ರೈತರ ಪರ ಸರ್ಕಾರವನ್ನು ತಿವಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಆಗಸ್ಟ್.09: ಮುಂಗಾರು ಮಳೆಯಿಂದ ತತ್ತರಿಸಿರುವ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವಾಗ ರಾಷ್ಟ್ರೀಯ ಮತ್ತು ರಾಜ್ಯ ಪ್ರಕೃತಿ ವಿಕೋಪ ನಿಧಿಯ ಮಾರ್ಗಸೂಚಿಗಳಿಗೆ ಜೋತುಬೀಳದೆ ಸರ್ಕಾರ ರೈತರಿಗೆ ಹೆಚ್ಚಿನ ಪರಿಹಾರ ತಕ್ಷಣವೇ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸತತ ಮೂರನೇ ವರ್ಷ ಅತಿವೃಷ್ಟಿಗೆ ಸಿಲುಕಿರುವ ರಾಜ್ಯದ ರೈತರು ಈ ಬಾರಿಯೂ ಮಳೆಯ ಅನಾಹುತ ತಡೆದುಕೊಳ್ಳುವ ಶಕ್ತಿ ಇಲ್ಲದೆ ಬಸವಳಿದಿದ್ದಾರೆ. ರಸ್ತೆ, ವಿದ್ಯುತ್ ಸಂಪರ್ಕ ಕಡಿತ ಹಾಗೂ ಮೂಲಭೂತ ಸೌಕರ್ಯಗಳ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಸಮರೋಪಾದಿಯಲ್ಲಿ ಇದನ್ನು ಸರಿಪಡಿಸಲು ತುರ್ತು ಗಮನ ಹರಿಸಬೇಕು.
Recommended Video
ಅತಿವೃಷ್ಟಿ ಪರಿಸ್ಥಿತಿ ನಿರ್ವಹಿಸಲು ಸರ್ಕಾರಕ್ಕೆ ಸಲಹೆ ನೀಡಿದ ಎಚ್ಡಿಕೆ
"ಎರಡು ಬಾರಿ ಹೃದಯ ಚಿಕಿತ್ಸೆಗೊಳಗಾಗಿರುವ ನಾನು ಈ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ರಾಜ್ಯದಾದ್ಯಂತ ಖುದ್ದು ಪರಿಶೀಲನೆ ಮಾಡುವುದು ವೈದ್ಯರ ಸಲಹೆ ಮೇರೆಗೆ ಬಲು ಕಷ್ಟ. ಆದರೆ ಅತಿವೃಷ್ಟಿಯ ನಷ್ಟದ ಬಗ್ಗೆ ಜಿಲ್ಲಾವಾರು ಮಾಹಿತಿ ಪಡೆದು ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳು ಸೇರಿದಂತೆ ಸರ್ಕಾರಕ್ಕೆ ಮಾಹಿತಿ ಒದಗಿಸುತ್ತೇನೆ" ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ತುರ್ತು ಪರಿಹಾರ ಒದಗಿಸುವಂತೆ ಎಚ್ ಡಿಕೆ ಆಗ್ರಹ:
ನೆರೆ ಸಂತ್ರಸ್ತರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದಾರ ನೆರವು ತಕ್ಷಣವೇ ನೀಡಬೇಕು. ಸಂತ್ರಸ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆತ್ಮವಿಶ್ವಾಸ ಮೂಡಿಸಬೇಕು. ಸಚಿವರು ಮತ್ತು ಅಧಿಕಾರಿಗಳು ಕಾಟಾಚಾರಕ್ಕೆ ಸ್ಥಳ ಪರಿಶೀಲನೆ ಮಾಡಿದರೆ ಉಪಯೋಗವಾಗದು. ನೆರೆ ಸಂತ್ರಸ್ತರ ನೆರವಿಗೆ ಜಿಲ್ಲಾಧಿಕಾರಿಗಳಿಗೆ 5 ಕೋಟಿ ರೂಪಾಯಿ ಒದಗಿಸಿರುವುದು ಏನೇನೂ ಸಾಲದು. ಅತಿವೃಷ್ಟಿಯನ್ನು ಸರ್ಕಾರ ಸವಾಲಾಗಿ ಸ್ವೀಕರಿಸಿ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡುವುದನ್ನೇ ಮೂಲಮಂತ್ರವಾಗಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸರ್ಕಾರವನ್ನು ಕುಟುಕಿದ ಮಾಜಿ ಸಿಎಂ ಕುಮಾರಸ್ವಾಮಿ:
ನೆರೆಹಾವಳಿಯಿಂದ ಕಳೆದ ವರ್ಷ ನಿರ್ವಸತಿಕರಾದವರಿಗೆ 5,00,000 ರೂಪಾಯಿ ಪರಿಹಾರ ಒದಗಿಸುವ ಹಾಗೂ ಮನೆ ಕಟ್ಟಿಸಿಕೊಡುವ ಸರ್ಕಾರದ ಭರವಸೆ ಬಹುಸಂಖ್ಯಾತರಿಗೆ ಅನುಕೂಲವಾಗಲಿಲ್ಲ. ಈ ವರ್ಷವೂ ಮಳೆಯಿಂದ ನಿರಾಶ್ರಿತರಾದವರಿಗೆ ತಕ್ಷಣವೇ ಸೂರು ಒದಗಿಸುವ (ಕಳೆದ ಬಾರಿಯ ನಿರಾಶ್ರಿತರು ಸೇರಿದಂತೆ) ಶಾಶ್ವತ ಯೋಜನೆಯನ್ನು ಸರ್ಕಾರ ಆದ್ಯತೆಯ ಮೇಲೆ ಅನುಷ್ಠಾನ ಮಾಡಬೇಕು. ಸತ್ಯವನ್ನು ಬಹಳ ಕಾಲ ಮರೆಮಾಚಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ಕುಟುಕಿದ್ದಾರೆ.












Click it and Unblock the Notifications