ಪ್ರಧಾನಿ ಮೋದಿ ಅವರು ತಮ್ಮ ಯೋಜನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆಂದು ಕುಮಾರಸ್ವಾಮಿ ಹೇಳಿದ್ದಾರೆ.
ಈ ಹಿಂದೆ ಮೈತ್ರಿ ಸರ್ಕಾರ ಜಾರಿಗೆ ತಂದಿದ್ದ 'ಕಾಂಪೀಟ್ ವಿತ್ ಚೀನಾ' ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ಕಾಪಿ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಅದರಂತೆ ಕೇವಲ ಯೋಜನೆ ಹೆಸರನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿರುವುದು ಬಹಿರಂಗವಾಗಿತ್ತು.
ಶಿರಾದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಮಾಜಿ ಸಿಎಂ ಕುಮಾರಸ್ವಾಮಿ!
ನನ್ನ ಸರಕಾರದಲ್ಲಿ ಜಾರಿಗೆ ತಂದ ಯೋಜನೆಗಳನ್ನೇ ಹೈಜಾಕ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವುಗಳನ್ನು ತಮ್ಮ ಸ್ವಂತ ಯೋಜನೆಗಳು ಎಂಬಂತೆ ಈಗ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಉಪ ಚುನಾವಣೆಯ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಇದೀಗ ಎರಡನೇ ಬಾರಿ ಯೋಜನೆ ಹೈಜಾಕ್ ಆರೋಪವನ್ನು ಕುಮಾರಸ್ವಾಮಿ ಮಾಡಿದ್ದಾರೆ.
ಬಂಡವರ ಬಂಧು ಕಾಪಿ ಮಾಡಿದ ಮೋದಿ
ಪೀಣ್ಯದಲ್ಲಿ ಕೈಗಾರಿಕೋದ್ಯಮಿಗಳ ಸಭೆ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ನಾನು 9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸುವುದಕ್ಕೆ ಉತ್ತೇಜನ ನೀಡಿದೆ. ಅದನ್ನೇ ಈಗ ಮೋದಿ ಅವರು ಆತ್ಮನಿರ್ಭರ ಭಾರತ ಎಂದು ಹೇಳುತ್ತಿದ್ದಾರೆ.
ಬೀದಿ ಬದಿ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ನೀಡಲು ಬಡವರ ಬಂಧು ಯೋಜನೆ ಜಾರಿಗೆ ತಂದಿದ್ದೆ, ಈಗ ಮೋದಿ ಅವರು 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಬಡವರ ಬಂಧು ಯೋಜನೆಯನ್ನೇ ಅವರು ಕಾಪಿ ಮಾಡಿದ್ದಾರೆ ಎಂದು ಎಚ್ಡಿಕೆ ಹೇಳಿದ್ದಾರೆ.
ನಮ್ಮ ದೇಶವನ್ನು ಬಾಂಗ್ಲಾದೇಶ, ವಿಯಾಟ್ನಾಂ ಜೊತೆ ಪೈಪೋಟಿ ನಡೆಸುವ ಹಂತಕ್ಕೆ ಪ್ರಧಾನಿ ಮೋದಿ ಅವರು ತಂದು ನಿಲ್ಲಿಸಿದ್ದಾರೆ ಎಂದು ಅವರು ಆರೋಪಿಸಿದರು.
ನಮ್ಮ ಸರ್ಕಾರ ಆರಂಭಿಸಿದ್ದ ಯೋಜನೆಗಳು
ಜೆಡಿಎಸ್ ಕೇವಲ ಕೃಷಿಕರಿಗಾಗಿ ಇರುವ ಪಕ್ಷ ಅಲ್ಲ, ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕೊಡುಗೆ ನೀಡಿದೆ. ಅದರಲ್ಲೂ ಬೆಂಗಳೂರಿನ ಪ್ರಗತಿಗೆ ನಮ್ಮ ಪಕ್ಷದ ಕೊಡುಗೆ ಅಪಾರ. ನಮ್ಮ ಮೆಟ್ರೋ, ಎಲಿವೇಟೆಡ್ ಕಾರಿಡಾರ್ನಂತಹ ಅನೇಕ ಯೋಜನೆಗಳನ್ನು ಪ್ರಾರಂಭಿಸಿದ್ದು ನನ್ನ ಸರಕಾರದಲ್ಲಿ ಎಂದ ಅವರು, ಬೆಂಗಳೂರಿಗೆ ಕಾವೇರಿ ನೀರು ಸಿಗಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾರಣ ಎಂದು ಹೇಳಿದರು.
ಸಮ್ಮಿಶ್ರ ಸರಕಾರದ ಶಾಕಿಂಗ್ ಘಟನೆಯನ್ನು ಬಹಿರಂಗಗೊಳಿಸಿದ ಕುಮಾರಸ್ವಾಮಿ
ಯಡಿಯೂರಪ್ಪ ಈಡೇರಿಸಿದ್ದು ಇವರ ಬೇಡಿಕೆ!
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 6.5 ಕೋಟಿ ಕನ್ನಡಿಗರ ಭರವಸೆಯ್ನು ಈಡೇರಿಸಿಲ್ಲ. ಬದಲಾಗಿ ಅವರನ್ನು ಸಿಎಂ ಮಾಡಲು ಬೆಂಬಲ ನೀಡಿದ 17 ಶಾಸಕರ ಭರವಸೆ ಮಾತ್ರ ಈಡೇರಿಸಿದ್ದಾರೆ.
ಬಿಜೆಪಿ ಪಕ್ಷ ಎರಡು ಕ್ಷೇತ್ರಗಳಲ್ಲಿ ಆರ್ಭಟದ ಪ್ರಚಾರ ನಡೆಸುತ್ತಿದೆ. ಆದರೆ, ಅಲ್ಲಿಗೆ ಬರುತ್ತಿರುವ ಯಾರು ಸ್ಥಳೀಯರಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಈಗಾಗಲೇ ಎರಡು ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ ಎಂದು ಸಿಎಂ ಹೇಳುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ ಎಂದು ಎಚ್ಡಿಕೆ ಹೇಳಿದ್ದಾರೆ.
ಸೀರೆ ಹಂಚುವ ಪ್ರಮೇಯ ಬರುತ್ತಿರಲಿಲ್ಲ
ಇನ್ನು, ರಾಜರಾಜೇಶ್ವರಿ ನಗರದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಬಿಟ್ಟು ಪ್ರಾದೇಶಿಕ ಪಕ್ಷಕ್ಕೆ ಅವಕಾಶ ನೀಡುವ ಅಲೆ ಕಾಣುತ್ತಾ ಇದೆ. ರಸ್ತೆಯಲ್ಲಿ ಪಟಾಕಿ ಹೊಡೆಯದೇ, ಅಬ್ಬರದ ಪ್ರಚಾರ ಮಾಡದೇ ಆತ್ಮೀಯವಾಗಿ ಜನರನ್ನು ಭೇಟಿ ನೀಡಿ ಮತ ಕೇಳಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಇನ್ನು, ಈಗಾಗಲೇ ಸೀರೆ ಹಂಚುವ ಕಾರ್ಯಕ್ರಮ ಶುರು ಮಾಡಿದ್ದಾರೆ. ಇವರು ನ್ಯಾಯವಾಗಿ ಕೆಲಸ ಮಾಡಿದ್ದರೆ ಸೀರೆ, ಹಣ ಹಂಚಿ ಮತ ಕೇಳುವ ಪ್ರಮೇಯವೇ ಬರುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
Recommended Video