ಕೇಂದ್ರದ ಚಂದಮಾಮನನ್ನು ತೋರಿಸಿ'ಅನರ್ಹ ಸರ್ಕಾರ' ರಚಿಸಿದ್ದಾರೆ:ಎಚ್ಡಿಕೆ
ಬೆಂಗಳೂರು, ಜನವರಿ 2: ಕೇಂದ್ರದ ಚಂದಮಾಮನನ್ನು ತೋರಿಸಿ 'ಅನರ್ಹ ಸರ್ಕಾರ' ರಚಿಸಿಕೊಂಡ ಬಿಎಸ್ ಯಡಿಯೂರಪ್ಪ ಸರ್ಕಾರ ರಚಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಮೋದಿ ಹಾಗೂ ಯಡಿಯೂರಪ್ಪ ಅವರಿಗೆ ಕೆಲವು ಪ್ರಶ್ನೆಗಳನ್ನು ಕುಮಾರಸ್ವಾಮಿ ಕೇಳಿದ್ದಾರೆ.
ರಾಜ್ಯದಿಂದ 25 ಸಂಸದರನ್ನು ಪಡೆದಿರುವ ಮೋದಿಯವರು,ಕೇಂದ್ರದ ಚಂದಮಾಮನನ್ನು ತೋರಿಸಿ 'ಅನರ್ಹ ಸರ್ಕಾರ' ರಚಿಸಿಕೊಂಡ ಬಿಎಸ್ವೈ ಅವರು ಶಿವಕುಮಾರ ಸ್ವಾಮೀಜಿಗಳು ಐಕ್ಯರಾಗಿರುವ ತುಮಕೂರಿನ ನೆಲದಲ್ಲಿ ನಿಂತು ಇವೆಲ್ಲಕ್ಕೂ ಉತ್ತರ ಕೊಡುವರೇ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸಿದ ಮರುದಿನ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದಿದ್ದರು ಆದರೀಗ ಪರಿಸ್ಥಿತಿ ವಿಷಮವಾಗಿದೆ.ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬರ ಪರಿಹಾರ,ಅನುದಾನ, ತೆರಿಗೆ ಹಂಚಿಕೆಗಳನ್ನು ದಿಟ್ಟತನದಿಂದ ಕೇಳುವ ಶಕ್ತಿ ಬಿಎಸ್ವೈ ಅವರಿಗಿಲ್ಲ.ನ್ಯಾಯವಾಗಿ ಬರಬೇಕಾದ್ದನ್ನು ಪಡೆಯಲಾಗದ ಬಿಎಸ್ವೈ ಅವರು ದುರ್ಬಲ ಸಿಎಂ ಎಂದು ದೂರಿದರು.
ತೆರಿಗೆಯಲ್ಲಿ ರಾಜ್ಯಕ್ಕೆ ನೀಡಬೇಕಾದ ಪಾಲನ್ನೂ ಕೇಂದ್ರ ವಂಚಿಸಿದೆ. ರಾಜ್ಯಕ್ಕೆ ಬರಬೇಕಿದ್ದ ಪಾಲಿನಲ್ಲಿ 5.44% ರಷ್ಟು ಇನ್ನೂ ಬಂದಿಲ್ಲ. ಇದು ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ. ಲೋಕಸಭೆ ಸ್ಥಾನಗಳ ಮೇಲೆ ಮಾತ್ರ ಕಣ್ಣಿಡುವ ಕೇಂದ್ರ ಇಲ್ಲಿನ ಬೇಕು ಬೇಡಗಳನ್ನು ನಿರ್ಲಕ್ಷಿಸುತ್ತದೆ. ಮೋದಿ ಈ ಬಗ್ಗೆ ಇಂದು ಮಾತಾಡಲಿ ಎಂದು ಸವಾಲೆಸೆದರು.
ರಾಜ್ಯದ ಖಜಾನೆ ಖಾಲಿಯಾಗಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಮುದ್ರಾಂಕ ಮತ್ತು ನೋಂದಣಿ, ಮೋಟಾರು ವಾಹನ ಕ್ಷೇತ್ರ, ವಾಣಿಜ್ಯ ತೆರಿಗೆ ಬಹುದೊಡ್ಡ ಆದಾಯದ ಮೂಲವಾದರೂ ಅವುಗಳಿಂದ ಸಂಪನ್ಮೂಲ ಬಂದಿಲ್ಲ. ಕಾರಣವೇನು? ಕೇಂದ್ರದ ಕೆಟ್ಟ ಆರ್ಥಿಕ ನೀತಿ.ಜಿಡಿಪಿ,ದೇಶದ ಅಭಿವೃದ್ಧಿ ನುಂಗಿದ ಕೇಂದ್ರದ ನೀತಿಗಳು ಈಗ ರಾಜ್ಯದ ಮೇಲೂ ಪರಿಣಾಮ ಬೀರಿದೆ.












Click it and Unblock the Notifications